ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಡಿಕೆ ಶಿವಕುಮಾರ್ ಕಿಡಿ
ಬೆಂಗಳೂರು, ಡಿಸೆಂಬರ್ 18: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ. ಈ ಕಾಯ್ದೆ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ, ನಾವು ಹೋರಾಟ ಮಾಡುತ್ತೇವೆ. ಕೇಂದ್ರ ಸರ್ಕಾರವು ಕೇವಲ ಕೆಲ ವರ್ಗ, ಧರ್ಮದವರನ್ನು ಗುರಿಯಾಗಿಸಬಾರದು ಎಲ್ಲ ವರ್ಗ, ಜಾತಿ, ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಪೌರತ್ವ ಕಾಯ್ದೆ ಜಾರಿಗೊಳಿಸಲಾಗಿಸುವುದರ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಡಿಕೆಶಿ, ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಹಿತಾಸಕ್ತಿ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ಹೀಗಾಗಿ ಇದೊಂದು ಅಸಂವಿಧಾನಿಕ ಕಾಯ್ದೆ. ಭಾರತ ಜಾತ್ಯತೀತ ರಾಷ್ಟ್ರ. ಇಲ್ಲಿ ಯಾವುದೇ ಪ್ರಜೆ ತಾನು ಪ್ರಾರ್ಥನೆ ಮಾಡುವ ದೇವರನ್ನು, ಪಾಲಿಸುವ ಧರ್ಮವನ್ನು ಆಯ್ಕೆ ಮಾಡುವುದು ಆತನ ಸ್ವಾತಂತ್ರ್ಯಕ್ಕೆ ಬಿಟ್ಟದ್ದು. ಪ್ರಜೆಗಳಿಗೆ ಸಂವಿಧಾನದ ಮೂಲಭೂತ ಹಕ್ಕಿನ ಅಡಿಯಲ್ಲಿ ಈ ಸ್ವಾತಂತ್ರ್ಯ ನೀಡಲಾಗಿದೆ. ಹೀಗಾಗಿ ಸರಕಾರ ಆಗಲಿ, ಯಾವುದೇ ಪಕ್ಷವಾಗಲಿ ದೇಶದ ಜನರನ್ನು ಇಂತಹುದೇ ಧರ್ಮವನ್ನು ಪಾಲಿಸುವಂತೆ ಬಲವಂತ ಹೇರುವಂತಿಲ್ಲ. ಹೀಗಾಗಿ ಕೇಂದ್ರ ಸರಕಾರದ ನಡೆ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದ್ದು, ನಾಚಿಕೆಗೇಡಿನ ವಿಚಾರ ಎಂದರು.

ಅಸ್ಸಾಂ ಹಾಗೂ ಇತರೆ ಭಾಗಗಳಲ್ಲಿ ಇಂಟರ್ನೆಟ್ ಸೌಕರ್ಯವನ್ನು ಕಡಿತಗೊಳಿಸುತ್ತಾರೆ. ಇನ್ನೊಂದೆಡೆ ಶಾಂತಿ ಕಾಪಾಡುವಂತೆ ಇಂಟರ್ನೆಟ್ ಮೂಲಕವೇ ಪ್ರಧಾನಿ ಸಂದೇಶ ರವಾನಿಸುತ್ತಾರೆ. ಈ ಸಂದೇಶ ಅವರಿಗೆ ಹೇಗೆ ತಲುಪುತ್ತದೆ? ನನ್ನ ಪ್ರಕಾರ ದೇಶದ ಪ್ರತಿಯೊಬ್ಬರಿಗೂ ತಮ್ಮ ಪ್ರತಿಭಟನೆ ಮಾಡುವ ಅಧಿಕಾರವಿದೆ. ಸಾಮಾನ್ಯ ಪ್ರಜೆ ತನ್ನ ಧ್ವನಿಯನ್ನು ಎತ್ತುವುದೇ ಈ ಸಂದರ್ಭದಲ್ಲಿ ಹೀಗಾಗಿ ಪ್ರಜಾಪ್ರಭುತ್ವದಲ್ಲಿ ಇದಕ್ಕೆ ಅವಕಾಶವಿದೆ ಎಂದು ಹೇಳಿದರು.
ಬಿಜೆಪಿ ಸರಕಾರಕ್ಕೆ ಬಹುಮತವಿದೆ ನಿಜ. ಕಳೆದ ವಾರ ಕಾಯ್ದೆಗೆ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ. ಆದರೆ ಸಮಾಜದ ಎಲ್ಲ ವರ್ಗಗಳಿಗೂ ಕಾಯ್ದೆಯಿಂದ ನೆರವಾಗಬೇಕು. ಕೇವಲ ಒಂದು ವರ್ಗ ಒಂದು ಧರ್ಮಕ್ಕೆ ಮಾತ್ರ ಸೀಮಿತವಾಗಬಾರದು. ದೇಶದೆಲ್ಲೆಡೆ ಹಾಗೂ ರಾಜ್ಯದಲ್ಲೂ ಕಾಂಗ್ರೆಸ್ ಹೋರಾಟ ಮುಂದುವರೆಯಲಿದೆ ಎಂದರು.












Click it and Unblock the Notifications