ಸಂಪುಟ ಸರ್ಜರಿ, ಎಲೆಕ್ಷನ್ ತಂತ್ರಕ್ಕಾಗಿ ಸಿದ್ದರಾಮಯ್ಯ ದೆಹಲಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ಭೇಟಿ. ಸಂಪುಟ ಪುನಾರಚನೆ, ಮುಂಬರುವ ವಿಧಾನಸಭಾ ಚುನಾವಣೆ ಕಾರ್ಯತಂತ್ರಗಳ ಬಗ್ಗೆ ಚರ್ಚೆ ಸಾಧ್ಯತೆ. ಇದೇ ತಿಂಗಳ ಅಂತ್ಯಕ್ಕೆ ಸಿಎಂ ದೆಹಲಿಗೆ ಪ್ರಯಾಣ.
ಬೆಂಗಳೂರು, ಜುಲೈ 24: ರಾಜ್ಯದ ಪ್ರಸಕ್ತ ವಿದ್ಯಮಾನಗಳು, ಸಚಿವ ಸಂಪುಟ ಪುನಾರಚನೆ ಹಾಗೂ ಮುಂಬರುವ ವಿಧಾನ ಸಭೆ ಚುನಾವಣೆಗೆ ಪಕ್ಷ ಸಂಘಟನೆ ಮುಂತಾದ ವಿಚಾರಗಳ ಬಗ್ಗೆ ಹೈಕಮಾಂಡ್ ಬಳಿ ಚರ್ಚಿಸಿ ನಿರ್ಧರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದೇ ತಿಂಗಳ ಕೊನೆಯ ವಾರದಲ್ಲಿ ದೆಹಲಿಗೆ ತೆರಳಲಿದ್ದಾರೆಂದು ಗುಸುಗುಸು ಆರಂಭವಾಗಿದೆ.
ಸಿದ್ದರಾಮಯ್ಯ ಜತೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಹೊತ್ತಿರುವ ಕೆ.ಸಿ. ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಅವರೂ ದೆಹಲಿಗೆ ತೆರಳಲಿದ್ದಾರೆಂದು ಹೇಳಲಾಗಿದೆ.
ಗೃಹ ಸಚಿವರಾಗಿದ್ದ ಜಿ. ಪರಮೇಶ್ವರ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಮತ್ತೊಂದು ಅವಧಿಗೆ ನೇಮಕವಾದ ನಂತರ, ಗೃಹ ಖಾತೆಗೆ ಅವರು ರಾಜಿನಾಮೆ ಸಲ್ಲಿಸಿದ್ದರು. ಆಗಲೇ, ಸಂಪುಟ ವಿಸ್ತರಣೆ ಆಗಬೇಕಿತ್ತು. ಆದರೆ, ಅದಿನ್ನೂ ಪೂರ್ಣಗೊಂಡಿಲ್ಲ. ಈ ವಿಚಾರವು ಚರ್ಚೆಯಲ್ಲಿ ಪ್ರಮುಖವಾಗಿ ಪ್ರಸ್ತಾಪಿಸಲ್ಪಡುತ್ತದೆ ಎಂದು ಹೇಳಲಾಗಿದೆ.

ಗೃಹಖಾತೆ ಬಗ್ಗೆ ಹೈಕಮಾಂಡ್ ಒಪ್ಪಿಗೆಗೆ ಯತ್ನ
ಪರಮೇಶ್ವರ್ ಅವರಿಂದ ತೆರವಾಗಿರುವ ಸ್ಥಾನ ಸೇರಿದಂತೆ, ಖಾಲಿ ಉಳಿದಿರುವ ಎರಡು ಸ್ಥಾನಗಳ (ಎಚ್.ಎಸ್. ಮಹದೇವ ಪ್ರಸಾದ್ ನಿಧನ, ಎಚ್.ವೈ. ಮೇಟಿ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಗಳು) ಭರ್ತಿಗೆ ಹೈಕಮಾಂಡ್ ಸೂಚಿಸಿತ್ತು. ಏತನ್ಮಧ್ಯೆ, ರಾಜ್ಯ ಗೃಹ ಖಾತೆಯನ್ನು ರಮಾನಾಥ್ ರೈ ಅವರಿಗೆ ನೀಡಲು ಸಿದ್ದರಾಮಯ್ಯ ಒಲವು ತೋರಿರುವ ಹಿನ್ನೆಲೆಯಲ್ಲಿ ಈ ವಿಚಾರವನ್ನು ಹೈಕಮಾಂಡ್ ಬಳಿ ಪ್ರಸ್ತಾಪಿಸಿ, ಒಪ್ಪಿಗೆ ಪಡೆಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆಂದು ಹೇಳಲಾಗಿದೆ.

ಭಿನ್ನಮತ ಶಮನಕ್ಕೂ ಆದ್ಯತೆ
ಕರಾವಳಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಗಲಭೆ, ಪ್ರತ್ಯೇಕ ನಾಡಧ್ವಜ ವಿಚಾರ, ಜಿಲ್ಲಾ ಮಟ್ಟದ ಕಾಂಗ್ರೆಸ್ ಘಟಕಗಳಿಗೆ ನೂತನ ಪದಾಧಿಕಾರಿಗಳ ನೇಮಕ, ಪಕ್ಷದೊಳಗಿನ ಭಿನ್ನಮತ ಶಮನ ಮುಂತಾದ ವಿಚಾರಗಳೂ ಸಭೆಯಲ್ಲಿ ಚರ್ಚೆಗೆ ಬರಲಿವೆ.

ಬಂಡಾಯ ಶಾಸಕರ ಬಗ್ಗೆ ನಿರ್ಧಾರ
ಜೆಡಿಎಸ್ ನಿಂದ ರಾಜ್ಯ ಕಾಂಗ್ರೆಸ್ ಗೆ ಸೇರ್ಪಡೆಗೊಳ್ಳಲು ಸಿದ್ಧವಾಗಿರುವ ಏಳು ಮಂದಿ ಬಂಡಾಯ ಶಾಸಕರಿಗೆ ನೀಡಬೇಕಾದ ಸ್ಥಾನಮಾನಗಳ ಬಗ್ಗೆಯೂ ಪಕ್ಷದ ಹೈಕಮಾಂಡ್ ಜತೆ ಚರ್ಚಿಸಿ ನಿರ್ಧರಿಸಲು ಸಿದ್ದರಾಮಯ್ಯ ದೆಹಲಿಗೆ ದೌಡಾಯಿಸಲಿದ್ದಾರೆಂದು ಹೇಳಲಾಗಿದೆ.

ಬಲವರ್ಧನೆ ಕಾರ್ಯತಂತ್ರಗಳ ಬಗ್ಗೆ ಚರ್ಚೆ
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಸಿ.ಕೆ. ವೇಣುಗೋಪಾಲ್ ರಾವ್ ಅವರು ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ಈ ಹಂತದಲ್ಲಿ ಮಾಡಬೇಕಾದ ಕಾರ್ಯತಂತ್ರಗಳನ್ನು, ರೂಪುರೇಷೆಗಳನ್ನು ನಿರ್ಧರಿಸುವ ವಿಚಾರಗಳು ಸಭೆಯಲ್ಲಿ ಚರ್ಚೆಗೆ ಬರಲಿವೆ ಎಂದು ಹೇಳಲಾಗಿದೆ.












Click it and Unblock the Notifications