ಬಿಎಂಎಸ್ ಟ್ರಸ್ಟ ಅಕ್ರಮ: ಅಶ್ವಥ್ ನಾರಾಯಣ ರಾಜೀನಾಮೆಗೆ ಉಭಯ ಸದನಗಳಲ್ಲಿ ಜೆಡಿಎಸ್ ಪಟ್ಟು
ಬೆಂಗಳೂರು ಸೆಪ್ಟಂಬರ್ 23: ಬಿಎಂಎಸ್ ಶಿಕ್ಷಣ ಟ್ರಸ್ಟ್ನಲ್ಲಿ ನಡೆದ ಅಕ್ರಮಗಳಿಗೆ ಸಹಕಾರ ನೀಡಿದ್ದಾರೆ ಎನ್ನಲಾಗುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ರಾಜೀನಾಮೆ ನೀಡಬೇಕು. ಹೀಗೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ವಿಧಾನ ಪರಿಷತ್ ಮತ್ತು ವಿಧಾನಸಭೆ ಸದಸ್ಯರು ಪಟ್ಟು ಹಿಡಿದಿದ್ದಾರೆ.
ಈ ಕುರಿತು ಶುಕ್ರವಾರ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ಬಿಎಂಎಸ್ ಟ್ರಸ್ಟ್ ಹೇಗೆ ಖಾಸಗಿಯವರ ಪಾಲಾಯಿತು. ಅದಕ್ಕೆ ಕಾರಣ ಯಾರು? ಯಾವ ಸರ್ಕಾರ ಸಹಿ ಹಾಕಿತು ಎಂದೆಲ್ಲ ವಿವರಿಸಿದ್ದರು. ಇದರ ಬೆನ್ನಲ್ಲೆ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನ ಮಂಡಲದ ಮೇಲ್ಮನೆ ಮತ್ತು ಕೆಳಮನೆಯಲ್ಲಿ ಕೂಗಿ ಕೇಳಿ ಬಂದಿದೆ.
ಉನ್ನತ ಶಿಕ್ಷಣ ಸಚಿವರ ರಾಜೀನಾಮೆ ಜತೆಗೆ ಬಿಎಂಸ್ ಟ್ರಸ್ಟ್ ಅಕ್ರಮಗಳ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಬೇಕು. ಸರ್ಕಾರದಿಂದ ಬೆಳೆದ ಟ್ರಸ್ಟ್ ಮತ್ತು ಆ ಟ್ರಸ್ಟ್ನ ಎಲ್ಲಾ ಸ್ವತ್ತುಗಳನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಕುಮಾರಸ್ವಾಮಿ ಟ್ವೀಟ್ನಲ್ಲಿ ಆಗ್ರಹಿಸಿದ್ದಾರೆ.
ಕಾನೂನು ರೀತಿ ಕ್ರಮ ಎಂದರೆ ಏನು ಸಚಿವರೇ?
ಸದನದಲ್ಲಿ ಅಕ್ರಮ ಬಗ್ಗೆ ಎಲ್ಲ ದಾಖಲೆ ಸಮೇತ ಇಟ್ಟಿದ್ದೇನೆ. ಆ ದಾಖಲೆಗಳೇ ಎಲ್ಲವನ್ನೂ ಮಾತನಾಡುತ್ತಿವೆ. ಇನ್ನು ನಾನು ಗಾಳಿಯಲ್ಲಿ ಗುಂಡು ಹೊಡೆಯುವವರು ಎನ್ನುವವರಿಗೆ ಹೇಳುತ್ತೇನೆ, ನಾನು ಹೊಡೆದ ಗುಂಡು ಎಲ್ಲಿ ವಿಫಲವಾಗಿದೆ? ಅದನ್ನು ವಿಫಲಗೊಳಿಸುವ ಇನ್ನೊಂದು ಹುನ್ನಾರ, ಷಡ್ಯಂತ್ರ ಈಗ ನಡೆದಿದೆ ಅಷ್ಟೇ.
ಬಿಎಂಎಸ್ ಬಿಜೆಪಿ ಸರ್ಕಾರ ಕಾನೂನು ರೀತ್ಯಾ ಕ್ರಮ ವಹಿಸಿದೆ ಎಂದು ಉನ್ನತ ಶಿಕ್ಷಣ ಸಚಿವರು ಹೇಳಿದ್ದಾರೆ. ಕಾನೂನುರೀತ್ಯ ಕ್ರಮ ಎಂದರೆ, ಸಾವಿರಾರು ಕೋಟಿ ರೂ. ಮೌಲ್ಯದ ಸರ್ಕಾರಿ ಸ್ವತ್ತನ್ನು ಸದ್ದಿಲ್ಲದೆ ಖಾಸಗಿ ರಿಯಲ್ ಎಸ್ಟೇಟ್ ಪಟ್ಟಭದ್ರರಿಗೆ ಧಾರೆ ಎರೆದುಕೊಡುವುದಾ ಎಂದು ಅಶ್ವಥ್ ನಾರಾಯಣರನ್ನು ಪ್ರಶ್ನಿಸಿದರು.
