ಲಾಡ್ ವಿರುದ್ಧ ಪ್ರತಿಭಟನೆ, ಬಿಜೆಪಿ ನಾಯಕರ ಬಂಧನ
ಬೆಂಗಳೂರು, ಅ,23 : ಅಕ್ರಮ ಗಣಿಗಾರಿಕೆ ಆರೋಪ ಎದುರಿಸುತ್ತಿರುವ ಸಚಿವ ಸಂತೋಷ್ ಲಾಡ್ ರಾಜೀನಾಮೆಗೆ ಆಗ್ರಹಿಸಿ ಮಂಗಳವಾರ ಬಿಜೆಪಿ ಪ್ರತಿಭಟನೆ ಪ್ರಾರಂಭಿಸಿದೆ. ಫ್ರೀಡಂ ಪಾರ್ಕ್ ನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದ ಬಿಜೆಪಿ ನಾಯಕರನ್ನು ಪೊಲೀಸರು ತಡೆದಿದ್ದು, ವಶಕ್ಕೆ ಪಡೆದಿದ್ದಾರೆ.
ಬುಧವಾರ ಮಧ್ಯಾಹ್ನ ಫ್ರೀಡಂ ಪಾರ್ಕ್ ಬಳಿಯಿಂದ ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದರು. ಇದರಿಂದ ಮೆಜೆಸ್ಟಿಕ್ ನಿಂದ ಕೆ.ಆರ್. ಸರ್ಕಲ್ ವರೆಗಿನ ವಾಹನ ಸಂಚಾರ ಸ್ಥಗಿತಗೊಂಡಿತ್ತು. ರೇಸ್ ಕೋರ್ಸ್ ರಸ್ತೆಯ ಜೆಡಿಎಸ್ ಕಚೇರಿ ಬಳಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದು, ತಮ್ಮ ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನೆ ಉದ್ದೇಶಿಸಿದ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ, ಗಣಿ ಧಣಿಗಳ ಧೂಳಿನಿಂದ ಸರ್ಕಾರ ನಡೆಯುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಕ್ರಮ ಗಣಿಗಾರಿಕೆಯ ಮಣ್ಣನ್ನು ತಮ್ಮ ತಲೆ ಮೇಲೆ ಹಾಕಿಕೊಂಡಿದ್ದಾರೆ ಎಂದು ಆರೋಪಿಸಿದರು.
ಅಕ್ರಮ ಗಣಿಗಾರಿಕೆ ನಡೆಸಿದವರ ಕೃಪಾ ಕಟಾಕ್ಷದಿಂದ ಸರ್ಕಾರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಂತೋಷ್ ಲಾಡ್ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ, ಅವರನ್ನು ಸಂಪುಟದಿಂದ ವಜಾಗೊಳಿಸುತ್ತಿಲ್ಲ ಎಂದು ದೂರಿದರು.
ಬಿಜೆಪಿ ಸರ್ಕಾರವಿದ್ದಾಗ ಬಳ್ಳಾರಿ ವರೆಗೂ ಪಾದಯಾತ್ರೆ ಕೈಗೊಂಡು ನಾವು ಸತ್ಯಹರಿಶ್ಚಂದ್ರರು ಎಂದು ಹೇಳಿದ್ದ ಸಿದ್ದರಾಮಯ್ಯ, ಇಂದು ಅದೇ ಅಕ್ರಮ ಗಣಿಗಾರಿಕೆಯ ಹಣದಿಂದ ಅಧಿಕಾರಕ್ಕೆ ಬಂದಿದ್ದಾರೆ ಎಂದು ಅಶೋಕ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯಪಾಲರು, ಸುಪ್ರೀಂ ಕೋರ್ಟ್ ಸಹ ಸಂತೋಷ್ ಲಾಡ್ ವಿರುದ್ಧ ಕ್ರಮ ಜರುಗಿಸುವುದು ಸೂಕ್ತ ಎಂದು ಹೇಳುತ್ತಿದ್ದಾರೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಪುಟದಿಂದ ಕೈಬಿಡುತ್ತಿಲ್ಲ, ಸಂತೋಷ್ ಲಾಡ್ ರಾಜೀನಾಮೆ ನಿಡುವ ತನಕ ಬಿಜೆಪಿ ಹೋರಾಟ ನಡೆಸಲಿದೆ ಎಂದು ಹೇಳಿದರು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಲಾಡ್ ವಿರುದ್ಧ ಎಸ್.ಆರ್ ಹಿರೇಮಠ್ ಅವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಆದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾಡ್ರನ್ನು ರಕ್ಷಿಸುತ್ತಿದ್ದಾರೆ. ಲಾಡ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಆಶೀರ್ವಾದವಿದೆ ಎಂದು ಹೇಳಿದರು.
ಮಾಜಿ ಸಿಎಂ ಡಿ.ವಿ.ಸದಾನಂದಗೌಡ, ಜಗದೀಶ್ ಶೆಟ್ಟರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನಾಕಾರರನ್ನು ಪೊಲೀಸರು ಕಬ್ಬನ್ ಪಾರ್ಕ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.












Click it and Unblock the Notifications