"ಕಾಲೇಜುಗಳನ್ನು ಕ್ಷುಲ್ಲಕ ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವ ಬಿಜೆಪಿ'
ಬೆಂಗಳೂರು, ಜನವರಿ 10: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರವಾಗಿ ಬೆಂಗಳೂರಿನಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದ ವೇಳೆ, ವಿದ್ಯಾರ್ಥಿನಿಯರೊಂದಿಗೆ ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ (ಕೆಪಿಸಿಸಿ) ಕಿಡಿ ಕಾರಿದೆ.
ಈ ಕುರಿತು ಶುಕ್ರವಾರ ಮಾತನಾಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, "ಜ್ಯೋತಿ ನಿವಾಸ ಕಾಲೇಜಿನಲ್ಲಿ ಬಿಜೆಪಿ ಕಾರ್ಯಕರ್ತರು ವಿದ್ಯಾರ್ಥಿನಿಯರನ್ನು ಬೆದರಿಸಿ, ಬಲವಂತವಾಗಿ ಸಿಎಎ ಪರ ಸಹಿ ಹಾಕಿಸುವ ಪ್ರಯತ್ನ ಮಾಡಿದ್ದು ತೀವ್ರ ಖಂಡನೀಯ. ಬಿಜೆಪಿ ಸರ್ಕಾರ ಎಲ್ಲಾ ವಿದ್ಯಾ ಕೇಂದ್ರಗಳನ್ನು ತನ್ನ ಕ್ಷಲ್ಲಕ ರಾಜಕೀಯ ತಾಣ ಮಾಡಿಕೊಂಡು, ವಿದ್ಯಾರ್ಥಿಗಳ ಧ್ವನಿ ಅಡಗಿಸುವ ಕೆಲಸ ಮಾಡುತ್ತಿದೆ. ಇದು ನಮ್ಮ ಶಿಕ್ಷಣ ವ್ಯವಸ್ಥೆ ಮೇಲೆ ಅತ್ಯಂತ ಗಂಭಿರ ಪರಿಣಾಮ ಬೀರಲಿದೆ' ಎಂದು ಆರೋಪಿಸಿದ್ದಾರೆ.
'ಬಲವಂತವಾಗಿ ಸಹಿ ಹಾಕಿಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ತಪ್ಪಿತಸ್ಥರನ್ನು ಬಂಧಿಸಿ, ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾಗುತ್ತದೆ' ಎಂದು ಈಶ್ವರ ಖಂಡ್ರೆ ಎಚ್ಚರಿಸಿದ್ದಾರೆ.

ಶುಕ್ರವಾರ ಬಿಜೆಪಿ ಕಾರ್ಯಕರ್ತರು ವಿದ್ಯಾರ್ಥಿಗಳಿಗೆ ಸಿಎಎ ಬಗ್ಗೆ ಅರಿವು ಮೂಡಿಸಿ ಸಹಿ ಸಂಗ್ರಹಿಸಲು ಕೋರಮಂಗಲದ ಜ್ಯೋತಿ ನಿವಾಸ ಕಾಲೇಜಿಗೆ ಭೇಟಿ ನೀಡಿದಾಗ, ಅಲ್ಲಿನ ವಿದ್ಯಾರ್ಥಿನಿಯರು ಹಾಗೂ ಬಿಜೆಪಿ ಕಾರ್ಯಕರ್ತರು ನಡುವೆ ಗಲಾಟೆ ನಡೆದಿತ್ತು. ಸಹಿ ಮಾಡಲು ಬಿಜೆಪಿ ಕಾರ್ಯಕರ್ತರು ಬಲವಂತ ಮಾಡಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಈ ಬಗ್ಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಪರ ವಿರೋಧದ ಚರ್ಚೆ ಆರಂಭಿಸಿದ್ದರು. ಕಾಂಗ್ರೆಸ್ನ ಹಲವು ಮುಖಂಡರು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ನಡೆದುಕೊಂಡ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಿ ಎಂದು ಆಗ್ರಹಿಸಿದ್ದರು. ಆದರೆ ಈ ಬಗ್ಗೆ ಇದುವರೆಗೂ ಯಾವುದೇ ದೂರು ದಾಖಲಾಗಿಲ್ಲ.












Click it and Unblock the Notifications