KS Eshwarappa: ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಬಗ್ಗೆ ಭವಿಷ್ಯ ನುಡಿದ ಕೆಎಸ್ ಈಶ್ವರಪ್ಪ
ಬೆಂಗಳೂರು, ಮಾರ್ಚ್ 21: ಸದ್ಯ ರಾಜ್ಯ ಬಿಜೆಪಿಯಲ್ಲಿ ಯಾವುದು ಸರಿಯಾಗಿಲ್ಲ. ಪಕ್ಷದ ಘಟಾನುಘಟಿ ನಾಯಕರೇ ಬಂಡಾಯ ಎದ್ದಿದ್ದಾರೆ. ಶಿವಮೊಗ್ಗದಿಂದ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ತಾನು ಸ್ವತಂತ್ರ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಜೊತೆಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇದ್ದಾರೆ.
ಇದೇ ವೇಳೆ ಲೋಕಸಭಾ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ಅವರ ಭವಿಷ್ಯವನ್ನು ಅವರೇ ಹೇಳಿದ್ದಾರೆ. ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಮ್ಮ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ.

ಶಿವಮೊಗ್ಗದಿಂದ ತಾನು ಸ್ವತಂತ್ರ ಅಭ್ಯರ್ಥಿ ಎಂದು ಘೋಷಿಸಿರುವ ಮಾಜಿ ಡಿಸಿಎಂ ಈಶ್ವರಪ್ಪ, ಬಿಜೆಪಿ ಕೇಂದ್ರ ನಾಯಕತ್ವವು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬೇಡಿಕೆಗಳಿಗೆ ತಲೆಬಾಗಿ ವಿಜಯೇಂದ್ರ ಅವರನ್ನು ರಾಜ್ಯ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗ ಕ್ಷೇತ್ರದಲ್ಲಿ ಈಶ್ವರಪ್ಪ ಸ್ಪರ್ಧಿಸಲಿದ್ದು, ಪಕ್ಕದ ಹಾವೇರಿ ಭಾಗದಲ್ಲಿ ತಮ್ಮ ಪುತ್ರ ಕೆ ಇ ಕಾಂತೇಶ್ಗೆ ಟಿಕೆಟ್ ಕೊಡಿಸುವ ಮಾತನ್ನು ಬಿಎಸ್ ಯಡಿಯೂರಪ್ಪ ಅವರು ಮುರಿದಿದ್ದಾರೆ ಎಂದು ಆರೋಪಿಸಿದ್ದಾರೆ. ಆದರೆ, ಇದನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನಿರಾಕರಿಸಿದ್ದಾರೆ.

ನಾನು ಚುನಾವಣೆಯಲ್ಲಿ ಗೆದ್ದ ನಂತರ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲು ಆರು ತಿಂಗಳು ವಿಳಂಬವಾಗಿದ್ದೇಕೆ..? ಯಾಕೆ ತಡವಾಯಿತು..? ಕೇಂದ್ರ ನಾಯಕರು ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಏರಿಸಲು ಸಿದ್ಧರಿಲ್ಲ. ಯಡಿಯೂರಪ್ಪನವರ ಪಟ್ಟಿನಿಂದಾಗಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.
ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಯಡಿಯೂರಪ್ಪನವರಂತೆ ಕರ್ನಾಟಕದಲ್ಲಿ ಪ್ರಬಲ ಲಿಂಗಾಯತ ಸಮುದಾಯವಾಗಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಏಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ತಮಿಳುನಾಡು ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದ ಸಿಟಿ ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಆದರೆ ಅವರನ್ನೂ ಆ ಸ್ಥಾನಕ್ಕೆ ಪರಿಗಣಿಸಲಿಲ್ಲ ಎಂದು ಈಶ್ವರಪ್ಪ ಮಾಜಿ ಸಿಎಂ ಕುಟುಂಬ ರಾಜಕಾರಣದ ವಿರುದ್ಧ ಟೀಕಿಸಿದ್ದಾರೆ.
ಯಡಿಯೂರಪ್ಪ ಅವರು ಪಕ್ಷದ ಪ್ರಾತಿನಿಧ್ಯಕ್ಕಿಂತ ಕೌಟುಂಬಿಕ ಹಿತಾಸಕ್ತಿಗಳಿಗೆ ಆದ್ಯತೆ ನೀಡುತ್ತಿದ್ದಾರೆ. ನಾಯಕತ್ವ ನೇಮಕಾತಿಯಲ್ಲಿ ವ್ಯವಸ್ಥಿತ ಪಕ್ಷಪಾತ ನಡೆಯುತ್ತಿದೆ. ಯಡಿಯೂರಪ್ಪ ಅವರಿಗೆ ಲಿಂಗಾಯತ, ಒಕ್ಕಲಿಗ ಅಥವಾ ಹಿಂದುಳಿದ ಜಾತಿಯ ಯಾರೇ ಆಗಲಿ ಬಿಜೆಪಿ ರಾಜ್ಯಾಧ್ಯಕ್ಷರಾಗುವುದು ಬೇಡ. ಅವರು ತಮ್ಮ ಮಗನೆ ಹುದ್ದೆಯನ್ನು ಅಲಂಕರಿಸಬೇಕೆಂದು ಬಯಸಿದ್ದರು. ನಾನು ಆ ವ್ಯವಸ್ಥೆಯ ವಿರುದ್ಧ ಹೋರಾಡುತ್ತಿದ್ದೇನೆ ಎಂದು ಈಶ್ವರಪ್ಪ ಹೇಳಿಕೊಂಡಿದ್ದಾರೆ.
ಈಶ್ವರಪ್ಪ ನಡೆ ಖಂಡಿಸಿದ ಯಡಿಯೂರಪ್ಪ
ಮಾಜಿ ಡಿಸಿಎಂ ಆರೋಪಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಯಡಿಯೂರಪ್ಪ "ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ನಂತರ ರಾಜ್ಯದಲ್ಲಿ ಪಕ್ಷ ಹೇಗೆ ಬೆಳೆದಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮಗನಿಗೆ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಆರೋಪ ಮಾಡುತ್ತಿದ್ದಾರೆ. ಇದು ಸರಿಯಲ್ಲ. ಈಶ್ವರಪ್ಪ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಅಭ್ಯರ್ಥಿಗಳ ಆಯ್ಕೆಯ ನಿರ್ಧಾರವನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಸರ್ವಾನುಮತದಿಂದ ತೆಗೆದುಕೊಳ್ಳುತ್ತದೆ" ಎಂದು ಹೇಳಿದ್ದಾರೆ.












Click it and Unblock the Notifications