ಕಾವೇರಿ ನೀರು ಬಿಡುವ ಅಗತ್ಯವಿಲ್ಲ: ಸಿದ್ದುಗೆ ಎಚ್ಡಿಡಿ ಸಲಹೆ
ಬೆಂಗಳೂರು, ಸೆ. 21: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನ್ಯಾಯಯುತವಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಬೇಡ. ತಮಿಳುನಾಡಿಗೆ ನೀರು ಬಿಡುವ ಅಗತ್ಯವಿಲ್ಲ. ಕಾವೇರಿ ನಿರ್ವಹಣಾ ಮಂಡಳಿ ರಚನೆ ಅನಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಪ್ರಧಾನಿ ದೇವೇಗೌಡರು ಸಲಹೆ ನೀಡಿದ್ದಾರೆ
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಸಲಹೆ ಪಡೆಯಲು ಬಹು ವರ್ಷಗಳ ನಂತರ ಪದ್ಮನಾಭ ನಗರ ನಿವಾಸಕ್ಕೆ ಬುಧವಾರ ಸಂಜೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದರು. [ಬಂಗಾರಪ್ಪ ಬಗ್ಗೆ ಮಾತನಾಡ್ತೀರಿ, 1995ರಲ್ಲಿ ಪರಿಸ್ಥಿತಿ ಗೊತ್ತೇನ್ರಿ']
ದೇವೇಗೌಡರ ಸಲಹೆ: ತಮಿಳುನಾಡಿನವರು ಕಾವೇರಿ ನದಿ ನೀರು ಹಂಚಿಕೆಗೆ ಐತೀರ್ಪಿನ ಆದೇಶವನ್ನು ಆಧಾರವಾಗಿಟ್ಟುಕೊಂಡಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಅಂತಿಮ ತೀರ್ಪು ಬಂದಿಲ್ಲ. ನ್ಯಾಯಾಧೀಕರಣದ ತೀರ್ಪು ವಿರೋಧಿಸಿ ನಾವು ಸಲ್ಲಿಸಿದ್ದ ಮೇಲ್ಮನವಿ ಕಳೆದ 9 ವರ್ಷಗಳಿಂದ ಇನ್ನೂ ವಿಚಾರಣೆಗೆ ಬಂದಿಲ್ಲ. ಇಂಥ ಸಂದರ್ಭದಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆಯ ಅಗತ್ಯವೇನಿದೆ ಎಂದು ಪ್ರಶ್ನಿಸಿದ್ದಾರೆ. [ಕಾವೇರಿಗಾಗಿ ಕೋಪ ಮರೆತು ಗೌಡ್ರ ಮನೆಗೆ ಬಂದ ಸಿದ್ದರಾಮಯ್ಯ]

ನ್ಯಾಯಾಧೀಕರಣದ ತೀರ್ಪನ್ನು ಪ್ರಶ್ನಿಸಿ ಮಾತುಕತೆ ನಡೆಸುವ ಅಧಿಕಾರ ಪ್ರಧಾನಿ ಮೋದಿ ಅವರಿಗಿದೆ. ಈ ಕುರಿತಂತೆ ಕರ್ನಾಟಕ ಸರ್ಕಾರ ಮನವಿ ಮಾಡಿದರೂ ಪ್ರತಿಕ್ರಿಯೆ ಬಂದಿಲ್ಲ. [ಕಾವೇರಿ ನಿರ್ವಹಣಾ ಮಂಡಳಿ ರಚನೆಯಾದ್ರೆ, ಏನಾಗುತ್ತೆ?]
ಸಾಂಬಾ ಬೆಳೆಗೆ ನೀರು ಕೇಳುತ್ತಿದ್ದಾರೆ. ಮೊದಲು ಕುಡಿಯುವ ನೀರಿಗೆ ಆದ್ಯತೆ ನೀಡಲಿ. ಸುಪ್ರೀಂಕೋರ್ಟ್ ತನ್ನ ವ್ಯಾಪ್ತಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆದೇಶಿಸಿದೆ. ಇದನ್ನು ಕೂಡಲೇ ಪ್ರಧಾನಿ ನರೇಂದ್ರ ಮೋದಿಯವರು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.
ನೀರಿನ ವಿಚಾರವಾಗಿ ಈ ಹಿಂದೆ ನಾನು ಮೂರು ಬಾರಿ ರಾಜೀನಾಮೆ ಕೊಟ್ಟಿದ್ದೆ. ನಾಳೆಯೇ ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ. ರಾಜೀನಾಮೆ ನೀಡಿದರೆ ಹೋರಾಟ ಮಾಡುವವರು ಯಾರು? ಎಂಬ ಪ್ರಶ್ನೆಯನ್ನು ಮುಂದಿಟ್ಟಿದ್ದಾರೆ.
ನಾನು ಮಾಜಿ ಪ್ರಧಾನಿ, ಹಿರಿಯ ರಾಜಕಾರಣಿ ಎಂಬ ಉದ್ದೇಶದಿಂದ ಹೀಗೆ ಹೇಳುತ್ತಿಲ್ಲ. ನಾನೊಬ್ಬ ಸಾಮಾನ್ಯ ಪ್ರಜೆಯಾಗಿಯೇ ಹೀಗೆ ಹೇಳುತ್ತಿದ್ದೇನೆ ಎಂದರು. ನಮ್ಮ ಜಲಾಶಯದ ಸ್ಥಿತಿಗತಿ ನೋಡಿ ಸುಪ್ರೀಂಕೋರ್ಟ್ ತೀರ್ಪು ಕೊಟ್ಟಂತೆ ಕಾಣುತ್ತಿಲ್ಲ. ಜನರಿಗೆ ಕುಡಿಯುವ ನೀರು ಮುಖ್ಯವೋ ಅಲ್ಲಿನ(ತಮಿಳುನಾಡಿಗೆ) ಬೆಳೆಗೆ ನೀರು ಮುಖ್ಯವೋ ಎಂದು ದೇವೇಗೌಡರು ತೀರ್ಪಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.












Click it and Unblock the Notifications