ಆಡಳಿತ ವೈಫಲ್ಯ ಮರೆಮಾಚಲು ಬೊಮ್ಮಾಯಿ 'ಬುಲ್ಡೋಜರ್' ಜಪ - ಎಚ್ಡಿಕೆ
ಬೆಂಗಳೂರು, ಜುಲೈ 29: ಮಂಗಳೂರು ಸರಣಿ ಕೊಲೆಗಳಿಗೆ ಸಂಬಂಧಿಸಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಡುತ್ತಿರುವ ತಪ್ಪು ಹೆಜ್ಜೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಹೆಚ್ ಡಿಕೆ; ಬಸವರಾಜ ಬೊಮ್ಮಾಯಿ ಇಡೀ ಕರ್ನಾಟಕದ ಮುಖ್ಯಮಂತ್ರಿ. ಕೇವಲ ಬಿಜೆಪಿಗಷ್ಟೇ ಅಲ್ಲ. ನಿನ್ನೆಯ ದಿನ ಮಸೂದ್ ಮತ್ತು ಪ್ರವೀಣ್ ನಿಟ್ಟಾರು ಹತ್ಯೆಯಾದ ಬೆಳ್ಳಾರೆ ಗ್ರಾಮಕ್ಕೆ ಭೇಟಿ ನೀಡಿದಾಗ ಸಂವಿಧಾನದತ್ತವಾಗಿ ಸ್ವೀಕರಿಸಿದ ಪ್ರಮಾಣವಚನದ ಪಾವಿತ್ರ್ಯತೆಗೆ ಚ್ಯುತಿ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಜಧರ್ಮ ಪಾಲಿಸಿ ಎಂದು ಹಿಂದೊಮ್ಮೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು. ರಾಜಧರ್ಮ ಪಾಲಿಸುವುದಿರಲಿ, ಸ್ವಧರ್ಮವೇ ಹೇಳಿದ 'ಸರ್ವೇ ಜನೋ ಸುಖಿನೋ ಭವಂತು' ಎನ್ನುವ ತತ್ತ್ವವನ್ನೂ ಪಾಲಿಸುತ್ತಿಲ್ಲ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದು ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕೊಲೆಗೆ ಕೊಲೆಯೇ ಉತ್ತರವಲ್ಲ. ಪ್ರತೀಕಾರಕ್ಕೆ ಪ್ರತೀಕಾರ ಪ್ರತ್ಯುತ್ತರವಲ್ಲ. ಮುಖ್ಯಮಂತ್ರಿ ನಡೆ ಹಿಂಸೆಯನ್ನು ಪ್ರಚೋದಿಸುವಂತಿದೆ. ಕೊಲೆಯಾದ ಇಬ್ಬರೂ ಯುವಕರ ಮನೆಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಕೊಲೆಗೆಡುಕರಿಗೆ ಕಠಿಣ ಸಂದೇಶ ರವಾನಿಸಬೇಕಿತ್ತು. ಹಾಗೆ ಮಾಡಲಿಲ್ಲ ಎಂದು ಎಚ್ಡಿಕೆ ವಾಗ್ದಾಳಿ ನಡೆಸಿದ್ದಾರೆ.

