ಬೆಂಗಳೂರಿನಲ್ಲೂ ಪೌರತ್ವ ತಿದ್ದುಪಡಿ ವಿರುದ್ಧ ಧಿಕ್ಕಾರದ ಕೂಗು
ಬೆಂಗಳೂರು, ಡಿಸೆಂಬರ್.23: ರಾಜ್ಯದಲ್ಲೂ ಕೂಡಾ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ತೀವ್ರಕೊಂಡಿದೆ. ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ಮುಸ್ಲಿಂ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಿದ್ದಾರೆ.
ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ಜಾರಿಗೊಳಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಒಂದು ಕಡೆಯಲ್ಲಿ ಸಿಎಎ ಹಾಗೂ ಎನ್ಆರ್ ಸಿ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ.
ಇನ್ನೊಂದೆಡೆ ಬೆಂಗಳೂರಿನಲ್ಲೇ ಸಿಎಎ ಹಾಗೂ ಎನ್ಆರ್ ಸಿ ಪರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತೆ ಎರಡು ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಇಲ್ಲಿ ವಾಹನ ಸವಾರರು ಟ್ರಾಫಿಕ್ ಜಾಮ್ ನಿಂದ ಹೈರಾಣಾಗಿದ್ದಾರೆ.

ಬೆಂಗಳೂರಿನ ಖುದ್ದೂಸ್ ಸಾಹೇಬ್ ಈದ್ಗಾ ಮೈದಾನದಲ್ಲಿ ನೆರೆದ ಸಾವಿರಾರು ಮುಸ್ಲಿಂ ಬಾಂಧವರು ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಒಂದು ಕಡೆಯಲ್ಲಿ ಮೌನ ಪ್ರತಿಭಟನೆ ನಡೆಸಿದರು. ಎರಡು ಗಂಟೆಗಳ ಕಾಲ ಶಾಂತಿಯುತ ಪ್ರತಿಭಟನೆಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ರಾಜ್ಯದ ಮೂಲೆಮೂಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಅಲ್ಪಸಂಖ್ಯಾತ ಮುಖಂಡರು, ಸಾರ್ವಜನಿಕರು ಬೆಂಗಳೂರಿಗೆ ಹರಿದು ಬಂದಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ತ್ರಿವರ್ಣ ಧ್ವಜವನ್ನು ಹಿಡಿದು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಹಿಂದೂ-ಮುಸ್ಲಿಂ ಭಾಯಿ ಭಾಯಿ ಎಂದು ಘೋಷಣೆಗಳನ್ನು ಕೂಗಿದರು. ಇನ್ ಕಿಲಾಬ್ ಜಿಂದಾಬಾದ್, ಹಿಂದೂಸ್ತಾನ್ ಜಿಂದಾಬಾದ್ ಎಂಬ ಘೋಷಣೆಗಳನ್ನು ಕೂಗಿದರು. ವಂದೇ ಮಾತರಂ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಾರೇ ಜಹಾಸೇ ಅಚ್ಚಾ ಹಾಡಿದ ಮೌಲಾನಾ:
ಈದ್ಲಾ ಮೈದಾನದಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಹಿಂಬದಿಯಲ್ಲಿ ಸಂವಿಧಾನದ ಭಾವಚಿತ್ರವನ್ನು ಹಾಕಲಾಗಿತ್ತು. ಇದೇ ಸಂದರ್ಭದಲ್ಲಿ ನೆರೆದ ಜನಸ್ತೋಮದ ಎದುರಿನಲ್ಲೇ ಮೌಲಾನಾ ಸಾರೇ ಜಹಾಸೇ ಅಚ್ಚಾ ಹಾಡನ್ನು ಹಾಡಿದರು. ಆ ಮೂಲಕ ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದರು.












Click it and Unblock the Notifications