BMTC : ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ: ಬೆಂಗಳೂರಿನಿಂದ ಬಿಎಂಟಿಸಿ ಬಸ್ ಸೇವೆ ವಿಸ್ತರಣೆ
ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದೆ.
ಬೆಂಗಳೂರು, ಮಾರ್ಚ್ 17: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮಾತ್ರ ಸೀಮಿತವಾಗಿದ್ದ ಬಿಎಂಟಿಸಿ ಬಸ್ಗಳು ಇನ್ನು ಮುಂದೆ ಚಿಕ್ಕಬಳ್ಳಾಪುರಕ್ಕೂ ತಮ್ಮ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಿವೆ. ಈ ಬಗ್ಗೆ ಚಿಕ್ಕಬಳ್ಳಾಪುರ ಶಾಸಕ ಮತ್ತು ಆರೋಗ್ಯ ಸಚಿವ ಕೆ. ಸುಧಾಕರ್ ಗುರುವಾರ ಮಾಹಿತಿ ನೀಡಿದ್ದಾರೆ.
ಹಲವಾರು ವರ್ಷಗಳಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳನ್ನು ನೆರೆಯ ಚಿಕ್ಕಬಳ್ಳಾಪುರ ಜಿಲ್ಲೆಗೂ ವಿಸ್ತರಿಸಬೇಕು ಎಂಬ ಕೂಗು ಕೇಳಿ ಬರುತ್ತಿತ್ತು. ಕೊನೆಗೂ ಜನರ ಬೇಡಿಕೆಗೆ ಸ್ಪಂದಿಸಲಾಗಿದೆ. ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ಹಲವರಿಗೆ ಈ ವ್ಯವಸ್ಥೆ ಉಪಯೋಗಕ್ಕೆ ಬರಲಿದೆ ಎಂದು ಅಂದಾಜಿಸಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವ ಕೆ.ಸುಧಾಕರ್, ತಮ್ಮ ಸಾಮಾಜಿಕ ಮಾಧ್ಯಮಗಳ್ಲಲಿ ಆದೇಶ ಪತ್ರವನ್ನು ಪ್ರಕಟಿಸಿದ್ದಾರೆ. " ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ" ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜನತೆಗೆ ಯುಗಾದಿ ಕೊಡುಗೆ!
— Dr Sudhakar K (@mla_sudhakar) March 16, 2023
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಚಿಕ್ಕಬಳ್ಳಾಪುರಕ್ಕೆ ವಿಸ್ತರಿಸುವ ಜಿಲ್ಲೆಯ ಜನತೆಯ ಬಹುನಿರೀಕ್ಷಿತ ಬೇಡಿಕೆಯಂತೆ ಬಿಎಂಟಿಸಿ ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದ್ದು, ಇನ್ನು ಮುಂದೆ ಬಿಎಂಟಿಸಿ ಬಸ್ಸುಗಳು ನಮ್ಮ ಚಿಕ್ಕಬಳ್ಳಾಪುರಕ್ಕೂ ಸಂಚರಿಸಲಿವೆ.
1/3 pic.twitter.com/r17zSAYwhP
"ರೈತರು, ವಿದ್ಯಾರ್ಥಿಗಳು, ಸಣ್ಣ ವ್ಯಾಪಾರಸ್ಥರು, ಉದ್ಯೋಗಿಗಳು ಸೇರಿದಂತೆ ದಿನನಿತ್ಯ ಬೆಂಗಳೂರಿಗೆ ಓಡಾಡುವ ಚಿಕ್ಕಬಳ್ಳಾಪುರದ ಎಲ್ಲ ನಾಗರಿಕರಿಗೂ ಇದರಿಂದ ಅನುಕೂಲವಾಗಲಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಆರ್ಥಿಕ ಪ್ರಗತಿಗೂ ವೇಗ ದೊರೆಯಲಿದೆ" ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಸುಧಾಕರ್ ಮಾಹಿತಿ ನೀಡಿದ್ದಾರೆ.

"ಚಿಕ್ಕಬಳ್ಳಾಪುರದ ಜನತೆಯ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರಿಗೆ ಜಿಲ್ಲೆಯ ಜನತೆಯ ಪರವಾಗಿ ಕೃತಜ್ಞತೆಗಳು. ಈ ಬೇಡಿಕೆಯನ್ನು ಸಾಕಾರಗೊಳಿಸಲು ಶ್ರಮಿಸಿದ ಬಿಎಂಟಿಸಿ ಉಪಾಧ್ಯಕ್ಷರಾದ ನವೀನ್ ಕಿರಣ್ ಅವರಿಗೆ ಅಭಿನಂದನೆಗಳು" ಎಂದು ಧನ್ಯವಾದ ತಿಳಿಸಿದ್ದಾರೆ.
ಆದೇಶ ಪತ್ರದಲ್ಲಿ, "ಬೆಂಗಳೂರು - ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರಿಗೆಗಳನ್ನು ಕಾರ್ಯಾಚರಿಸಲು ಸಹಮತಿ ನೀಡುವ ವಿಷಯಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂ.ಮ.ಸಾ.ಸಂಸ್ಥೆಯ ಸಾರಿಗೆಗಳನ್ನು ಪ್ರಾಯೋಗಿಕವಾಗಿ ಕಾರ್ಯಾಚರಿಸಲು ಯೋಜಿಸಿರುವುದಾಗಿ ತಿಳಿಸಿ, ಸದರಿ ಸಾರಿಗೆಯನ್ನು ಕಾರ್ಯಾಚರಿಸಲು ಸಹಮತಿ ನೀಡಲು ಕೋರಿ ಕಳುಹಿಸಲಾಗಿರುವ ಉಲ್ಲೇಖಿತ ಪತ್ರವನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಬೆಂಗಳೂರು-ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಬೆಂ.ಮ.ಸಾ.ಸಂಸ್ಥೆಯ ವತಿಯಿಂದ 2 ಎ.ಸಿ ಬಸ್ಸುಗಳನ್ನು ಪ್ರಾಯೋಗಿಕವಾಗಿ ಕಾರ್ಯಾಚರಣೆ ಮಾಡಲು ಸಹಮತಿ ನೀಡಲಾಗಿದೆ" ಎಂದು ತಿಳಿಸಲಾಗಿದೆ.











Click it and Unblock the Notifications