ಫೋನ್ ಕದ್ದಾಲಿಕೆ ಆಗಿರುವುದು ಮೇಲ್ನೋಟಕ್ಕೆ ದೃಢ: ಬಿಎಸ್ವೈ
ಬೆಂಗಳೂರು, ಆಗಸ್ಟ್ 19: ರಾಜ್ಯದಲ್ಲಿ ವರ್ಗಾವಣೆ ದಂಧೆ ಆಗುತ್ತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.
ವರ್ಗಾವಣೆ ದಂಧೆಗೆ ಎಚ್ ಡಿ ಕುಮಾರಸ್ವಾಮಿ ಅವರು ತಮ್ಮ ಸುಪುತ್ರನನ್ನೇ ಬಿಟ್ಟಿದ್ದರು. ಕುಮಾರಸ್ವಾಮಿ ಅವರಿಗೆ ದೇವರು ಒಳ್ಳೆಯದನ್ನು ಮಾಡಲಿ ಎಂದು ಯಡಿಯೂರಪ್ಪ ವ್ಯಂಗ್ಯವಾಗಿ ಹೇಳಿದರು.
ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಅಧಿಕಾರಿಗಳು ಮತ್ತು ಶಾಸಕರ ಫೋನ್ ಕದ್ದಾಲಿಕೆ ಆಗಿರುವುದು ಮೇಲ್ನೋಟಕ್ಕೆ ದೃಢವಾಗಿದೆ. ಇದು ಕುಮಾರಸ್ವಾಮಿ ಅವರ ಅವಧಿಯಲ್ಲಿ ನಡೆದಿದೆ ಎನ್ನುವುದು ಜಗತ್ತಿಗೇ ಗೊತ್ತು. ನನ್ನ ಬಾಯಿಂದ ಏಕೆ ಹೇಳಿಸುತ್ತೀರಿ? ಎಂದು ಅವರು ಹೇಳಿದರು.

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವುದಾಗಿ ಯಡಿಯೂರಪ್ಪ ಭಾನುವಾರ ತಿಳಿಸಿದ್ದರು. ಈ ಸಂಬಂಧ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ಸೋಮವಾರ ಅಧಿಕೃತ ಪತ್ರ ಬರೆಯಲಿದ್ದಾರೆ ಎನ್ನಲಾಗಿದೆ.
ಮುಖ್ಯಮಂತ್ರಿಯಾದ ಒಂದೇ ತಿಂಗಳಲ್ಲಿ ಜಿಲ್ಲಾಧಿಕಾರಿಗಳನ್ನು ಸೇರಿದಂತೆ ಎಷ್ಟೊಂದು ಮಂದಿಯನ್ನು ಕುಮಾರಸ್ವಾಮಿ ವರ್ಗಾವಣೆ ಮಾಡಿದ್ದರು. ಈಗ ವರ್ಗಾವಣೆ ಬಗ್ಗೆ ಆರೋಪ ಮಾಡಲು ಅವರಿಗೆ ನೈತಿಕತೆ ಇದೆಯೇ ಎಂದು ಜಗದೀಶ್ ಶೆಟ್ಟರ್ ಪ್ರಶ್ನಿಸಿದರು.
ಫೋನ್ ಕದ್ದಾಲಿಕೆ ಪ್ರಕರಣದ ಕುರಿತು ಮಾತನಾಡಿದ ಶೆಟ್ಟರ್, ಸಿಬಿಐ ತನಿಖೆಗೆ ಒಪ್ಪಿಸಿರುವ ಕ್ರಮವನ್ನು ಸ್ವಾಗತಿಸಿದರು. ಟೆಲಿಗ್ರಾಫ್ ಕಾಯ್ದೆ ಪ್ರಕಾರ ಫೋನ್ ಕದ್ದಾಲಿಕೆ ಶಿಕ್ಷಾರ್ಹ ಅಪರಾಧ ಎಂದು ಹೇಳಿದರು.
ಮಗ ವಿಜಯೇಂದ್ರ ಮೂಲಕ ಯಡಿಯೂರಪ್ಪ ವರ್ಗಾವಣೆ ದಂಧೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರು.












Click it and Unblock the Notifications