ಶಾಲೆ, ಕಛೇರಿ ಅವಧಿ ಬದಲು; ಸಮಗ್ರ ವರದಿ ಸಲ್ಲಿಕೆಗೆ 8 ವಾರ ಕಾಲಾವಕಾಶ
ಬೆಂಗಳೂರು, ಅಕ್ಟೋಬರ್ 11; ಬೆಂಗಳೂರು ಮಹಾನಗರದಲ್ಲಿ ಪ್ರತಿದಿನ ಉಂಟಾಗುತ್ತಿರುವ ಸಂಚಾರದ ದಟ್ಟಣೆಯನ್ನು ನಿವಾರಿಸುವ ನಿಟ್ಟಿನಲ್ಲಿ ಶಾಲಾ-ಕಾಲೇಜು, ಕೈಗಾರಿಕೆ, ವಾಣಿಜ್ಯ ಮತ್ತು ಕಂಪನಿಗಳ ಕೆಲಸದ ಅವಧಿ ಬದಲಾವಣೆ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಕೆಲಸದ ಅವಧಿ ಬದಲಾವಣೆ ಸಾಧ್ಯತೆಯ ಬಗ್ಗೆ ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸಮಗ್ರ ವರದಿ ಸಲ್ಲಿಸಲು ಕರ್ನಾಟಕ ಹೈಕೋರ್ಟ್ ಮತ್ತೆ ಸರ್ಕಾರಕ್ಕೆ 8 ವಾರ ಕಾಲಾವಕಾಶ ನೀಡಿದೆ. ಹಿಂದೆ ಕೋರ್ಟ್ ವರದಿ ಸಲ್ಲಿಸಲು ನಿರ್ದೇಶನ ನೀಡಿತ್ತು, ಆದರೆ ಇನ್ನೂ ಸಮಾಲೋಚನೆ ಬಾಕಿ ಇದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಮತ್ತೆ ಸಮಯ ನೀಡಲಾಗಿದೆ.

ಸಮರ್ಪಣ ಸಾಂಸ್ಕೃತಿಕ ಮತ್ತು ಸಾಮಾಜಿಕ ಸಂಘಟನೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸಂಪರ್ಕಿಸುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಬಸವೇಶ್ವರ ವೃತ್ತದಿಂದ ಹೆಬ್ಬಾಳದ ಎಸ್ಟೀಮ್ ಮಾಲ್ವರೆಗೆ ರಸ್ತೆ ಅಗಲೀಕರಣಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ನೇತೃತ್ವದ ವಿಭಾಗೀಯ ಪೀಠ ಸರ್ಕಾರಕ್ಕೆ 8 ವಾರ ಕಾಲಾವಕಾಶ ನೀಡಿದೆ.
ಸರ್ಕಾರ ಹೇಳಿದ್ದೇನು?; ಸರ್ಕಾರದ ಪರ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಾದ ಮಂಡಿಸಿ, ಹೈಕೋರ್ಟ್ ನಿರ್ದೇಶನದಂತೆ ಸಂಬಂಧಪಟ್ಟವರ ಜೊತೆಗೆ ಸರ್ಕಾರ ಸಮಾಲೋಚನೆ ನಡೆಸಿದೆ. ಅಕ್ಟೋಬರ್ 5ರಂದು ಕಾರ್ಮಿಕ ಇಲಾಖೆ, ಎಫ್ಕೆಸಿಸಿಐ, ವಾಣಿಜ್ಯೋದ್ಯಮಿಗಳು ಹಾಗೂ ಕಾರ್ಮಿಕರ ಒಕ್ಕೂಟಗಳ ಪ್ರತಿನಿಧಿಗಳ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. ಅಕ್ಟೋಬರ್ 9ರಂದು ಶಾಲಾ ಆಡಳಿತ ಮಂಡಳಿ, ಪೋಷಕರ ಒಕ್ಕೂಟದೊಂದಿಗೆ ಸಭೆ ನಡೆಸಲಾಯಿತು ಎಂದರು.
ಹಾಗೆಯೇ, ಸಾರಿಗೆ ಮತ್ತು ಸಂಚಾರ ವಿಭಾಗದ ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೂ ಸಭೆ ನಡೆಸಲಾಗಿದೆ. ಸಂಚಾರ ದಟ್ಟಣೆಗೆ ಪರಿಹಾರ ಕಂಡುಹಿಡಿಯಲು ಸಮಾಲೋಚನೆ ಪ್ರಕ್ರಿಯೆ ಮುಂದುವರಿಯಲಿದ್ದು, ಅಂತಿಮ ಅಭಿಪ್ರಾಯ ಕುರಿತಂತೆ ವರದಿ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು.
ಮನವಿ ಪರಿಗಣಿಸಿದ ಹೈಕೋರ್ಟ್, ನ್ಯಾಯಾಲಯದ ಸೂಚನೆಯ ಮೇರೆಗೆ ಸರ್ಕಾರವು ಸಂಬಂಧಪಟ್ಟವರೊಂದಿಗೆ ಸಭೆ ನಡೆಸಿ ಚರ್ಚಿಸಿ, ಅಭಿಪ್ರಾಯ ಸಂಗ್ರಹ ಮಾಡುತ್ತಿದೆ. ಸಭೆಯಲ್ಲಿ ಸಂಬಂಧಪಟ್ಟವರು ಪಾಲುದಾರರು ಭಾಗವಹಿಸಿದ್ದು, ಸಭೆಯ ಅಂತಿಮ ನಿರ್ಧಾರ ತೀರ್ಮಾನಕ್ಕೆ ಬರಬೇಕಿದೆ.
ಇದು ಒಂದು ಪ್ರಕ್ರಿಯೆಯಾಗಿದ್ದು, ತೀರ್ಮಾನ ಏನೆಂಬುದನ್ನು ಎದುರು ನೋಡಬೇಕಿದೆ. ಆ ಕುರಿತಂತೆ ಸಮಗ್ರವಾದ ವರದಿ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ 8 ವಾರ ಕಾಲಾವಕಾಶ ನೀಡಲಾಗುತ್ತಿದೆ ಎಂದು ತಿಳಿಸಿ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ: ಅರ್ಜಿಯನ್ನು ಸೆಪ್ಟೆಂಬರ್ 12ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಬೆಂಗಳೂರು ನಗರದಲ್ಲಿ ನಿತ್ಯ ಉಂಟಾಗುತ್ತಿರುವ ಸಂಚಾರದ ದಟ್ಟಣೆ ಸಮಸ್ಯೆ ನಿವಾರಿಸಬೇಕಿದೆ. ಈ ನಿಟ್ಟಿನಲ್ಲಿ ಶಾಲೆಗಳ ಕೆಲಸದ ಅವಧಿಯನ್ನು ಬದಲಾವಣೆ ಮಾಡುವ ಕುರಿತಂತೆ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೂಲಕ ಖಾಸಗಿ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ ಬಸ್ ಆಪರೇಟರ್ಗಳು, ಪೋಷಕರ ಸಂಘಗಳು ಪ್ರತಿನಿಧಿಗಳ ಜೊತೆಗೆ ಸಭೆ ಕರೆದು ಸಮಾಲೋಚಿಸಿ 6 ವಾರಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.












Click it and Unblock the Notifications