ಪೌರ ಕಾರ್ಮಿಕರಿಂದ ನಗರ ಸ್ವಚ್ಛತಾ ಕಾರ್ಯ ಸ್ಥಗಿತ?
ಬೆಂಗಳೂರು, ಫೆಬ್ರವರಿ 24 : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರು ಹಾಗೂ ಡಿ ದರ್ಜೆ ನೌಕರರು ಮಾರ್ಚ್ 14 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ವಿವಿಧ ಬೇಡಿಕೆಗಳನ್ನು 15 ದಿನದೊಳಗೆ ಈಡೇರಿಸದಿದ್ದರೆ ಮಾ.14 ರಿಂದ ಅನಿರ್ಧಿಷ್ಟಾವಧಿ ಕಾಲ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸುವುದಾಗಿ ಪೌರ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ತಿಳಿಸಿದೆ.
ನಾಲ್ಕು ಸಾವಿರ ಪೌರ ಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇಮಕಾತಿ ಮೂಲಕ ನೇಮಕ ಮಾಡಬೇಕು. ಗುತ್ತಿಗೆ ಪೌರ ಕಾರ್ಮಿಕರು ಹಾಗೂ ದಿನ ಗೂಲಿ ಪೌರ ಕಾರ್ಮಿಕರ ಹುದ್ದೆ ಖಾಯಂಗೊಳಿಸಬೇಕು. ಸಮಾನ ಕೆಲಸಕ್ಕೆ ಸಮಾನ ವೇತನದಡಿ ಕಳೆದ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಗ್ರಾಮ ಪಂಚಾಯ್ತಿ ಪೌರ ಕಾರ್ಮಿಕರು, ಗ್ಯಾಂಗ್ಮೆನ್, ನೀರು ಸರಬರಾಜು ಸಹಾಯಕರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಹೇಳಿದ್ದಾರೆ.
ಗುತ್ತಿಗೆ ಪೌರ ಕಾರ್ಮಿಕರ ಪಿಎಫ್ ಹಣ ದುರ್ಬಳಕೆ ಮಾಡಿಕೊಂಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಸಮಿತಿ ಅಧ್ಯಕ್ಷ ಎನ್.ನಾರಾಯಣ ತಿಳಿಸಿದ್ದಾರೆ. ಇನ್ನುಳಿದಂತೆ ಬಯೋಮೆಟ್ರಿಕ್ ವ್ಯವಸ್ಥೆಯಲ್ಲಿ ಪೌರ ಕಾರ್ಮಿಕರಿಗೆ ಅನನುಕೂಲತೆ ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದರು.

ಕಿಲೋಮೀಟರ್ ಲೆಕ್ಕದಲ್ಲಿ ಪೌರ ಕಾರ್ಮಿಕರನ್ನು ಕೆಲಸಕ್ಕೆ ನಿಯೋಜಿಸುವ ಅವೈಜ್ಞಾನಿಕ ಪದ್ಧತಿಯನ್ನು ಕೈಬಿಡಬೇಕು. 4ನೇ ದರ್ಜೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ಪಾವತಿಸಬೇಕು . 15 ದಿನಗಳ ಒಳಗೆ ಬೇಡಿಕೆ ಈಡೇರಿಸದಿದ್ದರೆ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.











Click it and Unblock the Notifications