ಅಕ್ರಮಕ್ಕೆ ಉನ್ನತ ಶಿಕ್ಷಣ ಸಚಿವರ ಸಹಕಾರ
ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಹಿಡಿದ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದೊಡ್ಡ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ಕೊಟ್ಟಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು ಆಗಿದೆ ಎಂದು ಹೇಳಿದರು.
ಉನ್ನತ ಶಿಕ್ಷಣ ಸಚಿವರೇ ತಾವು 1957ರಲ್ಲಿ ರಚನೆಗೊಂಡು ನೋಂದಣಿಯಾದ ಬಿಎಂಎಸ್ ಟ್ರಸ್ಟಿನ ಮೂಲ ಡೀಡಅನ್ನು ಒಮ್ಮೆ ಓದಿ ತಿಳಿದುಕೊಳ್ಳಿ. ದಾನಿ ಟ್ರಸ್ಟಿ, ಆಜೀವ ಟ್ರಸ್ಟಿ ನೇಮಕದ ಬಗ್ಗೆ ಇರುವ ಷರತ್ತುಗಳನ್ನೂ ತಿಳಿಯಿರಿ. ಸದ್ಯ ನೀವು ಜನರಿಗೆ ಹಾಗೂ ಸರ್ಕಾರಕ್ಕೆ ಸೇರಿದ ಇಡೀ ಟ್ರಸ್ಟಿನ ಆಸ್ತಿ ಹೊಡೆಯಲು ನಿಂತವರ ಪರ ನಾಚಿಕೆ ಇಲ್ಲದೆ ವಕಾಲತ್ತು ವಹಿಸುತ್ತಿದ್ದೀರಿ ಎಂದು ವ್ಯಂಗ್ಯವಾಡಿದರು.
ಬಿಎಂಎಸ್ ಎಂಜೀಯರಿಂಗ್ ಕಾಲೇಜಿನಲ್ಲಿ ಸೀಟ್ ಬ್ಲಾಕಿಂಗ್, ಪೇಮೆಂಟ್ ಸೀಟುಗಳನ್ನು 50:50 ರಂತೆ ಟ್ರಸ್ಟಿಗಳಿಬ್ಬರು ಹಂಚಿಕೊಂಡಿದ್ದು ನಿಮ್ಮ ಗಮನಕ್ಕೆ ಬರಲಿಲ್ಲವೇ?. ಕಾಮೆಡ್-ಕೆ ಆಕ್ಷೇಪಣಾ ಪತ್ರ, ಸರ್ಕಾರದ ಇಬ್ಬರು ಅಧಿಕಾರಿಗಳು ಟ್ರಸ್ಟಿನ ಅಕ್ರಮಗಳ ಬಗ್ಗೆ ಬರೆದ ಪತ್ರಗಳನ್ನು ನೀವು ಓದಲಿಲ್ಲವೇ ಸಚಿವರೇ?. ಓದಲಿಲ್ಲ ಎಂದರೆ, ಅದಕ್ಕೆ ಕಾರಣವೇನು? ಎಂದು ಪ್ರಶ್ನಿಸಿದರು.
ಅಶ್ವಥ್ ನಾರಾಯಣ್ ವಿರುದ್ಧ ಎಚ್ಡಿಕೆ ವಾಗ್ದಾಳಿ
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಎಂದರೆ ಸರ್ಕಾರಿ ಸ್ವತ್ತುಗಳನ್ನು ಭೂರಕ್ಕಸರ ಬಾಯಿಗೆ ಹಾಕುವುದಾ?. ಮುಜರಾಯಿ ಇಲಾಖೆಯ ಶ್ರೀ ದೊಡ್ಡ ಬಸವಣ್ಣ, ಕಾರಂಜಿ ಶ್ರೀ ಆಂಜನೇಯ ಸ್ವಾಮಿ ದೇಗುಲಗಳಿಗೆ ಸೇರಿದ ಕೋಟ್ಯಂತರ ರೂ. ಬೆಲೆಯ ಆಸ್ತಿಯನ್ನು ನುಂಗಲು ಹೊರಟ ನುಂಗಣ್ಣರಿಗೆ ದಾರಿ ಸಲೀಸು ಮಾಡಿಕೊಡುವುದಾ?. ಇದ್ಯಾವ ಶಿಕ್ಷಣ ನೀತಿ? ಇದ್ಯಾವ ಧರ್ಮನೀತಿ?.
