Cauvery Issue: ಗಾಂಧಿ ಜಯಂತಿಯಂದು ಕಾವೇರಿಗಾಗಿ ಎಎಪಿಯ 'ಮೌನ' ಧರಣಿ
ಬೆಂಗಳೂರು, ಅಕ್ಟೋಬರ್ 02: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ತೀರ್ಪು ಖಂಡಿಸಿ ಹೋರಾಟ ಮುಂದುವರಿಸಿರುವ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ಸಹಯೋಗದೊಂದಿಗೆ ಗಾಂಧಿ ಜಯಂತಿಯ ಅಂಗವಾಗಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಮೌನ ಧರಣಿ ನಡೆಸಿದರು.
ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 26ರಂದು ನಡೆದ ಬೆಂಗಳೂರು ಬಂದ್ ಯಶಸ್ವಿಯಾದ ಬಳಿಕ ಸೆಪ್ಟೆಂಬರ್ 29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೋತ್ತಾಯಗಳನ್ನು ಸಲ್ಲಿಸಿದ್ದರು. ಆದರೆ ಇದುವರೆಗೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹಾಗೂ ಕುರುಬೂರ್ ಶಾಂತ್ ಕುಮಾರ್ ಆಕ್ರೊಶ ಹೊರ ಹಾಕಿದರು.

ಸ್ಪಷ್ಟ ನಿರ್ಧಾರ ಕೈಗೊಳ್ಳದ ಸರ್ಕಾರದ ವಿರುದ್ಧ ಸೋಮವಾರ ಗಾಂಧಿ ಜಯಂತಿ ಆಚರಣೆ ಸಂದರ್ಭದಲ್ಲಿ ಮಹಾತ್ಮ ಗಾಂಧಿಜೀಯವರನ್ನು ಸ್ಮರಿಸುತ್ತ ಮೌನ ಧರಣಿ ನಡೆಸಿದರು. ರಾಜ್ಯ ಸರ್ಕಾರ ತ್ವರಿತವಾಗಿ ತಮಿಳುನಾಡಿಗೆ ಹರಿಯುವ ನೀರನ್ನು ಸ್ಥಗಿತಗೊಳಿಸುವ ನಿರ್ಧಾರಕ್ಕೆ ಬರಬೇಕು ಎಂದು ಅವರು ಎಚ್ಚರಿಕೆ ನೀಡಿದರು.
ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಸೇರಿದಂತೆ ಅನೇಕ ಮುಖಂಡರು, ಹೋರಾಟಗಾರರು, ಕಾರ್ಯಕರ್ತರು ನಮ್ಮ ನೀರು ನಮ್ಮ ಹಕ್ಕು ಎಂಬ ಘೋಷವಾಕ್ಯದ ಫಲಕಗಳನ್ನು ಪ್ರದರ್ಶಿಸಿದರು.
ಮೂರು ಪ್ರಮುಖ ಹಕ್ಕೊತ್ತಾಯಗಳು
1) ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರು ನಿಲ್ಲಿಸಬೇಕು.
2) ವಿಶೇಷ ವಿಧಾನ ಮಂಡಲದ ಅಧಿವೇಶನ ಕರೆದು ಸಂಕಷ್ಟ ಸೂತ್ರ ಜಾರಿ ಆಗುವ ತನಕ ನೀರು ಬಿಡುವುದಿಲ್ಲ ಎನ್ನುವ ನಿರ್ಣಯ ಕೈಗೊಳ್ಳಬೇಕು.
3) ಮಳೆ ಹೆಚ್ಚು ಬಂದಾಗ ನೀರು ಸಂಗ್ರಹಿಸಿಕೊಳ್ಳಲು ಮೇಕೆದಾಟು ನಿರ್ಮಾಣ ತಕ್ಷಣ ಕಾರ್ಯ ಆರಂಭ ಮಾಡಬೇಕು.

ಈ ಹಿಂದೆ ಸೆಪ್ಟಂಬರ್ 26 ರಂದು ಇದೇ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಮತ್ತು ರೈತ ಮುಖಂಡ ರಾಜ್ಯ ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರ್ ಶಾಂತಕುಮಾರ್ ನೇತೃತ್ವದಲ್ಲಿ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿತ್ತು. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರವಾಗಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಯಿತು. ಬಹುತೇಕ ಸಂಘಟನೆಗಳು ಬಂದ್ಗೆ ಸಂಪೂರ್ಣವಾಗಿ ಬೆಂಬಲಿಸಿದ್ದವು.












Click it and Unblock the Notifications