ಬ್ರಾಂಡ್ ಬೆಂಗಳೂರು ಅಭಿಯಾನಕ್ಕೆ ಜನರಿಂದ 30,000 ಸಲಹೆಗಳು: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು, ಜುಲೈ. 16: ಬ್ರಾಂಡ್ ಬೆಂಗಳೂರು ಅಭಿಯಾನಕ್ಕೆ ಜನರಿಂದ ಉತ್ತಮ ಸ್ಪಂದನೆ ಸಿಗುತ್ತಿದ್ದು, ಸಾವಿರಾರು ಸಲಹೆಗಳು ಹರಿದು ಬರುತ್ತಿವೆ. ಈವರೆಗೆ ಅಭಿಯಾನಕ್ಕೆ ನಿವಾಸಿಗಳಿಂದ 30,000 ಸಲಹೆಗಳು ಬಂದಿವೆ ಎಂದು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಅಭಿವೃದ್ಧಿಗಾಗಿ ನಡೆಸುತ್ತಿರುವ ಬ್ರಾಂಡ್ ಬೆಂಗಳೂರು ಅಭಿಯಾನದ ಭಾಗವಾಗಿ ಬೆಂಗಳೂರಿನ ನಿವಾಸಿ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ನಾಗರಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳೊಂದಿಗೆ ಶನಿವಾರ ವಿಧಾನಸೌಧದಲ್ಲಿ ಸಂವಾದ ನಡೆಸಲಾಗಿದೆ. ಈ ವೇಳೆ ಅಭಿಯಾನಕ್ಕೆ ನಿವಾಸಿಗಳಿಂದ 30,000 ಸಲಹೆಗಳು ಬಂದಿವೆ ಎಂದು ತಿಳಿಸಿದ್ದಾರೆ.

"ಸರ್ಕಾರ ಆಗಾಗ ನಾಗರಿಕರ ಸಮಸ್ಯೆಗಳನ್ನು ಆಲಿಸಬೇಕು. ನಿಯಮಿತವಾಗಿ ವಾರ್ಡ್ ಸಭೆಗಳನ್ನು ನಡೆಸಿ ನಾಗರಿಕರ ಅಭಿಪ್ರಾಯಗಳನ್ನು ಪಡೆಯಬೇಕು. ಬ್ರಾಂಡ್ ಬೆಂಗಳೂರಿನ ಭಾಗವಾಗಿ, ನಗರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 30,000 ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಲಾಗಿದೆ. ಬ್ರಾಂಡ್ ಬೆಂಗಳೂರು ಕುರಿತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅಭಿಪ್ರಾಯವನ್ನೂ ಪಡೆಯುತ್ತೇವೆ" ಎಂದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
"ಎಲ್ಲರ ಸಲಹೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು. ಟ್ರಾಫಿಕ್ ನಿರ್ವಹಣೆ, ಮೂಲಸೌಕರ್ಯ ಮತ್ತು ಪ್ರವಾಹವನ್ನು ಹೇಗೆ ತಡೆಯುವುದು ಮತ್ತು ಇತರ ವಿಷಯಗಳ ಕುರಿತು ನಾವು ನಾಗರಿಕರಿಂದ ಮಾಹಿತಿಯನ್ನು ಸಂಗ್ರಹಿಸುತ್ತಿದ್ದೇವೆ" ಎಂದು ತಿಳಿಸಿದ್ದಾರೆ. ಜೂನ್ 21 ರಂದು ನಗರದ ಅಭಿವೃದ್ಧಿಗೆ ಸಲಹೆಗಳನ್ನು ಆಹ್ವಾನಿಸಲು ಸರ್ಕಾರವು ಆನ್ಲೈನ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ.