ಕೊಲೆಗಳು ಆಡಳಿತ ವೈಫಲ್ಯಕ್ಕೆ ಸಾಕ್ಷಿ
ರಕ್ತದಲ್ಲಿ ಜಾತಿ-ಧರ್ಮಗಳ ಗುಂಪುಗಳಿವೆಯಾ? ಅಷ್ಟು ಸರಳ ವಿಷಯ ಮುಖ್ಯಮಂತ್ರಿಗೇ ಗೊತ್ತಿಲ್ಲದಿದ್ದರೆ ಹೇಗೆ? ಅವರು ಇದ್ದಾಗಲೇ ಮಂಗಳೂರಿನಲ್ಲಿ ಇನ್ನೊಂದು ಕೊಲೆ ನಡೆಯಿತು ಎಂದರೆ ಆಡಳಿತ ವೈಫಲ್ಯಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇಕಾ? ಎಂದು ಎಚ್ ಡಿ ಕುಮಾರ ಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಯೋಗಿ ಅದಿತ್ಯನಾಥ್ ಮಾದರಿ 'ಬುಲ್ಡೋಜರ್' ಜಪ
ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬೊಮ್ಮಾಯಿ ಈಗ 'ಬುಲ್ಡೋಜರ್' ಜಪ ಮಾಡುತ್ತಿದ್ದಾರೆ. 'ಯೋಗಿ ಅದಿತ್ಯನಾಥ್ ಮಾದರಿ' ಎನ್ನುತ್ತಿದ್ದಾರೆ. ಉತ್ತರ ಪ್ರದೇಶದ ಎನ್ನುವುದು ಕರ್ನಾಟಕಕ್ಕೆ ಮಾತ್ರವಲ್ಲ, ಯಾರಿಗೂ ಮಾದರಿ ಅಲ್ಲ. ಸಹಜ ನ್ಯಾಯ, ಸಂವಿಧಾನಕ್ಕೆ ವಿರುದ್ಧದ ಉತ್ತರಪ್ರದೇಶದ ಆಡಳಿತವನ್ನು ಮಾದರಿ ಅನುಕರಣೆ ಎನ್ನುವುದು ಹೊಣೆಗೇಡಿತನದ ಪರಮಾವಧಿ ಎಂದು ಎಚ್ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಕ್ಕೆ 'ಹೊಸ ಮಾದರಿ'ಯನ್ನು ತರಲು ಹೊರಟಿದ್ದಾರೆ
ಸಂವಿಧಾನದ ಮೇಲೆ ಗೌರವ ಇಲ್ಲದವರು 'ಬುಲ್ಡೋಜರ್' ಬಗ್ಗೆ ಮಾತನಾಡುತ್ತಾರೆ. ದಕ್ಷತೆ ಇಲ್ಲದವರು ಅಕ್ಕಪಕ್ಕದ ಮಾದರಿಗಳನ್ನು ಹುಡುಕುತ್ತಾರೆ. ಜನತಾ ಪರಿವಾರಿ ಆಗಿದ್ದವರು ಈಗ ಸಂಘ ಪರಿವಾರಿಯಾಗಿ ರೂಪಾಂತರಗೊಂಡು ಉತ್ತರ ಪ್ರದೇಶದ ಮಾದರಿ ಹೆಸರಿನಲ್ಲಿ ರಾಜ್ಯಕ್ಕೆ 'ಹೊಸ ಮಾದರಿ'ಯನ್ನು ತರಲು ಹೊರಟಿದ್ದಾರೆ. ಇದು ಬೇಕಿಲ್ಲ ಎಂದು ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.

ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ
ಎಂ.ಎನ್.ರಾಯ್ ಅವರ ಅನುಯಾಯಿ, ಜನತಾ ಪರಿವಾರದ ರಾಯಿಸ್ಟ್ ಎಂದೇ ಖ್ಯಾತರಾಗಿದ್ದ ಎಸ್.ಆರ್.ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಈಗ ಸಂವಿಧಾನ ವಿರೋಧಿಯಾದ ಬುಲ್ಡೋಜರ್ ಮಾದರಿ ಮಾತನಾಡುತ್ತಿರುವುದು ನನಗೆ ಅತೀವ ಆಘಾತ ಉಂಟು ಮಾಡಿದೆ ಎಂದು ಎಂದು ಹೇಳುವ ಮೂಲ ಎಚ್ ಡಿ ಕುಮಾರ ಸ್ವಾಮಿಯವರು ಕಿಡಿ ಕಾರಿದ್ದಾರೆ. ಇದರೊಂದಿಗೆ ರಾಜ್ಯ ಬಿಜೆಪಿ ಆಡಳಿತ ವೈಫಲ್ಯವನ್ನು ಮರೆ ಮಾಚಲು ಹೊರಟಿದೆ. ಬುಲ್ಡೋಜರ್ ಮಾದರಿ ಎಂದ ಹೇಳುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಎಂದು ಬಿಜೆಪಿ ಮತ್ತು ಬೊಮ್ಮಾಯಿ ನಡೆಯನ್ನು ಎಚ್ ಕುಮಾರಸ್ವಾಮಿಯವರು ತೀವ್ರವಾಗಿ ಖಂಡಿಸಿದ್ದಾರೆ.












Click it and Unblock the Notifications