ಕಾಂಗ್ರೆಸ್ ಸಂಭ್ರಮಾಚರಣೆ ವೇಳೆ ಹೊಸಪೇಟೆ ಬಿಜೆಪಿ ಕಾರ್ಯಕರ್ತನ ಹತ್ಯೆ: ಓರ್ವನ ಬಂಧನ
ಬೆಂಗಳೂರು, ಮೇ. 16: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದೆ. ಇದರ ಹಿನ್ನೆಲೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ವೇಳೆ ಬೆಂಗಳೂರು ಹೊರವಲಯ ಹೊಸಕೋಟೆ ತಾಲೂಕಿನಲ್ಲಿ ವ್ಯಕ್ತಿಯೋರ್ವನನ್ನು ಸಂಬಂಧಿಕರೇ ಕೊಲೆ ಮಾಡಿದ್ದಾರೆ. ಮೃತ ಕೃಷ್ಣಪ್ಪ (56) ಬಿಜೆಪಿಯ ಕಾರ್ಯಕರ್ತ ಎಂದು ಗುರುತಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಬೆಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಡಿ ಶೆಟ್ಟಿಹಳ್ಳಿ ಗ್ರಾಮದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಹತ್ಯೆಗೆ ಸಂಬಂಧಿಸಿದಂತೆ ಕೃಷ್ಣಪ್ಪನ ಸೋದರಳಿಯ ಆದಿತ್ಯ (21) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಪ್ಪ ಮತ್ತು ಆತನ ಸಹೋದರ ಗಣೇಶ್ ನಡುವೆ ಮೊದಲಿನಿಂದಲೂ ದ್ವೇಷದ ಇತಿಹಾಸವಿದ್ದು, ಸಿವಿಲ್ ವಿವಾದಗಳಲ್ಲಿ ಸಿಲುಕಿಕೊಂಡಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮಾಚರಣೆಯ ನಡುವೆಯೇ ಆರೋಪಿಗಳು ಮೃತ ಕೃಷ್ಣಪ್ಪ ಅವರ ನಿವಾಸದ ಎದುರು ಪಟಾಕಿ ಸಿಡಿಸಿದ್ದು, ತೀವ್ರ ವಾಗ್ವಾದಕ್ಕೆ ಕಾರಣವಾಗಿತ್ತು. ಕೋಪದ ಭರದಲ್ಲಿ ಆರೋಪಿಗಳು ಕೃಷ್ಣಪ್ಪನ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದು, ಆತನ ಸಹಾಯಕ್ಕೆ ಧಾವಿಸಿದ ಪತ್ನಿ ಹಾಗೂ ಮಗನ ಮೇಲೂ ಹಲ್ಲೆ ನಡೆಸಿದ್ದಾರೆ. ಸದ್ಯ ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಕರಣದಲ್ಲಿ ಆದಿತ್ಯ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತನ ಸಹೋದರ ಗಣೇಶ್ ತಲೆಮರೆಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕಾರ್ಯಕರ್ತನ ಕೊಲೆಯನ್ನು ಖಂಡಿಸಿ, ಭಾರತೀಯ ಜನತಾ ಪಕ್ಷದ ಕರ್ನಾಟಕ ಘಟಕವು ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.
" ಕರ್ನಾಟಕ ಕಾಂಗ್ರೆಸ್ ಆಗಲೇ ಸ್ಥಿಮಿತ ಕಳೆದುಕೊಂಡಿದ್ದು, ಹೊಸಕೋಟೆಯಲ್ಲಿ ವಿಜಯೋತ್ಸವದ ವೇಳೆ ನಮ್ಮ ಕಾರ್ಯಕರ್ತನೊಬ್ಬನ ಹತ್ಯೆಗೈಯಲಾಗಿದೆ. ರಾಜ್ಯಕ್ಕೆ ಗೂಂಡಾರಾಜ್ ತರಲಿರುವ ಕಾಂಗ್ರೆಸ್ಸಿನ ಮುಂದಿನ 5 ವರ್ಷಗಳ ಕಾನೂನು ಸುವ್ಯವಸ್ಥೆಯ ಚಿತ್ರಣ ಮೊದಲ ದಿನವೇ ಜನತೆಗೆ ಗೊತ್ತಾಗಿದೆ. ಕಾಂಗ್ರೆಸ್ ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಎಚ್ಚರ" ಎಂದು ಎಚ್ಚರಿಕೆ ನೀಡಿದೆ.

ಮಂಗಳವಾರ ಕೂಡ ಬಿಜೆಪಿ ನಾಯಕರು ಗಾಯಾಳುಗಳನ್ನು ಭೇಟಿ ಮಾಡಿ ಸಾಂತ್ವಾನ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೊಸಕೋಟೆಯಲ್ಲಿ ಕಾಂಗ್ರೆಸ್ ಪಕ್ಷದ ಗೂಂಡಾಗಳಿಂದ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಕಾರ್ಯಕರ್ತ ಬಾಬು ಅವರನ್ನು ಎಂ.ವಿ.ಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು. ಬಳಿಕ ಹತ್ಯೆಗೊಳಗಾದ ಕೃಷ್ಣಪ್ಪ ಅವರ ಮನೆಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ಜೊತೆಗೆ ಮಾಜಿ ಸಚಿವರಾದ ಈಶ್ವರಪ್ಪ, ಅಶ್ವತ್ಥ್ ನಾರಾಯಣ, ಎಂಟಿಬಿ ನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಕೇಶವ್ ಪ್ರಸಾದ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.












Click it and Unblock the Notifications