ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ: ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಪೊಲೀಸ್ ಕಮಿಷನರ್!
ಬೆಂಗಳೂರು, ಡಿ. 23: ಕೊರೊನಾ ರೂಪಾಂತರ ವೈರಾಣು ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 23ರ ರಾತ್ರಿಯಿಂದ ಜನವರಿ 2 ರವರೆಗೆ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಮಾಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಮಾಡಿದ್ದಾರೆ. ರಾತ್ರಿ 10 ರಿಂದ ಬೆಳಗಿನ 6 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ ಎಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸಿಎಂ ಯಡಿಯೂರಪ್ಪ ಅವರು ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ರಾತ್ರಿ ಕರ್ಫ್ಯೂ: ಏನು ಇರುತ್ತದೆ? ಏನು ಇರುವುದಿಲ್ಲ?
ಇಂದಿನಿಂದ ನೈಟ್ ಕರ್ಫ್ಯೂಗೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡುತ್ತಿದ್ದಂತೆಯೆ ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾರೆ. ಹೊಸ ವರ್ಷ ವರ್ಷಾಚರಣೆ ಸಂದರ್ಭದಲ್ಲಿ ಯಾವೆಲ್ಲ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು? ರಾತ್ರಿ ಕರ್ಪ್ಯೂ ಯಾವ ರೀತಿ ಜಾರಿ ಮಾಡಬೇಕು ಎಂಬುದರ ಕುರಿತು ಸಿಎಂ ಅವರೊಂದಿಗೆ ಕಮಿಶನರ್ ಪಂತ್ ಚರ್ಚೆ ನಡೆಸಿದ್ದಾರೆ. ಜೊತೆಗೆ ಹೊ ವರ್ಷಾಚರಣೆ ಸಂದರ್ಭದಲ್ಲಿ ಕದ್ದು ಮುಚ್ಚಿ ಪಾರ್ಟಿ ಮಾಡದಂತೆ ಎಚ್ಚರಿಕೆ ವಹಿಸುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದರು.
ನೈಟ್ ಕರ್ಫ್ಯೂ ಸಂದರ್ಭದಲ್ಲಿ ಗೊಂದಲವಾಗದಂತೆ ಅನುಷ್ಠಾನಕ್ಕೆ ತರುವಂತೆ ಸಿಎಂ ಯಡಿಯೂರಪ್ಪ ಅವರು ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಜೊತೆಗೆ ಹೊಸ ವರ್ಷದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದೂ ಯಡಿಯೂರಪ್ಪ ಅವರು ಕಮಲ್ ಪಂತ್ ಅವರಿಗೆ ಸೂಚಿಸಿದ್ದಾರೆ.
Recommended Video