ಮಾ. 4 ರಿಂದ 30ರ ತನಕ ವಿಧಾನಸೌಧ ಸುತ್ತಮುತ್ತ ಪ್ರತಿಭಟನೆಗೆ ನಿರ್ಬಂಧ
ಬೆಂಗಳೂರು, ಮಾರ್ಚ್ 01; ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ 2 ಕಿ. ಮೀ. ವ್ಯಾಪ್ತಿಯಲ್ಲಿ ಮಾರ್ಚ್ 4 ರಿಂದ 30ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಪ್ರತಿಭಟನೆ ನಡೆಸುವುದು ನಿರ್ಬಂಧಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 4 ರಿಂದ 30ರ ತನಕ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ಮಾರ್ಚ್ 4ರಂದು ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ಅಧಿವೇಶನ ಮುಗಿಯುವ ತನಕ ವಿಧಾನಸೌಧದ 2 ಕಿ. ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕೆಲವು ರಾಜಕೀಯ ಪಕ್ಷಗಳು, ಸಂಘಟನೆಗಳು ವಿಧಾನಸೌಧದ ಮುಂದೆ ಧರಣಿ, ಪ್ರತಿಭಟನೆ, ಜಾಥ ನಡೆಸುವ ಸಾಧ್ಯತೆ ಇದೆ ಎಂಬ ಗುಪ್ತಚರ ಇಲಾಖೆ ಮಾಹಿತಿ ಹಿನ್ನಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ನಿರ್ಬಂಧ ಹೇರಲಾಗಿದೆ.
ಪ್ರತಿಭಟನೆ, ಧರಣಿ, ಜಾಥದಿಂದ ಸಂಚಾರ ದಟ್ಟಣೆ ಉಂಟಾಗಿಲಿದೆ. ಬಜೆಟ್ ಅಧಿವೇಶನಕ್ಕೆ ಅಡ್ಡಿಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪ್ರತಿಭಟನೆ ನಡೆಸದಂತೆ ನಿರ್ಬಂಧ ಹೇರಿದ್ದಾರೆ.
ವಿಧಾನಸೌಧದ 2 ಕಿ. ಮೀ. ಸುತ್ತಮುತ್ತ 5ಕ್ಕಿಂತ ಹೆಚ್ಚಿನ ಜನರು ಗುಂಪು ಸೇರುವುದು, ಮಾರಕಾಸ್ತ್ರಗಳನ್ನು ಹಿಡಿದು ಸಂಚಾರ ನಡೆಸುವುದು. ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುವುದು, ಘೋಷಣೆ ಕೂಗುವುದು, ಬ್ಯಾನರ್ ಹಿಡಿದು ಪ್ರತಿಭಟಿಸುವುದನ್ನು ನಿರ್ಬಂಧಿಸಲಾಗಿದೆ.
ಬೊಮ್ಮಾಯಿ ಚೊಚ್ಚಲ ಬಜೆಟ್; 2021ರ ಜುಲೈ 28ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಮಾರ್ಚ್ 4ರಂದು ಅವರು ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.
2023ರಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದೆ. ಆದ್ದರಿಂದ ಬಸವರಾಜ ಬೊಮ್ಮಾಯಿ ಮಂಡನೆ ಮಾಡುವ ಬಜೆಟ್ ಮೇಲೆ ಅಪಾರವಾದ ನಿರೀಕ್ಷೆ ಇದೆ. ಯಾವ ವಲಯಕ್ಕೆ ಅವರು ಹೆಚ್ಚಿನ ಆದ್ಯತೆ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ.
ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳ ಕಾಲ ರಾಜ್ಯಕ್ಕೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಆದರೆ ಈಗ ರಾಜ್ಯದ ಬೊಕ್ಕಸ ತುಂಬುತ್ತಿದ್ದು, ಆದಾಯ ಸಂಗ್ರಹವು ಸುಧಾರಿಸಿದೆ. ಆದ್ದರಿಂದ ಬಜೆಟ್ನಲ್ಲಿ ಕೆಲವು ದೊಡ್ಡ ಘೋಷಣೆಗಳನ್ನು ಮಾಡುವ ನಿರೀಕ್ಷೆ ಇದೆ.
ಕೇಂದ್ರದಿಂದ ಬರಬೇಕಾದ ಜಿಎಸ್ಟಿ ಪಾಲಿನ ಅನಿಶ್ಚಿತತೆ ಮುಂದುವರೆದಿದೆ. ಇದು ಬಜೆಟ್ನಲ್ಲಿನ ಹೊಸ ಘೋಷಣೆ ಮೇಲೆ ಪರಿಣಾಮ ಬೀರುತ್ತದೆ. ಬಸವರಾಜ ಬೊಮ್ಮಾಯಿ ಹೊಸ ಘೋಷಣೆಗಳನ್ನು ಮಾಡಿದರೆ ಅನುದಾನ ನೀಡುವುದು ಮುಂದಿನ ಸವಾಲು ಆಗಲಿದೆ.
ಹೊಸ ಯೋಜನೆಗಳ ಜೊತೆಗೆ ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ ಮುಂತಾದ ಇಲಾಖೆಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳಿಗೆ ಅನುದಾನ ನೀಡಬೇಕಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಿಗೆ ಅನುದಾನ ಕೊಡಬೇಕಿದೆ.
ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ದೊಡ್ಡ ಮೊತ್ತದ ಹೊಸ ಘೋಷಣೆಗಳನ್ನು ಮಾಡಿಲ್ಲ. ಆದರೆ ಮುಂದಿನ ವರ್ಷ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದರಿಂದ ಜನರನ್ನು ಓಲೈಕೆ ಮಾಡಲು ಹೊಸ ಘೋಷಣೆಗಳು ಅನಿವಾರ್ಯವಾಗಿವೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅನುದಾನ ಹಂಚಿಕೆ ಆಧಾರದ ಮೇಲೆ ರೈಲು ಸೇರಿದಂತೆ ವಿವಿಧ ಕಾಮಗಾರಿ ನಡೆಯುತ್ತಿದೆ ಇವುಗಳಿಗೆ ಬಜೆಟ್ನಲ್ಲಿ ಅನುದಾನ ನೀಡಬೇಕಿದೆ. ಅಲ್ಲದೇ ರಾಜ್ಯದಲ್ಲಿ 3 ವಿಮಾನ ನಿಲ್ದಾಣ ಕಾಮಗಾರಿ ನಡೆಯುತ್ತಿದೆ. ಇವುಗಳನ್ನು ನಿಗದಿತ ಗುರಿಯೊಳಗೆ ಪೂರ್ಣಗೊಳಿಸಲು ಅನುದಾನ ಹಂಚಿಕೆ ಅನಿವಾರ್ಯವಾಗಿದೆ.
ಮಾರ್ಚ್ 4ರ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ.












Click it and Unblock the Notifications