ಹುತಾತ್ಮ ಯೋಧ ಎಚ್ ಗುರು ಸ್ಮಾರಕ ನಿರ್ಮಾಣಕ್ಕೆ 25 ಲಕ್ಷ ರೂ. ಬಿಡುಗಡೆಗೆ ಆದೇಶ
ಬೆಂಗಳೂರು, ಫೆಬ್ರವರಿ 20: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಳೆದ ವರ್ಷ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಮಂಡ್ಯದ ಯೋಧ ಎಚ್ ಗುರು ಅವರ ಸ್ಮಾರಕ ನಿರ್ಮಾಣಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
ಸಿಆರ್ಪಿಎಫ್ ಯೋಧ ಎಚ್. ಗುರು ಅವರ ಸ್ಮರಣಾರ್ಥ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಹಣ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ.
ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ ಪುಲ್ವಾಮಾ ಹುತಾತ್ಮ ಯೋಧನ ತಂದೆ ತಾಯಿ
ಯೋಧ ಎಚ್. ಗುರು ಅವರ ಬಲಿದಾನ ಮುಂದಿನ ಪೀಳಿಗೆಗೆ ಆದರ್ಶವಾಗಬೇಕು. ಹೀಗಾಗಿ ಅವರ ಸ್ಮಾರಕ ನಿರ್ಮಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸ್ಮಾರಕ ನಿರ್ಮಾಣ ಮಾಡಲು 25 ಲಕ್ಷ ರೂ ಅನುದಾನವನ್ನು ಮಂಡ್ಯ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಬೇಕು ಎಂದು ಯಡಿಯೂರಪ್ಪ ಆದೇಶ ಮಾಡಿದ್ದಾರೆ.
2019ರ ಫೆ 14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯದ ಯೋದ ಎಚ್. ಗುರು ಹುತಾತ್ಮರಾಗಿದ್ದರು. ಮಳವಳ್ಳಿ-ಭಾರತಿನಗರ ರಸ್ತೆಯ ಸರ್ಕಾರಿ ಭೂಮಿಯಲ್ಲಿ ಅವರ ಅಂತ್ಯಸಂಸ್ಕಾರ ನಡೆದಿತ್ತು. ಆ ಸ್ಥಳದಲ್ಲಿ ಎಚ್. ಗುರು ನೆನಪಿನಲ್ಲಿ ಸ್ಮಾರಕ ನಿರ್ಮಿಸುವುದಾಗಿ ಶಾಸಕ ಡಿ.ಸಿ. ತಮ್ಮಣ್ಣ ಭರವಸೆ ನೀಡಿದ್ದರು. ಆದರೆ ವರ್ಷ ಕಳೆದರೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ.