Chandru Murder Case : ಚಂದ್ರು ಕೊಲೆ ಪ್ರಕರಣದ ತನಿಖೆ ಸಿಐಡಿಗೆ
ಬೆಂಗಳೂರು, ಏಪ್ರಿಲ್ 10; ಭಾರೀ ಚರ್ಚೆಗೆ ಕಾರಣವಾಗಿರುವ ಬೆಂಗಳೂರು ನಗರದ ಚಂದ್ರು ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಗೃಹ ಸಚಿವರು ನೀಡಿದ್ದ ಹೇಳಿಕೆಗೆ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದರು.
ಗೃಹ ಸಚಿವ ಆರಗ ಜ್ಞಾನೇಂದ್ರ ಸಿಐಡಿ ತನಿಖೆ ಬಗ್ಗೆ ಮಾಹಿತಿ ನೀಡಿದ್ದಾರೆ. ಬೆಂಗಳೂರು ನಗರದ, ಹಳೆಗುಡ್ಡದ ಹಳ್ಳಿ ಪ್ರದೇಶದಲ್ಲಿ ನಡೆದ, ಚಂದ್ರಶೇಖರ್ ಎಂಬ ಯುವಕನ ಬರ್ಬರ ಹತ್ಯೆ ಪ್ರಕರಣವನ್ನು, ರಾಜ್ಯ ಸರಕಾರ , ಸಿಐಡಿ ಗೆ ವಹಿಸಿ, ತನಿಖೆಗೆ, ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಈ ಕುರಿತು ನಿರ್ಧಾರ ತೆಗೆದುಕೊಂಡಿದ್ದು, ಯುವಕನ ಹತ್ಯೆಗೆ ಸಂಬಂಧಿಸಿದಂತೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಿ, ಸತ್ಯವನ್ನು ಬಯಲಿಗೆ ಎಳೆಯಬೇಕು, ಹಾಗೂ ಹಂತಕರನ್ನು ಶಿಕ್ಷೆಗೆ, ಒಳಪಡಿಸಬೇಕು ಎಂದು ತಿಳಿಸಿದ್ದಾರೆ.

ಬೆಂಗಳೂರು ನಗರದ ಜೆ. ಜೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 5/4/2022ರಂದು ಚಂದ್ರಶೇಖರ್ (22), ಚಂದ್ರು ಹತ್ಯೆ ನಡೆದಿತ್ತು. ಉರ್ದು ಮಾತನಾಡಲು ಬಂದಿಲ್ಲ ಎಂಬ ಕಾರಣಕ್ಕೆ ಚಂದ್ರು ಹತ್ಯೆ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದರು. ಬಳಿಕ ತಮ್ಮ ಹೇಳಿಕೆ ವಾಪಸ್ ಪಡೆದಿದ್ದರು.
ಬಳಿಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಬೈಕುಗಳು ಡಿಕ್ಕಿಯಾದ ವಿಚಾರಕ್ಕೆ ಜಗಳ ನಡೆದಿದೆ ಎಂದು ಹೇಳಿದ್ದರು. ಗೃಹ ಸಚಿವರ ಹೇಳಿಕೆ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದವು.
ಕಮಲ್ ಪಂಥ್ ಟ್ವೀಟ್ ಮಾಡಿ, "ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು, ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ.ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ.ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ" ಎಂದು ಹೇಳಿದ್ದರು.












Click it and Unblock the Notifications