ಅಕ್ರಮವಾಗಿ ತ್ಯಾಜ್ಯ ಸುರಿಯುವುದನ್ನು ತಡೆಯಲು ಕ್ಯಾಮೆರಾಗಳನ್ನು ಅಳವಡಿಸಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ''ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ವಾಹನಗಳನ್ನು ಪತ್ತೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಗರದ ಸ್ವಚ್ಛತೆಗೆ ಸಂಬಂಧಿಸಿದಂತೆ ಈ ತಿಂಗಳಲ್ಲಿ ಎರಡ್ಮೂರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ರಸ್ತೆಗಳಲ್ಲಿ ಅಕ್ರಮ ಕಸ ವಿಲೇವಾರಿ ಕುರಿತು ಈಗಾಗಲೇ ಪೌರಕಾರ್ಮಿಕರೊಂದಿಗೆ ಸಭೆ ನಡೆಸಿದ್ದೇನೆ" ಎಂದಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಫುಟ್ಪಾತ್ಗಳನ್ನು ಬೀದಿ ಬದಿ ವ್ಯಾಪಾರಿಗಳು ಅತಿಕ್ರಮಿಸುತ್ತಿದ್ದಾರೆ ಎಂಬ ದೂರಿನ ಮೇರೆಗೆ ಶಿವಕುಮಾರ್, ಪಾದಚಾರಿಗಳಿಗೆ ಅನುಕೂಲವಾಗುವಂತೆ ಸರ್ಕಾರವು ನೀತಿಯನ್ನು ರೂಪಿಸುತ್ತದೆ ಎಂದಿದ್ದಾರೆ. ಇದೇ ವೇಳೆ ಆಸ್ತಿ ದಾಖಲೆಗಳನ್ನು ನಿವಾಸಿಗಳಿಗೆ ಅವರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ರೂಪಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
"ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗಾಗಿ ಸರ್ಕಾರಿ ಕಚೇರಿಗಳ ಮೂಲಕ ಅಲೆದಾಡುವ ಅಗತ್ಯವಿಲ್ಲ. ಇಂದಿನ ಸಭೆಯಲ್ಲಿ ಆಸ್ತಿ ತೆರಿಗೆ ವಿಷಯದ ಬಗ್ಗೆ ಚರ್ಚಿಸಲಾಯಿತು ಮತ್ತು ತೆರಿಗೆ ಪಾವತಿಸುವವರು ಸಮಸ್ಯೆಗಳನ್ನು ಎದುರಿಸುತ್ತಾರೆ ಮತ್ತು ಪಾವತಿಸದವರಿಗೆ ರಕ್ಷಣೆ ಇದೆ ಎಂದು ನಾಗರಿಕರು ಎತ್ತಿ ತೋರಿಸಿದರು. ನಾವು ಆಯಾ ಆಸ್ತಿ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸಿದರೆ, ಯಾರಿಗೆ ಎಷ್ಟು ಆಸ್ತಿ ಇದೆ ಎಂಬ ಸ್ಪಷ್ಟ ಚಿತ್ರಣ ಸಿಗುತ್ತದೆ. ಆಸ್ತಿ ತೆರಿಗೆ ವಿಚಾರದಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲ. ಈ ವಿಚಾರದಲ್ಲಿ ತೆರಿಗೆ ಕಟ್ಟದವರನ್ನು ಪತ್ತೆ ಮಾಡುತ್ತೇವೆ. ನಮ್ಮ ಸಂಪನ್ಮೂಲಗಳನ್ನು ಹೆಚ್ಚಿಸದಿದ್ದರೆ ಬೆಂಗಳೂರು ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ" ಎಂದು ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬ್ರಾಂಡ್ ಬೆಂಗಳೂರು ಅಭಿಯಾನದ ದೃಷ್ಟಿಯು ಸುಧಾರಿತ ನಗರ ಯೋಜನೆ, ನವೀನ ಸಾರಿಗೆ ವ್ಯವಸ್ಥೆಗಳು ಮತ್ತು ಸುರಕ್ಷತೆ, ಅನುಕೂಲತೆ ಮತ್ತು ಸುಸ್ಥಿರತೆಯನ್ನು ಹೆಚ್ಚಿಸಲು ಪಾದಚಾರಿ ಸ್ನೇಹಿ ಮೂಲಸೌಕರ್ಯಗಳನ್ನು ನೀಡುವ ಯೋಜನೆಯನ್ನು ಒಳಗೊಂಡಿದೆ. ನಗರದಲ್ಲಿ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು, ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಮರ್ಥ ಸಾರಿಗೆ ಮತ್ತು ಸ್ಮಾರ್ಟ್ ಟ್ರಾಫಿಕ್ ನಿರ್ವಹಣೆ ಸುಧಾರಿಸುವ ಗುರಿಯನ್ನು ಹೊಂದಿದೆ.












Click it and Unblock the Notifications