ಕಾವೇರಿ ಕಾವು: ಕಾವೇರಿ ನಿರ್ವಹಣಾ ಪ್ರಾಧಿಕಾರದ ವಿರುದ್ಧ ಕರವೇ ಪ್ರತಿಭಟನೆ
ಬೆಂಗಳೂರು, ಸೆಪ್ಟೆಂಬರ್ 15: ಕರ್ನಾಟಕದಿಂದ ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ದಿನೇ ದಿನೇ ಪ್ರತಿಭಟನೆ ಹೆಚ್ಚಾಗುತ್ತಿದೆ.
ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣ ಪ್ರತಿಭಟನೆ ಆರಂಭಿಸಿದ್ದಾರೆ. ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಕರವೇ ಕಾರ್ಯಕರ್ತರು ಹೋರಾಟ ನಡೆಸಿದ್ದಾರೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರಹಾಕಿದ್ದು, ಇನ್ನು ಮುಂದೆ ತಮಿಳುನಾಡಿಗೆ ಕಾವೇರಿ ನೀರು ಬಿಟ್ಟರೇ ರಾಜ್ಯಾದ್ಯಂತ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ವೇಳೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಣ್ಣವೀರಪ್ಪ ಮಾತನಾಡಿದ್ದು, 'ಕರ್ನಾಟಕದಲ್ಲಿ ಬರಗಾಲವಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಮೀಕ್ಷೆ ನಡೆಸದೇ, ತಮಿಳುನಾಡಿಗೆ ನೀರು ಬಿಡಬೇಕು ಎನ್ನುವುದು ತಪ್ಪು. ನಮ್ಮ ರೈತರ ಬೆಳೆಗೆ ನೀರು ಸಿಗುತ್ತಿಲ್ಲ' ಎಂದರು.

'ಮುಖ್ಯಮಂತ್ರಿ ಸರ್ವಪಕ್ಷಗಳ ನಿಯೋಗವನ್ನು ಪ್ರಧಾನಮಂತ್ರಿ ಬಳಿ ಕರೆದುಕೊಂಡು ಹೋಗಬೇಕು. ಮೂರು ಪಕ್ಷಗಳು ರಾಜಕೀಯ ಮರೆತು ಕಾವೇರಿ ವಿಚಾರದಲ್ಲಿ ಒಂದಾಗಬೇಕು. ರಾಜ್ಯದ ಎಲ್ಲಾ ಜಲಾಶಯಗಳ ಸಮೀಕ್ಷೆಯಾಗಬೇಕು. ನೀರಾವರಿ ತಜ್ಞರ ಸಲಹೆ ಪಡೆಯಬೇಕು. ಗೌರಿ ಗಣೇಶ ಹಬ್ಬದ ನಂತರ ರಾಜ್ಯದಲ್ಲಿ ಹೋರಾಟ ತ್ರೀವ್ರಗೊಳಿಸುತ್ತೇವೆ' ಎಂದು ಎಚ್ಚರಿಕೆ ನೀಡಿದರು.












Click it and Unblock the Notifications