ಒಂದು ವಾರದೊಳಗೆ ಜೆಡಿಎಸ್ ನಿಗಮ-ಮಂಡಳಿ ನೇಮಕ ಸಾಧ್ಯತೆ
ಬೆಂಗಳೂರು, ಫೆ.15: ನಿಗಮ-ಮಂಡಳಿಗಳಿಗೆ ನೇಮಕ ಮಾಡಲು ಜೆಡಿಎಸ್ ವರಿಷ್ಠರು ಮುಂದಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಂದು ವಾರದೊಳಗೆ ನೇಮಕ ಪ್ರಕ್ರಿಯೆ ನಡೆಯಲಿದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಪಾಲಿನ ನಿಗಮ-ಮಂಡಳಿಗಳಿಗೆ ಈಗಾಗಲೇ ನೇಮಕ ಪ್ರಕ್ರಿಯೆ ನಡೆದಿದೆ. ಇದೀಗ ಜೆಡಿಎಸ್ನಲ್ಲೂ ಬಾಕಿ ಉಳಿಸಿಕೊಂಡಿರುವ ಮಂಡಳಿಗಳಿಗೆ ಅಧ್ಯಕ್ಷರು, ಉಪಾಧ್ಯಕ್ಷರುಗಳನ್ನು ನೇಮಕ ಮಾಡಲು ಒತ್ತಡ ಕೇಳಿಬರುತ್ತಿದೆ. ಒಂದೊಮ್ಮೆ ಲೋಕಸಭಾ ಚುನಾವಣೆ ದಿನಾಂಕ ನಿಗದಿಯಾದರೆ ಬಳಿಕ ನೀತಿ ಸಂಹಿತೆಯ ಅಡ್ಡಿಯಾಗಲಿದೆ ಹಾಗಾಗಿ ಇನ್ನು ಮುಂದು ವಾರದೊಳಗೆ ನಿಗಮ-ಮಂಡಳಿಗಳಿಗೆ ನೇಮಕ ಮಾಡಲಾಗುತ್ತಿದೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ.
ನಿಗಮ-ಮಂಡಳಿ ನೇಮಕಕ್ಕೆ ತಡೆ, ಸಿಎಂ ಕುಮಾರಸ್ವಾಮಿ ಹೇಳಿದ್ದೇನು?
ಆಪರೇಷನ್ ಕಮಲ, ಸರ್ಕಾರ ಪತನದಂತಹ ವಿಚಾರಗಳೂ ಸೇರಿದಂತೆ ರಾಜಕೀಯವಾಗಿ ಚರ್ಚಿತವಾಗುತ್ತಿದ್ದ ಊಹಾ ಪೋಹಗಳಿಗೆ ಸದ್ಯಕ್ಕೆ ತೆರೆ ಬಿದ್ದಿರುವುದರಿಂದ ಜೆಡಿಎಸ್ ಪಾಲಿನ ನಿಗಮ-ಮಂಡಳಿಗಳ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಲೋಕಸಭೆ ಚುನಾವಣೆ ಎದುರಿಸಬೇಕೆಂಬ ಉದ್ದೇಶವನ್ನು ವರಿಷ್ಠರು ಹೊಂದಿದ್ದಾರೆ ಎನ್ನುವ ಮಾಹಿತಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಪತನವಾಗಲಿದೆ ಎಂಬ ವದಂತಿಗಳು ದಟ್ಟವಾಗಿ ಕೇಳಿಬಂದ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನ ಮುಗಿಯುವವರೆಗೂ ಮುಂದೂಡುವ ನಿರ್ಧಾರಕ್ಕೆ ಬಂದಿದ್ದರು.
ಹೀಗಾಗಿ ಅದಕ್ಕೂ ಮುನ್ನವೇ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಅನುಕೂಲವಾಗುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಹುರಿದುಂಬಿಸಬೇಕು ಎಂಬ ಲೆಕ್ಕಾಚಾರ ಹಾಕಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.