ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ಕೊರೊನಾವೈರಸ್ ಪಾಸಿಟಿವ್
ಬೆಂಗಳೂರು, ನವೆಂಬರ್.19: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೆ ನೊವೆಲ್ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ತಮಗೆ ಸೋಂಕು ತಗುಲಿರುವ ಬಗ್ಗೆ ಸ್ವತಃ ಅವರೇ ತಮ್ಮ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ.
"ಕೊರೊನಾವೈರಸ್ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಗಾದೆನು. ಈ ವೇಳೆ ನನಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತನಾಗಿ ಗೃಹ ದಿಗ್ಬಂಧನದಲ್ಲಿದ್ದೇನೆ" ಎಂದು ಸದಾನಂದಗೌಡರು ಟ್ಟೀಟ್ ಮೂಲಕ ತಿಳಿಸಿದ್ದಾರೆ.
"ಇನ್ನು, ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲ ಕಾರ್ಯಕರ್ತರು ಮತ್ತು ಸಂಪರ್ಕಿತರು ಮುನ್ನೆಚ್ಚರಿಕೆ ಕ್ರಮವಾಗಿ ಒಮ್ಮೆ ಕೊರೊನಾವೈರಸ್ ಸೋಂಕಿನ ತಪಾಸಣೆ ಮಾಡಿಸಿಕೊಳ್ಳಿ" ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರು ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾವೈರಸ್ ಕಡಿವಾಣ:
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 2000ಕ್ಕಿಂತ ಕಡಿಮೆಯಾಗಿದೆ. ಒಂದು ದಿನದಲ್ಲಿ 1849 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ 24 ಗಂಟೆಗಳಲ್ಲೇ 26 ಜನರು ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 11604ಕ್ಕೆ ಏರಿಕೆಯಾಗಿದೆ.
ಕೊರೊನಾವೈರಸ್ ಒಟ್ಟು 867780 ಸೋಂಕಿತ ಪ್ರಕರಣಗಳ ಪೈಕಿ 830988 ಸೋಂಕಿತರು ಈಗಾಗಲೇ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ದಿನದಲ್ಲೇ 1800 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 25169 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ.












Click it and Unblock the Notifications