ಕೇಂದ್ರದ ಮಾಜಿ ಸಚಿವ ಎಂ ವಿ ರಾಜಶೇಖರನ್ ನಿಧನ: ಮುಖ್ಯಮಂತ್ರಿ ಸಂತಾಪ
ಬೆಂಗಳೂರು, ಏಪ್ರಿಲ್ 13: ಕೇಂದ್ರದ ಮಾಜಿ ಸಚಿವ ಎಂ. ವಿ. ರಾಜಶೇಖರನ್ ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಬಹು ಅಂಗಾಗಾ ವೈಪಲ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿದಿವಶರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.
ಎಂ ವಿ ರಾಜಶೇಖರನ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ''ಎಂ. ವಿ. ರಾಜಶೇಖರನ್ ಅವರು ಸರಳತೆ, ಸಜ್ಜನಿಕೆಯ ಪ್ರಬುದ್ಧ ರಾಜಕಾರಣಿಯಾಗಿದ್ದರು. ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು. ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು'' ಎಂದು ಮುಖ್ಯಮಂತ್ರಿಗಳು ಸ್ಮರಿಸಿಕೊಂಡಿದ್ದಾರೆ.
''ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಅಳಿಯನಾದ ಅವರು, ಮೌಲ್ಯಾಧಾರಿತ ರಾಜಕಾರಣ ದಿಂದಾಗಿಯೆ ಗುರುತಿಸಿಕೊಂಡಿದ್ದರು. ಅವರ ನಿಧನ ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗ, ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ'' ಮುಖ್ಯಮಂತ್ರಿಗಳು ತಿಳಿಸಿದ್ದಾರೆ.