ನ್ಯಾಯಮೂರ್ತಿ ರಾಮಾ ಜೋಯಿಸ್ ನಿಧನಕ್ಕೆ ಯಡಿಯೂರಪ್ಪ ಸಂತಾಪ
ಬೆಂಗಳೂರು, ಫೆ. 16: ನ್ಯಾಯಮೂರ್ತಿ ಎಂ. ರಾಮಾ ಜೋಯಿಸ್ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Recommended Video
ಶಿವಮೊಗ್ಗ ಜಿಲ್ಲೆಯವರೇ ಆದ ನ್ಯಾಯಮೂರ್ತಿ ರಾಮಾ ಜೋಯಿಸ್ ಅವರು ಜಾರ್ಖಂಡ್ ಹಾಗೂ ಬಿಹಾರದ ರಾಜ್ಯಪಾಲರಾಗಿ, ರಾಜ್ಯಸಭಾ ಸದಸ್ಯರಾಗಿ, ಪಂಜಾಬ್ ಮತ್ತು ಹರಿಯಾಣಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾಗಿ ಸಲ್ಲಿಸಿರುವ ಸೇವೆ ಅನನ್ಯವಾದುದು.
ಕಾನೂನು ತಜ್ಞರಾಗಿದ್ದ ಅವರು ರಚಿಸಿದ ಕೃತಿಗಳೂ ದೇಶದ ಕಾನೂನು ವ್ಯವಸ್ಥೆ, ಸಂವಿಧಾನದ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆ ವಾಸ ಅನುಭವಿಸಿದ್ದ ನ್ಯಾಯಮೂರ್ತಿ ಜೋಯಿಸ್ ಅವರು ರಾಜ್ಯಸಭಾ ಸದಸ್ಯರಾಗಿ ಗಮನ ಸೆಳೆದಿದ್ದಾರೆ. ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ಚಿಂತಕರನ್ನು ಕಳೆದುಕೊಂಡಂತಾಗಿದೆ ಎಂದು ಮುಖ್ಯಮಂತ್ರಿಯವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಬಂಧು ವರ್ಗ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯುರಪ್ಪ ಅವರು ತಿಳಿಸಿದ್ದಾರೆ.