ಉಪ ಚುನಾವಣೆ: ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ
ಬೆಂಗಳೂರು, ನವೆಂಬರ್ 20: ಉಪ ಚುನಾವಣೆ ಸನ್ನಿಹಿತವಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಿಜೆಪಿ ಕಚೇರಿಯಲ್ಲಿ ಇಂದು ಮಹತ್ವದ ಸಭೆ ಕರೆದಿದ್ದಾರೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ನಡೆಯಲಿದೆ. ಸಭೆಯಲ್ಲಿ ಉಪ ಚುನಾವಣೆ ಉಸ್ತುವಾರಿ ವಹಿಸಿರುವ ಪಕ್ಷದ ನಾಯಕರು ಪಾಲ್ಗೊಳ್ಳಲಿದ್ದಾರೆ.
ಉಪಚುನಾವಣೆ, ಡಿಸಿಎಂ ಪರಮಾಪ್ತನೇ ಜೆಡಿಎಸ್ ಅಭ್ಯರ್ಥಿ: ಅಕ್ಷರಶಃ ಬೆಚ್ಚಿಬಿದ್ದ ಬಿಜೆಪಿ
ವಿಜಯನಗರ, ಹೊಸಕೋಟೆ, ಗೋಕಾಕ್ ಕ್ಷೇತ್ರಗಳಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರ ಹಿಂದಕ್ಕೆ ಪಡೆಯಲು ಅವರ ಮನ ಒಲಿಸುವುದು, ಪ್ರಚಾರ ತಂತ್ರ, ರಾಜ್ಯ ನಾಯಕರ ಪ್ರವಾಸ, ಉಸ್ತುವಾರಿಗಳ ಕಾರ್ಯತಂತ್ರಗಳ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ.
ಇನ್ನೊಂದೆಡೆ ಲಕ್ಷ್ಮಣ ಸವದಿ ಮನೆಯಲ್ಲಿ ಅಭ್ಯರ್ಥಿಗಳನ್ನೇ ಹೊರಗಿಟ್ಟು ಸಭೆ ನಡೆಸಿದ್ದಾರೆ. ಅಥಣಿ ಹಾಗೂ ಕಾಗವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳಾದ ಮಹೇಶ್ ಕುಮಟಳ್ಳಿ ಮತ್ತು ಶ್ರೀಮಂತ ಪಾಟೀಲ ಅವರು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಯಲ್ಲಿ ಬಂದಿದ್ದ ಪಕ್ಷದ ಮುಖಂಡರು ಪ್ರತ್ಯೇಕವಾಗಿ ಸಭೆ ನಡೆಸಿದ್ದರು.
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಮನೆಯಲ್ಲಿ ನಡೆದ ಸಭೆಯಲ್ಲಿ ಅಭ್ಯರ್ಥಿಗಳೇ ಇರಲಿಲ್ಲ. ಸಚಿವರಾದ ಜಗದೀಶ್ ಶೆಟ್ಟರ್ , ಕೆಎಸ್ ಈಶ್ವರಪ್ಪ, ಸಿಸಿ ಪಾಟೀಲ್, ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿ ಮಠ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಇನ್ನೊಂದೆಡೆ ಬಂಡಾಯ ಶಮನ ಮಾಡುವಲ್ಲಿ ಬಿಎಸ್ ಯಡಿಯೂರಪ್ಪ ಬಹುಪಾಲು ಯಶಸ್ವಿಯಾಗಿದ್ದಾರೆ.