5,8 & 9ನೇ ತರಗತಿ ಬೋರ್ಡ್ ಪರೀಕ್ಷೆ ವಿವಾದ ಮತ್ತಷ್ಟು ಕಗ್ಗಂಟು: ತೀರ್ಪು ಯಾವಾಗ..?
ಬೆಂಗಳೂರು, ಮಾರ್ಚ್ 15: ರಾಜ್ಯ ಪಠ್ಯ ಕ್ರಮ ಅಳವಡಿಸಿಕೊಂಡಿರುವ ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ವಿವಾದ ದಿನಕ್ಕೊಂದು ರೂಪ ಪಡೆದುಕೊಳ್ಳುತ್ತಿದೆ. ಹೈಕೋರ್ಟ್ ನಲ್ಲಿ ಶುಕ್ರವಾರ ಪ್ರಕರಣದಲ್ಲಿ ಅಂತಿಮ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದರ ಮಧ್ಯೆ, ಪರೀಕ್ಷೆ ಸಂಬಂಧದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿದ್ದ ಮಧ್ಯಂತರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಮತ್ತಷ್ಟು ಅರ್ಜಿ ಸಲ್ಲಿಕೆ
ಇದೇ ವೇಳೆ ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿ ವಿದ್ಯಾರ್ಥಿಗಳು ಮತ್ತು ಪೋಷಕರ ಪರವಾಗಿ ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದೆ. ಜೊತೆಗೆ, ಪರೀಕ್ಷೆ ನಡೆಸದಂತೆ ಮತ್ತೊಂದು ಮಧ್ಯಂತರ ಅರ್ಜಿ ಸಲ್ಲಿಕೆಯಾಗಿದ್ದು, ಇನ್ನಷ್ಟೇ ವಿಚಾರಣೆ ನಡೆಸಬೇಕಾಗಿದೆ.
ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಈ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ರಾಜೇಶ್ ಕೆ ರೈ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅನುದಾನ ರಹಿತ ಶಾಲೆಗಳ ಒಕ್ಕೂಟದ ವಕೀಲರು, ಸರ್ಕಾರ ಹೊರಡಿಸಿರುವ ಸುತ್ತೋಲೆಯಿಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು ಎಂದು ಕೋರಿದರು.
ಮಕ್ಕಳ ಮೇಲೆ ಗಂಭೀರ ಪರಿಣಾಮ
ಮನವಿ ತಿರಸ್ಕರಿಸಿದ ಪೀಠ, ಮಧ್ಯಂತರ ಅರ್ಜಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ನ್ಯಾಯಪೀಠ, ಮೇಲ್ಮನವಿಯನ್ನು ವಿಭಾಗೀಯ ಪೀಠ ವಿಚಾರಣೆ ನಡೆಸಿ ಆದಷ್ಟು ಶೀಘ್ರದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸುವಂತೆ ತಿಳಿಸಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿತು.
ಸರ್ಕಾರದ ಪರವಾಗಿ ವಾದ ಮುಂದುವರೆಸಿದ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಅರ್ಜಿದಾರರ ವಾದವು ವಿನಾಕಾರಣ ಎಳೆದುಕೊಂಡು ಹೋಗುವುದಾಗಿದೆ. ಜತೆಗೆ ವಿಳಂಬಕ್ಕೆ ಕಾರಣವಾಗಲಿದೆ. ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ ಪ್ರಕಾರ ರಾಜ್ಯ ಸರ್ಕಾರಕ್ಕೆ ಪರೀಕ್ಷೆಗಳನ್ನು ನಡೆಸುವುದಕ್ಕೆ ಅವಕಾಶವಿದೆ. ಅದರಂತೆ ಪರೀಕ್ಷೆಗಳಿಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಖಾಸಗಿ ಶಿಕ್ಷಣ ಸಂಸ್ಥೆಗ ಪರ ವಕೀಲರು ವಾದ ಮಂಡಿಸಿ, ಸರ್ಕಾರ ನಡೆಸುವುದಕ್ಕೆ ಮುಂದಾಗಿರುವ ಪರೀಕ್ಷಾ ಕ್ರಮದ ಗೊಂದಲಗಳು ಮಕ್ಕಳ ಮೇಲೆ ಪರಿಣಾಮ ಭೀರಬಹುದಾಗಿದೆ. ಸರ್ಕಾರದ ಈ ಸುತ್ತೋಲೆ ಕರ್ನಾಟಕ ಶಿಕ್ಷಣ ಕಾಯಿದೆ ಸೆಕ್ಷನ್ 22ಕ್ಕೆ ಸೀಮಿತವಾಗಿಲ್ಲ. ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಅಲ್ಲದೆ, ಸರ್ಕಾರದ ಸುತ್ತೋಲೆಗಳನ್ನು ಸುಪ್ರೀಂಕೋರ್ಟ್ ಕಾನೂನು ಬಾಹಿತ ಎಂಬುದಾಗಿ ಘೋಷಿಸಿ ರದ್ದುಪಡಿಸಿದೆ. ಹೀಗಾಗಿ ಸುತ್ತೋಲೆ ರದ್ದುಪಡಿಸಿರುವ ಕ್ರಮ ಸರಿಯಾಗಿದೆ ಎಂದು ಪೀಠಕ್ಕೆ ವಿವರಿಸಿದರು.












Click it and Unblock the Notifications