ಭಾರತ್ ಬಂದ್: ಪ್ರತಿಭಟನೆ ವೇಳೆ ಕಾರ್ಮಿಕರ ನಡುವೆ ಗಲಾಟೆ
ಬೆಂಗಳೂರು, ಜನವರಿ 7; ವಿವಿಧ ಕಾರ್ಮಿಕ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಭಾರತ್ ಬಂದ್ ವೇಳೆ ಬೆಂಗಳೂರಿನಲ್ಲಿ ಕಾರ್ಮಿಕರ ನಡುವೆ ಸಿಎಎ ಹಾಗೂ ಎನ್ಆರ್ಸಿ ವಿಚಾರವಾಗಿ ಗಲಾಟೆ ನಡೆದಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ವಿವಿಧ ಕಾರ್ಮಿಕ ಸಂಘಟನೆಗಳು ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವು. ಈ ವೇಳೆ ಕಿರ್ಲೋಸ್ಕರ್ ಕಂಪೆನಿ ಕಾರ್ಮಿಕನೊಬ್ಬ ರಾಷ್ಟ್ರೀಯ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರೋಧಿಸಿ ಘೋಷಣೆ ಕೂಗಿದರು. ಈ ವೇಳೆ ಕಾರ್ಮಿಕ ಸಂಘಟನೆಗಳು ಆತನನ್ನು ತರಾಟೆಗೆ ತೆಗೆದುಕೊಂಡು, 'ಕಾರ್ಮಿಕರ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ಮಾಡುತ್ತಿದ್ದೇವೆ. ವಿಷಯಾಂತರ ಮಾಡಬೇಡಿ' ಎಂದು ವಾಗ್ವಾದ ನಡೆಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಆ ಕಾರ್ಮಿಕನನ್ನು ವಶಕ್ಕೆ ಪಡೆದುಕೊಂಡ ನಂತರ ಪರಿಸ್ಥಿತಿ ತಿಳಿಯಾಯಿತು.
ಭಾರತ್ ಬಂದ್; ಪ್ರತಿಭಟನಾಕಾರರಿಗೆ ಸಿಎಂ ಯಡಿಯೂರಪ್ಪ ನೀಡಿದ ಎಚ್ಚರಿಕೆ
ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ಬುಧವಾರ ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಸ್ ಸಂಚಾರ ಜನ ಸಂಚಾರ ಎಂದಿನಂತೆ ಕಂಡು ಬಂದಿತಾದರೂ ಬೆಳಿಗ್ಗೆ 11 ಗಂಟೆಯವರೆಗೆ ಜನ ಸಂಚಾರ ಅಷ್ಟೊಂದು ಕಂಡು ಬಂದಿರಲಿಲ್ಲ.