Guru Raghavendra Bank Scam : ಶ್ರೀ ಗುರು ರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ಸಿಬಿಐಗೆ
ಬೆಂಗಳೂರು, ಜನವರಿ 17; ಬೆಂಗಳೂರು ನಗರದಲ್ಲಿ ಭಾರೀ ಸಂಚಲನ ಉಂಟು ಮಾಡಿದ್ದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ (ನಿ.) ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ.
ಶ್ರೀ ಗುರು ರಾಘವೇಂದ್ರ ಕೋ - ಆಪರೇಟಿವ್ ಸೊಸೈಟಿ ಸೇರಿದಂತೆ ಮೂರು ಕೋ - ಆಪರೇಟಿವ್ ಬ್ಯಾಂಕುಗಳ ಸುಮಾರು 1800 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಮಂಗಳವಾರ ಸಂಜೆ ವಿಧಾನಸೌಧ ದಲ್ಲಿ ಸಹಕಾರ ಸಚಿವ ಎಸ್ . ಟಿ. ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಯು. ಟಿ. ವೆಂಕಟೇಶ್, ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಪಾಲ್ಗೊಂಡಿದ್ದರು.

ಸಭೆಯ ಬಳಿಕ ಮಾತನಾಡಿದ ಸಚಿವ ಎಸ್. ಟಿ. ಸೋಮಶೇಖರ್, "ಸಾವಿರಾರು ಠೇವಣಿದಾರರ ಹಿತರಕ್ಷಣೆಗಾಗಿ ಈ ಬ್ಯಾಂಕುಗಳಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಶಿಫಾರಸು ಮಾಡಲಾಗುತ್ತದೆ" ಎಂದರು.
ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಈ ಕುರಿತು ತೀರ್ಮಾನ ಕೈಗೊಳ್ಳಲಿದೆ. ಈ ಸಂಬಂಧ ನಿರ್ಣಯ ಸಿದ್ಧಪಡಿಸುವಂತೆ ಸಚಿವರು ಅಧಿಕಾರಗಳಿಗೆ ಸೂಚನೆ ನೀಡಿದ್ದಾರೆ. ಇದರಿಂದಾಗಿ ಬ್ಯಾಂಕ್ನಲ್ಲಿ ಹಣ ಠೇವಣಿ ಇಟ್ಟಿದ್ದ ಜನರಲ್ಲಿ ಹೊಸ ಭರವಸೆ ಮೂಡಿದೆ.
ಹೋರಾಟಕ್ಕೆ ಜಯ ಸಿಕ್ಕಿದೆ; ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ನಾಯಕ ಯು. ಬಿ. ವೆಂಕಟೇಶ್ ಮಾತನಾಡಿ, "ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಶಿಷ್ಟ ಸಹಕಾರಿ ಬ್ಯಾಂಕ್ ಠೇವಣಿದಾರರ ಹಿತ ಕಾಯಬೇಕೆಂದು ಸದನದ ಒಳಗೆ ಮತ್ತು ಹೊರಗೆ ನಿರಂತರ ಹೋರಾಟ ಮಾಡಲಾಗಿತ್ತು" ಎಂದು ಹೇಳಿದ್ದಾರೆ.
"ಸ್ವತಃ ನಾನು ಹಲವು ಬಾರಿ ಮೇಲ್ಮನೆಯಲ್ಲಿ ವಿಷಯ ಪ್ರಸ್ತಾಪಿಸಿ ಸಿಬಿಐ ತನಿಖೆಯಿಂದ ಮಾತ್ರ ಹಗರಣದ ಸತ್ಯಾಸತ್ಯತೆ ಹೊರಬರಲು ಸಾಧ್ಯ ಎಂದು ಹೇಳಿದ್ದೆ. ಹೋರಾಟಕ್ಕೆ ಸ್ಪಂದಿಸಿ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಲು ಸಮ್ಮತಿ ನೀಡಿರುವುದು ಸಂತಸ ತಂದಿದೆ" ಎಂದು ತಿಳಿಸಿದ್ದಾರೆ.
ಅಧ್ಯಕ್ಷರ ಬಂಧನವಾಗಿತ್ತು; ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ (ನಿ.) ದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಅಧ್ಯಕ್ಷ ಕೆ. ರಾಮಕೃಷ್ಣರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
892.43 ಕೋಟಿ ರೂ. ಸಾಲ ಯಾರ ಬಳಿ ಇದೆ, ಯಾರಿಗೆ ವರ್ಗಾವಣೆಯಾಗಿದೆ? ಎಂದು ಇಡಿ ತನಿಖೆ ಕೈಗೊಂಡಿತ್ತು. ರಾಮಕೃಷ್ಣ ಬ್ಯಾಂಕ್ ಅಧ್ಯಕ್ಷರಾಗಿದ್ದಾಗ 2876 ಮಂದಿಗೆ ಸಾಲ ನೀಡಲಾಗಿತ್ತು. ಈ ಸಾಲದ ಮೊತ್ತ 1544.43 ಕೋಟಿಯಾಗಿದೆ. ಇದರಲ್ಲಿ 892.85 ಕೋಟಿ ರೂ. ನಕಲಿ ದಾಖಲೆಗಳನ್ನು ನೀಡಿ ಸಾಲ ಪಡೆಯಲಾಗಿದೆ ಎಂಬುದು ಆರೋಪ.
ಮೊದಲು ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಹಗರಣದ ಕುರಿತು ದೂರು ದಾಖಲಾಗಿತ್ತು. ಬಳಿಕ ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ರಾಮಕೃಷ್ಣ ಬಂಧಿಸಿತ್ತು. ಜಾಮೀನು ಪಡೆದು ಹೊರ ಬಂದಿದ್ದರು. ಬಳಿಕ ಇಡಿ ಅವರನ್ನು ಬಂಧಿಸಿತ್ತು.
ಜನವರಿ 20 ಮತ್ತು 22ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಸಿಬಿಐ ತನಿಖೆಗೆ ವಹಿಸುವ ಕುರಿತು ಅನುಮೋದನೆ ನೀಡುವ ನಿರೀಕ್ಷೆ ಇದೆ.
ಶ್ರೀ ಗುರುರಾಘವೇಂದ್ರ ಬ್ಯಾಂಕ್ ಠೇವಣಿದಾರರ ಸಂಘದ ಅಧ್ಯಕ್ಷ ರಂಗನಾಥ್ ಸಭೆಯಲ್ಲಿ ಮಂಗಳವಾರ ಪಾಲ್ಗೊಂಡಿರಲಿಲ್ಲ. ಸಭೆಯಲ್ಲಿ ಭಾವಹಿಸಲು ನಮಗೆ ಅವಕಾಶವಿರಲಿಲ್ಲ. ನಮ್ಮ ಪರವಾಗಿ ಯು. ಬಿ. ವೆಂಕಟೇಶ್ ಭಾಗವಹಿಸಿದ್ದರು ಎಂದು ಅವರು ಹೇಳಿದ್ದಾರೆ.












Click it and Unblock the Notifications