ಅನರ್ಹ ಶಾಸಕ ಮುನಿರತ್ನ ವಿರುದ್ಧದ ಮತ್ತೊಂದು ದೂರು ಹಿಂಪಡೆದ ಬಿಜೆಪಿ ಕಾರ್ಯಕರ್ತ
Recommended Video
ಬೆಂಗಳೂರು, ಆಗಸ್ಟ್ 17: ನಕಲಿ ಮತದಾರರ ಗುರುತಿನ ಚೀಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರದ ಅನರ್ಹ ಶಾಸಕ ಮುನಿರತ್ನ ವಿರುದ್ಧ ಸಲ್ಲಿಸಲಾಗಿದ್ದ ಮತ್ತೊಂದು ಅರ್ಜಿಯನ್ನು ಸಹ ವಾಪಸ್ ಪಡೆಯಲಾಗಿದೆ.
ನಕಲಿ ವೋಟರ್ ಐಟಿ ಪತ್ತೆಯಾದ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿ ಬಿಜೆಪಿ ಕಾರ್ಯಕರ್ತ ರಾಕೇಶ್ ಎಂಬುವವರು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.
ಚುನಾವಣಾ ಅಕ್ರಮ ಪ್ರಕರಣದಲ್ಲಿ ಶಾಸಕ ಮುನಿರತ್ನ ಖುಲಾಸೆ
ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜರಾಜೇಶ್ವರಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿನ ಮನೆಯೊಂದರಲ್ಲಿ ಸುಮಾರು 9 ಸಾವಿರ ನಕಲಿ ವೋಟರ್ ಐಡಿಗಳು ಪತ್ತೆಯಾಗಿದ್ದವು. ಈ ಸಂಬಂಧ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ವಿರುದ್ಧ ಬಿಜೆಪಿ ಅಭ್ಯರ್ಥಿ ಮುನಿರಾಜು ದೂರು ನೀಡಿದ್ದರು. ಈ ಘಟನೆಯಿಂದ ಕ್ಷೇತ್ರದ ಚುನಾವಣೆ ಮುಂದೂಡಲಾಗಿತ್ತು.
ಈ ಪ್ರಕರಣದಲ್ಲಿ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು ಮಾಡಿರಲಿಲ್ಲ. ಇದರ ವಿರುದ್ಧ ಬಿಜೆಪಿ ಕಾರ್ಯಕರ್ತ ರಾಕೇಶ್, ನ್ಯಾಯಾಲಯದ ಮೆಟ್ಟಿಲೇರಿದ್ದರು. ಅಲ್ಲದೆ, ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ಕೂಡ ಅವರು ಹೈಕೋರ್ಟ್ನಲ್ಲಿ ರಿಟ್ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಕಳೆದ ವಾರ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಸಮ್ಮುಖದಲ್ಲಿ ನಡೆದಿತ್ತು. ವಿಚಾರಣೆ ಮುಕ್ತಾಯದ ಹಂತದಲ್ಲಿರುವಾಗಲೇ ಅಚ್ಚರಿಯ ಬೆಳವಣಿಗೆಯಲ್ಲಿ ರಾಕೇಶ್ ಅವರು ತಮ್ಮ ಅರ್ಜಿ ಹಿಂದಕ್ಕೆ ಪಡೆಯುವುದಾಗಿ ಬುಧವಾರ ಜ್ಞಾಪನಾ ಪತ್ರ ಸಲ್ಲಿಸಿದ್ದರು.
ಮೆಮೊ ದಾಖಲಿಸಿಕೊಂಡ ನ್ಯಾಯಮೂರ್ತಿ ಮೈಕಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿ ವಾಪಸ್ ಪಡೆಯಲು ಅನುಮತಿ ನೀಡಿತ್ತು.
ವೋಟರ್ ಐಡಿ ಪತ್ತೆ: ಗೃಹ ಇಲಾಖೆ, ಪೊಲೀಸರಿಗೆ ಹೈಕೋರ್ಟ್ ನೋಟಿಸ್
ಮೂರು ದಿನಗಳ ಬಳಿಕ ಮತ್ತೊಂದು ದೂರನ್ನು ಕೂಡ ಹಿಂದಕ್ಕೆ ಪಡೆಯಲು ರಾಕೇಶ್ ಮುಂದಾದರು. ವಕೀಲರನ್ನು ಬದಲಿಸಿದ ಅವರು, ಮುನಿರತ್ನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸಲ್ಲಿಸಿದ್ದ ಮತ್ತೊಂದು ಖಾಸಗಿ ಅರ್ಜಿಯನ್ನು ಕೂಡ ವಾಪಸ್ ಪಡೆದುಕೊಂಡಿದ್ದಾರೆ. ಈ ವೇಳೆ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶ ರಾಮವಂದ್ರ ಹುದ್ದರ್ ಅವರು ರಾಕೇಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. 'ನೀವು ಕಾನೂನು ಪ್ರಕ್ರಿಯೆಯನ್ನು ದುರುಪಯೋಗಡಿಸಿಕೊಂಡಿದ್ದೀರಿ' ಎಂದು ತರಾಟೆಗೆ ತೆಗೆದುಕೊಂಡರು.
ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ಅವರು ಸರ್ಕಾರದ ವಿರುದ್ಧ ಬಂಡಾಯವರೆದ್ದು ರಾಜೀನಾಮೆ ಸಲ್ಲಿಸಿದ್ದರು. ಅವರನ್ನು ಪಕ್ಷದಿಂದ ಅನರ್ಹಗೊಳಿಸಲಾಗಿತ್ತು. ಬಳಿಕ ಅವರು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ. 2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮೇ 12ರಂದು ಜಾಲಹಳ್ಳಿಯ ಎಸ್ಎಲ್ವಿ ಪಾರ್ಕ್ ವ್ಯೂವ್ ಅಪಾರ್ಟ್ಮೆಂಟ್ನ ಮನೆಯೊಂದರಲ್ಲಿ 9 ಸಾವಿರಕ್ಕೂ ಅಧಿಕ ನಕಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಸಂಬಂಧ ಪೊಲೀಸರು ಮುನಿರತ್ನ ಸೇರಿದಂತೆ 34 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.