ಜಾಮೀನು ಅರ್ಜಿ ವಜಾ, ಸಂಕಷ್ಟದಲ್ಲಿ ಆನಂದ್ ಸಿಂಗ್

ಅನಾರೋಗ್ಯದ ಹಿನ್ನಲೆಯಲ್ಲಿ ತಾವು ಸಿಂಗಾಪುರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಮಗೆ ನಿರೀಕ್ಷಣಾ ಜಾಮೀನು ನೀಡಬೇಕೆಂದು ಹೊಸಪೇಟೆ ವಿಜಯನಗರ ಶಾಸಕ ಆನಂದ್ ಸಿಂಗ್ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಆದರೆ, ಜಾಮೀನು ನೀಡದಂತೆ ಸಿಬಿಐ ಪರ ವಕೀಲರು ಮನವಿ ಮಾಡಿದ್ದರು.
ಆನಂದ್ ಆನಂದ್ ಸಿಂಗ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸಿಬಿಐ ವಿಶೇಷ ನ್ಯಾಯಾಲಯ ವಿಚಾರಣೆ ಪೂರ್ಣಗೊಳಿಸಿ ಅ.7ರ ಸೋಮವಾರಕ್ಕೆ ತೀರ್ಪು ಕಾಯ್ದರಿಸಿತ್ತು. ಸೋಮವಾರ ತೀರ್ಪು ಪ್ರಕಟಿಸಿರುವ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಇದರಿಂದ ಆನಂದ್ ಸಿಂಗ್ ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.
ವೈಷ್ಣವಿ ಮಿನರಲ್ಸ್ನಿಂದ ಅಕ್ರಮವಾಗಿ ಅದಿರು ಸಾಗಣೆ ಮಾಡಿದ ಆರೋಪ ಆನಂದ್ ಸಿಂಗ್ ಮೇಲಿದೆ. ಆದ್ದರಿಂದ ಅವರು ನಿರೀಕ್ಷಣಾ ಜಾಮೀನು ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಈಗಾಗಲೇ ಅನೇಕ ಬಾರಿ ಆನಂದ್ ಸಿಂಗ್ ಅವರನ್ನು ಸಿಬಿಐ ವಿಚಾರಣೆ ನಡೆಸಿದೆ. ಆದ್ದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದ್ದರು.
ಈ ಕುರಿತು ಸೋಮವಾರ ತೀರ್ಪು ಪ್ರಕಟಿಸಿರುವ ಬೆಂಗಳೂರು ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ಇದರಿಂದಾಗಿ ಆನಂದ್ ಸಿಂಗ್ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಈಗಾಗಲೇ ಕಂಪ್ಲಿ ಶಾಸಕ ಸುರೇಶ್ ಬಾಬು, ಕೂಡ್ಲಗಿ ಶಾಸಕ ನಾಗೇಂದ್ರ, ಕಾರವಾರದ ಶಾಸಕ ಸತೀಶ್ ಸೈಲ್ ಬೇಲೇಕೇರಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ.
ಲುಕ್ ಔಟ್ ನೋಟಿಸ್ : ಆನಂದ್ ಸಿಂಗ್ ನಿರೀಕ್ಷಣಾ ಜಾಮೀನು ರದ್ದುಗೊಂಡಿರುವ ಹಿನ್ನಲೆಯಲ್ಲಿ ಸಿಬಿಐ ಪೊಲೀಸರು ಅವರ ಹುಡುಕಾಟಕ್ಕಾಗಿ ಲುಕ್ ಔಟ್ ನೋಟಿಸ್ ಜಾರಿಗೊಳಿಸಿದ್ದಾರೆ. ಎಲ್ಲಾ ವಿಮಾನ ನಿಲ್ದಾಣ ಮತ್ತು ಪೊಲೀಸ್ ಠಾಣೆಗೆ ಈ ನೋಟಿಸ್ ತಲುಪಿಸಿದ್ದಾರೆ. ಇದರಿಂದ ಆನಂದ್ ಸಿಂಗ್ ಬಂಧನವಾಗುವುದು ಬಹುತೇಖ ಖಚಿತವಾಗಿದೆ.












Click it and Unblock the Notifications