ನನ್ನೊಂದಿಗೆ ಚರ್ಚಿಸಿದ ಬಳಿಕವೇ ಹೈಕಮಾಂಡ್ ತೀರ್ಮಾನಿಸಿದೆ: ಬಿಎಸ್ವೈ
ಬೆಂಗಳೂರು, ಜೂ. 09: ರಾಜ್ಯಸಭಾ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಅಚ್ಚರಿಯ ಆಯ್ಕೆ ಮಾಡಿದೆ. ಹೈಕಮಾಂಡ್ ಆಯ್ಕೆಯಿಂದ ರಾಜ್ಯ ಬಿಜೆಪಿ ನಾಯಕರು ಗೊಂದಲಕ್ಕೆ ಈಡಾಗಿದ್ದು ನಿಜ. ಆದರೆ ಹೈಕಮಾಂಡ್ ವಿರುದ್ಧ ಧ್ವನಿ ಎತ್ತುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ. ರಾಜ್ಯಸಭೆ ಚುನಾವಣೆಗೆ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರ ಆಯ್ಕೆಯನ್ನು ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ವಾಗತಿಸಿದ್ದರು.
ರಾಜ್ಯಸಭಾ ಚುನಾವಣೆಗೆ ಇಬ್ಬರು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಬೇರೆ ರಾಜ್ಯಗಳಲ್ಲಿಯೂ ಇದೇ ರೀತಿಯ ತೀರ್ಮಾನಗಳಾಗಿವೆ ಎಂದಿದ್ದಾರೆ. ಕೇಂದ್ರದ ನಾಯಕರು ಸಾಮಾನ್ಯ ಕಾರ್ಯಕರ್ತರಿಗೆ ಸೀಟು ಕೊಟ್ಟಿದ್ದಾರೆ. ಆ ಮೂಲಕ ಕಾರ್ಯಕರ್ತರಿಗೆ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸ್ತೇನೆ ಎಂದಿದ್ದಾರೆ.

ಅಶೋಕ್ ಗಸ್ತಿ ಹಾಗೂ ಈರಣ್ಣ ಕಡಾಡಿ ಇಬ್ಬರೂ ನಮ್ಮ ಅಭ್ಯರ್ಥಿಗಳಾಗಿದ್ದಾರೆ. ಅವರಿಬ್ಬರೂ ರಾಜ್ಯಸಭೆಯಲ್ಲಿ ಒಳ್ಳೆಯ ಕೆಲಸ ಮಾಡ್ತಾರೆ ಎಂಬ ವಿಶ್ವಾಸವಿದೆ. ಬಿಜೆಪಿಯಲ್ಲಿ ಮಾತ್ರ ಇಂತಹ ತೀರ್ಮಾನ ಮಾಡುವುದಕ್ಕೆ ಸಾಧ್ಯವಿದೆ. ನಾವು ರಾಜ್ಯ ಬಿಜೆಪಿ ಕೋರ್ ಕಮಿಟಿಯಲ್ಲಿ ಕೆಲವು ಹೆಸರುಗಳನ್ನು ಸೂಚಿಸಿದ್ದೇವು. ಆದರೆ ಆದರೆ ಅಂತಿಮವಾಗಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನನ್ನ ಬಳಿ ಚರ್ಚೆ ಮಾಡಿದ್ದರು. ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯಸಭೆ ಸೀಟು ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದರು. ನನ್ನೊಂದಿಗೆ ಚರ್ಚಿಸಿದ ಬಳಿಕ ಪಟ್ಟಿ ಪ್ರಕಟವಾಗಿದೆ. ಬೇರೆ ರಾಜ್ಯಗಳಲ್ಲೂ ಇದೇ ರೀತಿ ತೀರ್ಮಾನಗಳು ಆಗಿವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.












Click it and Unblock the Notifications