ಆರ್ ಆರ್ ನಗರ ಉಪಚುವಣೆ: ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಬೆಂಗಳೂರು, ಅ. 41: ರಾಜರಾಜೇಶ್ವರಿ ನಗರ ಉಪ ಚುನಾವಣೆಯ ಕಣ ರಂಗೇರಿದೆ. ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಹೀಗೆ ಮೂರು ಪಕ್ಷಗಳ ಅಭ್ಯರ್ಥಿಗಳು ಇವತ್ತು ನಾಮಪತ್ರ ಸಲ್ಲಿಸಿದರು. ಆರ್ ಆರ್ ನಗರದ ಬಿಬಿಎಂಪಿ ಕಚೇರಿಯಲ್ಲಿ ತಮ್ಮ ತಮ್ಮ ನಾಯಕರೊಂದಿಗೆ ತೆರಳಿ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಇದೇ ಅಕ್ಟೋಬರ್ 16 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಮುನಿರತ್ನ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದರಿಂದ ಉಪ ಚುನಾವಣೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು ಈಗ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ನವೆಂಬರ್ 3 ರಂದು ಆರ್ ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ.
RR ನಗರ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಆಸ್ತಿ, ಸಾಲ ವಿವರ
ಕಾಂಗ್ರೆಸ್ ಪಕ್ಷದಿಂದ ದಿ. ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಎಚ್. ಕುಸುಮಾ, ಬಿಜೆಪಿಯಿಂದ ಮಾಜಿ ಶಾಸಕ ಮುನಿರತ್ನ ಹಾಗೂ ಜೆಡಿಎಸ್ ಪಕ್ಷದಿಂದ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ನಾಯಕರೊಂದಿಗೆ ಯಾರಿದ್ದರು? ಇಲ್ಲಿದೆ ಮಾಹಿತಿ.
ಮುನಿರತ್ನ ನಾಮಪತ್ರ ಸಲ್ಲಿಕೆ
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಮುನಿರತ್ನ ಅವರು ನಾಮಪತ್ರ ಸಲ್ಲಿಸಿದ್ದಾರೆ. ಆರ್ ಆರ್ ನಗರದ ಬಿಬಿಎಂಪಿ ಕಚೇರಿಯಲ್ಲಿ ಚುನಾವಣಾಧಿಕಾರಿ ನಾಗರಾಜ್ ಅವರಿಗೆ ಮುನಿರತ್ನ ನಾಮಪತ್ರ ಸಲ್ಲಿಸಿದರು. ಡಿಸಿಎಂ ಅಶ್ವಥ್ ನಾರಾಯಣ್, ಸಚಿವ ಆರ್. ಅಶೋಕ್ ಉಪಸ್ಥಿತರಿದ್ದರು. ಅಭ್ಯರ್ಥಿಯೊಂದಿಗೆ ಬರಲು ಇಬ್ಬರಿಗೆ ಮಾತ್ರ ಅವಕಾಶ ಕೊಟ್ಟಿರುವುದರಿಂದ ಸಚಿವರಾದ ಡಾ. ಸುಧಾಕರ್ ಹಾಗೂ ಭೈರತಿ ಬಸವರಾಜ್ ಹೊರೆಗ ಉಳಿದರು.
ಕುಸುಮಾ ನಾಮಪತ್ರ ಸಲ್ಲಿಕೆ
ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಚ್. ಕುಸುಮಾ ನಾಮಪತ್ರ ಸಲ್ಲಿಸಿರದರು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸುವ ಮೊದಲು ಎಚ್. ಕುಸುಮಾ ಅವರು ನಾಗರಬಾವಿ ಬಿಡಿಎ ಕಾಂಪ್ಲೆಕ್ಸ್ ಬಳಿಯ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ
ಆರ್ ಆರ್ ನಗರ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಕೃಷ್ಣಮೂರ್ತಿ ನಾಮಪತ್ರ ಸಲ್ಲಿಕೆ ಮಾಡಿದರು. ಆರ್ ಆರ್ ನಗರ ಬಿಬಿಎಂಪಿ ಕಚೇರಿಯಲ್ಲಿ ಚುನಾವಣಾಧಿಕಾರಿ ನಾಗರಾಜ್ ಅವರಿಗೆ ನಾಮಪತ್ರವ ಸಲ್ಲಿಸಿದರು. ಆ ಸಂದರ್ಭದಲ್ಲಿ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರ ಎಚ್.ಡಿ. ಕುಮಾರಸ್ವಾಮಿ ಹಾಗೂ ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ಜೊತೆಗಿದ್ದರು.
ಸಿದ್ದರಾಮಯ್ಯ-ಎಚ್ಡಿಕೆ ಮುಖಾಮುಖಿ
ತಮ್ಮ ತಮ್ಮ ಪಕ್ಷಗಳ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಎಚ್.ಡಿ. ಕುಮಾರಸ್ವಾಮಿ ಅವರು ಆರ್ ಆರ್ ನಗರದ ಬಿಬಿಎಂಪಿ ಕಚೇರಿಯಲ್ಲಿ ಮುಖಾಮುಖಿಯಾದರು. ಮೈತ್ರಿ ಸರ್ಕಾರದ ಪತನದ ಬಳಿಕ ಮೊದಲ ಸಲ ಇಬ್ಬರು ನಾಯಕರು ಮೊದಲ ಸಲ ಮುಖಾಮುಖಿಯಾದರು. ಇಬ್ಬರು ನಾಯಕರು ಮುಗುಳ್ನಕ್ಕು ಮುಂದೆ ಸಾಗಿದರು.