ದೆಹಲಿಯಿಂದ ಹಠಾತ್ ವಾಪಸ್ಸಾದ ಯಡಿಯೂರಪ್ಪ: ದಿಢೀರ್ ಬೆಳವಣಿಗೆ
Recommended Video

ಬೆಂಗಳೂರು, ಸೆಪ್ಟೆಂಬರ್ 8: ರಾಜ್ಯರಾಜಕೀಯದ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಶನಿವಾರ ಬೆಳಗ್ಗೆ ದೆಹಲಿಯಿಂದ ಹಠಾತ್ ವಾಪಸ್ ಆಗಿದ್ದಾರೆ.
ಶುಕ್ರವಾರ ಸಂಜೆಯಷ್ಟೇ ಎರಡು ದಿನಗಳ ಕಾಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅಲ್ಲಿಗೆ ತೆರಳಿದ 12 ತಾಸಿನಲ್ಲೇ ಹಠಾತ್ ವಾಪಸ್ ಬರುತ್ತಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ.
ಯಡಿಯೂರಪ್ಪ ವಾಪಸ್ ಬರುತ್ತಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟುಮಾಡಲಿದೆ ಎಂದು ಹೇಳಲಾಗುತ್ತಿದ್ದು, ಕೆಲವು ಪ್ರಮುಖ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಕೆಲವು ನಾಯಕರು ಗುಪ್ತ ಮಾತುಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಯಡಿಯೂರಪ್ಪ ಕುಟುಂಬದ ಮೂಲಗಳ ಪ್ರಕಾರ ಸ್ವಾಮೀಜಿಯೊಬ್ಬರನ್ನು ಭೇಟಿ ಮಾಡಲು ಯಡಿಯೂರಪ್ಪ ವಾಪಸಾಗುತ್ತಿದ್ದಾರೆ ಎನ್ನಲಾಗಿದೆ.ಆದರೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ತೊರೆದು ವಾಪಸ್ ಬರುತ್ತಿರುವುದು ಕೇವಲ ಸ್ವಾಮೀಜಿ ಭೇಟಿಗೆ ಮಾತ್ರವಲ್ಲ ಎನ್ನಲಾಗುತ್ತಿದೆ.
ಬಿಜೆಪಿ ಮೂಲಗಳ ಪ್ರಕಾರ ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಕೆಲವು ಬದಲಾವಣೆಗಳು ಸಂಭವಿಸಲಿದ್ದು ಆ ಹಿನ್ನೆಲೆಯಲ್ಲಿ ಯಡಿಯೂರಪ್ಪ ವರಿಷ್ಠರ ನಿರ್ದೇಶನದ ಮೇರೆಗೆ ಬೆಂಗಳೂರಿಗೆ ವಾಪಸ್ ಆಗುತ್ತಿದ್ದಾರೆ ಎನ್ನಲಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಶನಿವಾರ ರಾತ್ರಿ ವೇಳೆಗೆ ಯಡಿಯೂರಪ್ಪ ಮತ್ತೆ ದೆಹಲಿಗೆ ತೆರಳಲಿದ್ದು ಭಾನುವಾರ ಒಂದು ದಿನದ ಮಟ್ಟಿಗೆ ಕಾರ್ಯಕಾರಣಿಯಲ್ಲಿ ಭಾಗವಹಿಸಲಿದ್ದಾರೆ.
ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕೆಲವು ರಾಜಕೀಯ ಬೆಳವಣಿಗೆಗಳು ಸಂಭವಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ.












Click it and Unblock the Notifications