Breaking:ಲೋಕಾಯುಕ್ತ ತಿದ್ದುಪಡಿ ಕಾಯ್ದೆಗೆ ಸಚಿವ ಸಂಪುಟ ಅಸ್ತು
ಬೆಂಗಳೂರು ಸೆಪ್ಟಂಬರ್ 14: ಕರ್ನಾಟಕ ಸರ್ಕಾರವು ಹೊಸದಾಗಿ ಜಾರಿಗೆ ತಂದಿದ್ದ ಭ್ರಷ್ಟಾಚಾರ ನಿಗ್ರಹ ದಳ ರದ್ದುಪಡಿಸಿದ ಹೈಕೋರ್ಟ್ ಆದೇಶದ ಬೆನ್ನಲ್ಲೆ ಲೋಕಾಯುಕ್ತಕ್ಕೆ ಬಲ ತುಂಬಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಲೋಕಾಯುಕ್ತ ತಿದ್ದುಪಡಿ (2022) ಕಾಯ್ದೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಲೋಕಾಯುಕ್ತ ಸಂಸ್ಥೆ ಬಲಪಡಿಸಲು ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ ಆಗಿದೆ. ಲೋಕಾಯುಕ್ತ ನ್ಯಾಯಮೂರ್ತಿಗಳ ವೇತನ ವನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ವೇತನಕ್ಕೆ ಸರಿಸಮಾನವಾಗಿ ನೀಡಲು ಮತ್ತು ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಲೋಕಾಯುಕ್ತಕ್ಕೆ ಹೆಚ್ಚುವರಿ ರಿಜಿಸ್ಟ್ರಾರ್ ನೇಮಕಕ್ಕೂ ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯ ಸರ್ಕಾರ ಹೈಕೋಟ್ ಆದೇಶ ಪ್ರಟಕವಾದ ನಂತರ ತೀರ್ಪು ಪಾಲಿಸುವ ನಿಟ್ಟಿನಲ್ಲಿ ಭ್ರಷ್ಟಚಾರ ನಿಗ್ರಹ ದಳ (ಎಸಿಬಿ) ಅಧಿಕಾರ ರದ್ದುಪಡಿಸಿದೆ. ಇದರ ಬೆನ್ನಲ್ಲೆ ಲೋಕಾಯುಕ್ತ ಪೊಲೀಸರಿಗೆ ಅಧಿಕಾರ ನೀಡಿದೆ. ಎಸಿಬಿಯಲ್ಲಿ ಭ್ರಷ್ಟಾಚಾರ ನಿಗ್ರಹ ಕುರಿತು ಬಾಕಿ ಇದ್ದ ತನಿಖೆಗಳ ಪ್ರಕರಣಗಳನ್ನು ಲೋಕಾಯುಕ್ತ ವರ್ಗಾಯಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ
ಇದರ ಜತೆಗೆ ಬುಧವಾರ ಸಭಾಪತಿ ಚುನಾವಣೆ ನಡೆಸಲು ತೀರ್ಮಾನಿಸಿರುವ ಸರ್ಕಾರ, ವಿಧಾನ ಪರಿಷತ್ನಲ್ಲಿ ಸಭಾಪತಿ ಚುನಾವಣೆ ನಡೆಸುವ ಸಂಬಂಧ ರಾಜ್ಯಪಾಲರಿಗೆ ಪತ್ರ ಬರೆದು ಶಿಪಾರಸು ಮಾಡಲಿದೆ.
ಇನ್ನು ಹುಬ್ಬಳ್ಳಿಯಲ್ಲಿ ಜಯದೇವ ಆಸ್ಪತ್ರೆ ಸ್ಥಾಪನೆಗೆ 250 ಕೋಟಿ ರೂ. ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಜಲ ಜಿವನ್ ಮಿಷನ್ ಅಡಿ ವಿವಿಧ ಜಿಲ್ಲೆಗಳ ಗ್ರಾಮಗಳಿಗೆ ಕುಡಿಯುವ ನೀರಿನ ಒದಗಿಸುವ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಅಲ್ಲದೇ ರಾಜ್ಯ ಪ್ರವಾಸೋದ್ಯಮ ನೀತಿ 2020-25 ಕ್ಕೆ ಕೆಲವು ತಿದ್ದುಪಡಿ ತಂದು ಅದರ ಜಾರಿಗೆ ಅಂತಿಮ ಒಪ್ಪಿಗೆ ಸೂಚಿಸಿದೆ.