ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಬಿಕೆ ಹರಿಪ್ರಸಾದ್ ರಾಜೀನಾಮೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ರಾಜೀನಾಮೆ ನೀಡಿದ್ದಾರಂತೆ. ಜತೆಗೆ ಕಾರ್ಯಕಾರಿಣಿ ಸಭೆಗೂ ಇನ್ಮುಂದೆ ಹೋಗುತ್ತಿಲ್ಲ ಎಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದರು.
ಬೆಂಗಳೂರು, ಮಾರ್ಚ್ 13: ಕಾಂಗ್ರೆಸ್ಸಿನ ಹಿರಿಯ ಮುಖಂಡ ಬಿಕೆ ಹರಿಪ್ರಸಾದ್ ಅವರು ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ಸೋಮವಾರದಂದು ಸುದ್ದಿಗೋಷ್ಠಿ ನಡೆಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಕಾರ್ಯಕಾರಿಣಿಗೂ ಹೋಗುವುದಿಲ್ಲ ಎಂದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ಹಾಗೂ ಕಾರ್ಯಕಾರಿಣಿಗೆ ರಾಜೀನಾಮೆ ನೀಡಲು ಒಡಿಶಾ ಸ್ಥಳೀಯ ಸಂಸ್ಥೆಗಳ ಚುನಾವಣೆ ಸೋಲು ಕಾರಣ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಹೇಳಿದರು.

ಸೋಲಿನ ಹೊಣೆ ಹೊತ್ತು ಮಾರ್ಚ್ 09ರಂದೇ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದಿರುವ ಹರಿಪ್ರಸಾದ್ ಅವರು, ಬಹು ವರ್ಷಗಳಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳ ಜವಾಬ್ದಾರಿ ಹಾಗೂ ವಿವಿಧ ರಾಜ್ಯಗಳ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ.ಸದ್ಯ ಚತ್ತೀಸ್ ಗಢ ರಾಜ್ಯದ ಉಸ್ತುವಾರಿ ನೀಡಲಾಗಿದೆ.
ಕಾಂಗ್ರೆಸ್ಸಿಗೆ ಮೋಸ: ಗೋವಾ, ಮಣಿಪುರದಲ್ಲಿ ಕಾಂಗ್ರೆಸ್ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಗೋವಾ ರಾಜ್ಯಪಾಲೆ ಮೃದಲಾ ಸಿನ್ಹಾ ಅವರು ಕೇಂದ್ರ ಸರ್ಕಾರದ ಲಾಬಿಗೆ ಮಣಿದು ಬಿಜೆಪಿ ಸರ್ಕಾರ ರಚನೆಗೆ ಅವಕಾಶ ಕೊಟ್ಟಿರುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಕ್ರಮ ಎಂದು ಹರಿಪ್ರಸಾದ್ ಕಿಡಿಕಾರಿದ್ದಾರೆ.
ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಕಾಂಗ್ರೆಸ್ಗೆ ಸರ್ಕಾರ ರಚನೆಗೆ ರಾಜ್ಯಪಾಲರು ಅವಕಾಶ ನೀಡಬೇಕಿತ್ತು. ಆದರೆ ಬಿಜೆಪಿಗೆ ಅವಕಾಶ ನೀಡಿ ಜನಾದೇಶವನ್ನು ಧಿಕ್ಕರಿಸಿದ್ದಾರೆ ಎಂದರು.












Click it and Unblock the Notifications