ನಮ್ಮ ಅವಧಿಯಲ್ಲಿ ಶೈಕ್ಷಣಿಕ ಸುಧಾರಣೆಗಾಗಿ ಬಹಳ ಕ್ರಮ ಕೈಗೊಂಡಿದ್ದೇವೆ ಎನ್ನುತ್ತೀರಿ. ಸುಧಾರಣೆ ಎಂದರೆ, ಸಾರ್ವಜನಿಕ ಟ್ರಸ್ಟುಗಳನ್ನು ಹೀಗೆ ನುಂಗಿ ನೀರು ಕುಡಿಯಲು ಒಳಗೊಳಗೇ ಸಹಕಾರ ನೀಡುವುದಾ. ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?. ಶೈಕ್ಷಣಿ ಉದ್ಧಾರ ಮಾಡುವದು ಎಂದರೆ ಹೀಗೆನಾ? ಎಂದು ತಿಳಿಸಿ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.
2018ರಲ್ಲಿ ನನ್ನ ನೇತೃತ್ವದ ಸರ್ಕಾರವು ದಾನಿ ಟ್ರಸ್ಟಿ, ಅಜೀವ ಟ್ರಸ್ಟಿ ನೇಮಕದ ಬಗ್ಗೆ ಬಿಎಂಎಸ್ ಟ್ರಸ್ಟಿನಲ್ಲಿ ಕೈಗೊಂಡಿದ್ದ ತಿದ್ದುಪಡಿಗಳು ಅಕ್ರಮ ಎಂದು ಸಾರಿ, ಆ ತಿದ್ದುಪಡಿಗಳನ್ನು ಸಾರಾಸಗಟಾಗಿ ತಿರಸ್ಕರಿತ್ತು. ನನ್ನ ಸರ್ಕಾರ ಹೋದ ಮೇಲೆ ಬಂದ ಬಿಜೆಪಿ ಸರ್ಕಾರ ಸರಕಾರ ಈ ಅಕ್ರಮ ತಿದ್ದುಪಡಿಗಳನ್ನು ಶರವೇಗದಲ್ಲಿ ಪುರಸ್ಕರಿಸಿತು ಎಂದರು.
ಟ್ರಸ್ಟ ಅಕ್ರಮ ಸಕ್ರಮ ಮಾಡಲು ಸರ್ಕಾರದ ಆತುರ
ಟ್ರಸ್ಟಿನಲ್ಲಿ ಸರ್ಕಾರ ಟ್ರಸ್ಟಿಗೇ ಕೊಕ್ ಕೊಟ್ಟು, ಈ ಟ್ರಸ್ಟಿನಲ್ಲಾಗುತ್ತಿದ್ದ ಗೋಲ್ಮಾಲ್ ಬಗ್ಗೆ ಸರ್ಕಾಕಾರಿ ಟ್ರಸ್ಟಿಯಾಗಿದ್ದ ಐಎಎಸ್ ಅಧಿಕಾರಿ ಡಾ. ಮಂಜುಳಾ ಮತ್ತು ಇನ್ನೊಬ್ಬ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರು ಬರೆದ ಪತ್ರಗಳನ್ನು ಕಸದಬುಟ್ಟಿಗೆ ಹಾಕಿದ್ದು ಏಕೆ?. ಇದರ ಹಿಂದಿನ ಹುನ್ನಾರ ಏನು?. ಟ್ರಸ್ಟಿನಲ್ಲಿ ಕೈಗೊಂಡ ಅಕ್ರಮ ತಿದ್ದುಪಡಿಗಳನ್ನು ಸಕ್ರಮಗೊಳಿಸಲು ತಾವು ತೋರಿದ ಆತುರ, ಕಾಳಜಿ ಎಂಥದ್ದು ಎಂಬುದು ನನಗೆ ಗೊತ್ತಿದೆ. ಅವುಗಳ ಅನುಮೋದನೆಗಾಗಿ ತಾವೇ ಬರೆದ ಟಿಪ್ಪಣಿಯ ಒಕ್ಕಣಿಯನ್ನು ಒಮ್ಮೆ ಓದಿಕೊಳ್ಳಿ ಅಶ್ವಥ್ ನಾರಾಯಣ್ ಅವರೇ. ಉನ್ನತ ಶಿಕ್ಷಣ ಸಚಿವರಾದ ನಿಮ್ಮ ಉನ್ನತ ಮಟ್ಟ ಎಷ್ಟು ಕೆಳಮಟ್ಟದಲ್ಲಿದೆ ಎಂಬುದು ಅರ್ಥವಾಗುತ್ತದೆ ಎಂದು ಅಶ್ವಥ್ ನಾರಾಯಣ್ ವಿರುದ್ಧ ವಾಗ್ದಾಳಿ ನಡೆಸಿದರು.