ಕಾವೇರಿದ ವಿವಾದ : ಬೆಂಗಳೂರಿನ 16 ಪ್ರದೇಶಗಳಲ್ಲಿ ಕರ್ಫ್ಯೂ
ಬೆಂಗಳೂರು, ಸೆಪ್ಟೆಂಬರ್ 13 : ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಸುಪ್ರೀಂಕೋರ್ಟ್ ಆದೇಶ ಬಂದ ನಂತರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದ ಹಿನ್ನೆಲೆಯಲ್ಲಿ 16 ಬಡಾವಣೆಗಳಲ್ಲಿ ಸೆಪ್ಟೆಂಬರ್ 13ರಿಂದ 14ರವರೆಗೆ ಕರ್ಫ್ಯೂ ಜಾರಿ ಮಾಡಲಾಗಿದ್ದು, ಕಂಡಲ್ಲಿ ಗುಂಡಿಗೆ ಆದೇಶ ನೀಡಲಾಗಿದೆ.
ಕರ್ಫ್ಯೂ ಜಾರಿಯಲ್ಲಿರುವ ಬಡಾವಣೆಗಳು : ರಾಜರಾಜೇಶ್ವರಿ ನಗರ, ಕೆಪಿ ಅಗ್ರಹಾರ, ಚಂದ್ರಾ ಲೇಔಟ್, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಪೀಣ್ಯ, ಆರ್ಎಂಸಿ ಯಾರ್ಡ್, ನಂದಿನಿ ಲೇಔಟ್, ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿ, ರಾಜಗೋಪಾಲನಗರ, ಕಾಮಾಕ್ಷಿಪಾಳ್ಯ, ವಿಜಯನಗರ, ಬ್ಯಾಟರಾಯನಪುರ, ಕೆಂಗೇರಿ, ಮಾಗರಿ ರಸ್ತೆ ಮತ್ತು ರಾಜಾಜಿನಗರ.

ಕರ್ಫ್ಯೂ ಜಾರಿಯಿರುವ ಸಮಯದಲ್ಲಿ ಯಾರೂ ಮನೆಯಿಂದ ಹೊರಬರಬಾರದೆಂದು ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಸೋಮವಾರ ಮಧ್ಯಾಹ್ನದ ನಂತರ ನಗರದಾದ್ಯಂತ ವ್ಯಾಪಕ ಹಿಂಸಾಚಾರ ನಡೆದು, 75ಕ್ಕೂ ಹೆಚ್ಚು ತಮಿಳುನಾಡು ನೋಂದಣಿಯ ವಾಹನಗಳು ಬೆಂಕಿಗೆ ಆಹುತಿಯಾದ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. [ಕಾವೇರಿ: ಬೆಂಗಳೂರು ಹೊತ್ತಿ ಉರಿಯಲು ಮೂಲ ಕಾರಣ ಇದು!]

ಈ ಕುರಿತು ಹೇಳಿಕೆ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು, ಈ ಬಡಾವಣೆಗಳಲ್ಲಿ ಜನರು ಮನೆಯಿಂದ ಹೊರಬರಬಾರದು. ಯಾವುದೇ ಅಹಿತಕರ ಘಟನೆಗೆ ಜನರು ಇಳಿದರೆ ಪೊಲೀಸರು ಅನಿವಾರ್ಯವಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
In Pics : ಬೆಂಗಳೂರಿನಲ್ಲಿ ಹಿಂಸಾರೂಪಕ್ಕೆ ತಿರುಗಿದ ಪ್ರತಿಭಟನೆ
ನಗರದಲ್ಲಿ 15 ಸಾವಿರ ಪೊಲೀಸರು, 10 ಪ್ಯಾರಾ ಮಿಲಿಟರಿ ಫೋರ್ಸ್, 30 ಸಿಆರ್ ಪಿಎಫ್ ತುಕುಡಿ, 20 ಕೆಎಸ್ಆರ್ಪಿ ತುಕುಡಿಗಳನ್ನು ನಿಯೋಜಿಸಲಾಗಿದೆ. ಮಂಗಳವಾರ ನಗರದಾದ್ಯಂತ ಬಿಎಂಟಿಸಿ, ಆಟೋ, ಟ್ಯಾಕ್ಸಿಗಳು ಕೂಡ ಸಂಚರಿಸುವುದು ಅನುಮಾನ. ಇಂದಿನ ಪರಿಸ್ಥಿತಿ ಅವಲೋಕಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. [ಹಳೇ ಮೈಸೂರಿನಲ್ಲಿಯೂ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ]

14ರಂದು ಶಾಲೆಗಳಿಗೆ ರಜಾ : ಕಾವೇರಿ ಜಲವಿವಾದ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಮತ್ತು ಮುನ್ನೆಚ್ಚರಿಕೆಯ ಕ್ರಮವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಪರಿಸ್ಥಿತಿಯನ್ನು ಅವಲೋಕಿಸಿ ಆಯಾ ಜಿಲ್ಲಾಧಿಕಾರಿಗಳು ಸೆಪ್ಟೆಂಬರ್ 14ರಂದು ರಜಾ ಘೋಷಿಸುವ ಅಥವಾ ಶಾಲೆ ನಡೆಸುವ ನಿರ್ಣಯ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪ್ರಕ್ಷುಬ್ಧ ವಾತಾವರಣವಿರುವ ಮಂಡ್ಯದಲ್ಲಿ ಸೆಪ್ಟೆಂಬರ್ 17ರವರೆಗೆ ಈಗಾಗಲೆ ಶಾಲಾಕಾಲೇಜುಗಳಿಗೆ ರಜಾ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಕೂಡ ಸೆ.14ರಂದು ಶಾಲೆಗಳಿಗೆ ರಜಾ ಘೋಷಿಸುವ ಸಂಭವನೀಯತೆಯಿದೆ.












Click it and Unblock the Notifications