ಡಿಜೆ ಹಳ್ಳಿ ಗಲಭೆ: ನಾಪತ್ತೆಯಾದ ಸಂಪತ್ ರಾಜ್ ಪತ್ತೆಗೆ ವಿಶೇಷ ತಂಡ ರಚನೆ
ಬೆಂಗಳೂರು, ಅಕ್ಟೋಬರ್ 31: ಆಸ್ಪತ್ರೆಯಿಂದ ಪರಾರಿಯಾಗಿರುವ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ, ಮಾಜಿ ಮೇಯರ್ ಸಂಪತ್ ರಾಜ್ ಅವರ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ತಂಡವನ್ನು ರಚಿಸಿದ್ದಾರೆ.
ಬಂಧನ ಭೀತಿ ಎದುರಿಸುತ್ತಿರುವ ಸಂಪತ್ ರಾಜ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದು, ಹೊರ ರಾಜ್ಯಕ್ಕೆ ಪರಾರಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಸಂಪತ್ ರಾಜ್ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದೆ. ಅವರ ಕುಟುಂಬದವರನ್ನು ಪತ್ತೆ ಹಚ್ಚುವ ಪ್ರಯತ್ನ ಕೂಡ ವಿಫಲವಾಗಿದೆ. ಅವರ ಕುಟುಂಬದವರೂ ತಮ್ಮ ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆದರೆ ಸಂಪತ್ ರಾಜ್ ಇರುವಿಕೆಯ ಬಗ್ಗೆ ಸಿಸಿಬಿ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದ್ದು, ಅವರನ್ನು ಶೀಘ್ರವೇ ಬಂಧಿಸುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿ ನಡೆದಿದ್ದ ಹಿಂಸಾಚಾರ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಲ್ಲಿ ಒಬ್ಬರಾಗಿರುವ ಸಂಪತ್ ರಾಜ್, ಕೊರೊನಾ ಸೋಂಕು ತಗುಲಿರುವ ನೆಪದಲ್ಲಿ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಗುರುವಾರ ರಾತ್ರಿ ಸಿಸಿಬಿ ಪೊಲೀಸರು ಆಸ್ಪತ್ರೆಗೆ ತೆರಳಿದಾಗ ಆಘಾತ ಉಂಟಾಗಿದೆ. ಸಂಪತ್ ರಾಜ್ ಅವರು ಬುಧವಾರ ಮಧ್ಯರಾತ್ರಿಯೇ ಡಿಸ್ಚಾರ್ಜ್ ಆಗಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸಂಪತ್ ರಾಜ್ ಬಿಡುಗಡೆಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಆಸ್ಪತ್ರೆ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿತ್ತು. ಆದರೆ ಅದನ್ನು ಪಾಲಿಸದ ಕಾರಣ ಪೊಲೀಸರು ಈಗ ನೋಟಿಸ್ ಜಾರಿ ಮಾಡಿದ್ದಾರೆ.












Click it and Unblock the Notifications