ನೇಕಾರರ ಸಮಸ್ಯೆಗಳ ಪರಿಹಾರಕ್ಕೆ ಸಕಲ ನೆರವು: ಎಚ್ಡಿಕೆ ಘೋಷಣೆ
ಬೆಂಗಳೂರು, ನವೆಂಬರ್ 14: ರಾಜ್ಯದ ನೇಕಾರರ ಸಮಸ್ಯೆಗಳನ್ನು ಪರಿಹರಿಸಲು ಸಕಲ ನೆರವು ನೀಡಲಾಗುವುದು, ಸದ್ಯಕ್ಕೆ ನೇಕಾರರ ಪರಿಸ್ಥಿತಿ ರೈತರಿಗಿಂತ ದುಸ್ತರವಾಗಿದೆ ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯ ನೇಕಾರರ ಸಮಸ್ಯೆಗಳ ಕುರಿತಂತೆ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು. ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ಬಹುತೇಕ ಸಂದರ್ಭದಲ್ಲಿ ರೈತರಿಗಿಂತ ದುಸ್ತರವಾಗಿದೆ. ಹಲವಾರು ಕುಟುಂಬಗಳ ಸದಸ್ಯರು ಆತ್ಮಹತ್ಯೆಯಂತಹ ಕ್ರಮಕ್ಕೂ ಮುಂದಾಗಿದ್ದಾರೆ.
ನೇಕಾರರ ಬವಣೆಗಳನ್ನು ನಿವಾರಿಸಲು ಸರ್ಕಾರ ಮುಂದಾಗಿದೆ. ನೇಕಾರರ ಅಭಿವೃದ್ಧಿಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಯೋಜನೆಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಸಂಬಂಧಿಸಿದ ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಶೀಘ್ರವೇ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಮತ್ತು ನೇಕಾರರ ಸಮಸ್ಯೆಗಳಿಗೆ ಸೂಕ್ತ ರೀತಿಯ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿಗಳು ಸಭೆಯಲ್ಲಿ ಭರವಸೆ ನೀಡಿದರು.

ಸಭೆಯಲ್ಲಿ ನೇಕಾರರ ಸಂಘದ ಅಧ್ಯಕ್ಷ ಶ್ರೀ ಶಿವಲಿಂಗ. ಜಿ. ಟಿರಕಿ, ಸಂಘದ ಪದಾಧಿಕಾರಿಗಳು ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ , ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ರಾಕೇಶ್ ಸಿಂಗ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಐ.ಎನ್.ಎಸ್.ಪ್ರಸಾದ್ ಮತ್ತು ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎ.ವಿ.ರಮಣರೆಡ್ಡಿ ಉಪಸ್ಥಿತರಿದ್ದರು.











Click it and Unblock the Notifications