ಅಧಿವೇಶನದ ನಂತರ ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ
ಬೆಂಗಳೂರು, ಜೂ. 19 : ವಿಧಾನಮಂಡಲ ಅಧಿವೇಶನದ ಬಳಿಕ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ. ಸಂಪುಟ ವಿಸ್ತರಣೆ ವೇಳೆಯಲ್ಲಿ ಕೆಲವು ಸಚಿವರನ್ನು ಕೈಬಿಟ್ಟು, ಕೆಲವು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಗುರುವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ್, ಸೋಮವಾರದಿಂದ ಆರಂಭವಾಗುವ ವಿಧಾನಸಭಾ ಅಧಿವೇಶನ ಮುಗಿದ ಬಳಿಕ ರಾಜ್ಯ ಸಚಿವ ಸಂಪುಟವನ್ನು ವಿಸ್ತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಜೂ.23ರಿಂದ ಜುಲೈ 30ರರೆಗೆ ಅಧಿವೇಶನ ನಡೆಯಲಿದ್ದು, ನಂತರ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ಸಂಪುಟ ವಿಸ್ತರಣೆ ಮಾಡುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ. ಜೂ.28 ಮತ್ತು 29ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಲಾಗುವುದು ಎಂದು ಪರಮೇಶ್ವರ್ ಹೇಳಿದರು. [ಜೂನ್ 23ರಿಂದ ಅಧಿವೇಶನ]
ಸಚಿವರಿಗೆ ಕೊಕ್ : ಸಂಪುಟ ವಿಸ್ತರಣೆ ಮಾಡುವ ಸಮಯದಲ್ಲಿ ಸರಿಯಾಗಿ ಕಾರ್ಯನಿರ್ವಹಿಸದಿರುವ ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ ಮತ್ತು ಕೆಲವು ಸಚಿವರ ಖಾತೆಗಳನ್ನು ಬದಲಾವಣೆ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.[ಪರಿಷತ್ ಪ್ರವೇಶಿಸಿದ ಪರಮೇಶ್ವರ್]
ಹೈಕಮಾಂಡ್ ನಿರ್ಧಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸೇರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಪರಮೇಶ್ವರ್, ತಮಗೆ ಸಚಿವ ಸ್ಥಾನ ನೀಡಬೇಕೋ? ಅಥವಾ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೋ? ಎಂಬ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.
ಕೋಳಿವಾಡ ದೆಹಲಿಗೆ : ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ರಾಣೆಬೆನ್ನೂರು ಶಾಸಕ ಕೆ.ಬಿ.ಕೋಳಿವಾಡ ಗುರುವಾರ ದೆಹಲಿಗೆ ತೆರಳಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿರುವ ಅವರು, ಸಂಪುಟ ವಿಸ್ತರಣೆ ಸಮಯದಲ್ಲಿ ತಮಗೆ ಸಚಿವ ಸ್ಥಾನ ನೀಡುವಂತೆ ಮನವಿ ಸಲ್ಲಿಸಲಿದ್ದಾರೆ.












Click it and Unblock the Notifications