ಬೆಂಗಳೂರು ಮೆಟ್ರೋ ಯೋಜನೆ ಶೀಘ್ರ ಪೂರ್ಣಗೊಳಿಸಲು ಸಿಎಂ ಬೊಮ್ಮಾಯಿ ಸೂಚನೆ!
ಬೆಂಗಳೂರು, ನ. 08: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಜೊತೆಗೆ ಅಧಿಕಾರಿಗಳಿಗೆ ಹಲವು ಖಡಕ್ ಸೂಚನೆಗಳನ್ನು ಸಿಎಂ ಬೊಮ್ಮಾಯಿ ಕೊಟ್ಟಿದ್ದಾರೆ.
ಬೆಂಗಳೂರಿನ ಕೇಂದ್ರ ಭಾಗದ ರಸ್ತೆಗಳ ಅತ್ಯುತ್ತಮ ನಿರ್ವಹಣೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸೂಚಿಸಿದ್ದಾರೆ. ಜೊತೆಗೆ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ. ಈ ಎಲ್ಲದರ ಬಗ್ಗೆ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದ್ದಾರೆ.
ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗಿಂತ ಒಂದು ವರ್ಷ ಮೊದಲೇ ಪೂರ್ಣ ಗೊಳಿಸಲು ಸಭೆಯಲ್ಲಿ ಚರ್ಚೆ ಮಾಡಲಾಯಿತು. ಅದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬೊಮ್ಮಾಯಿ ನಿರ್ದೇಶನವನ್ನು ನೀಡಿದ್ದಾರೆ. ಮೆಟ್ರೋ ರೈಲು ಯೋಜನೆಗೆ ಬೇಕಾದ ಎಲ್ಲ ಸೌಲಭ್ಯ, ಸಹಕಾರವನ್ನು ರಾಜ್ಯ ಸರ್ಕಾರ ಕೊಡಲಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ಉಪನಗರ ರೈಲು ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆ. ಇದಕ್ಕೆ 15.40 ಕಿ. ಮೀ. ಮಾರ್ಗ ನಿರ್ಮಾಣಕ್ಕೆ ಕೆ ಐ ಎ ಡಿ ಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ಸಭೆಯಲ್ಲಿ ಬೊಮ್ಮಾಯಿ ಸೂಚಿಸಿದ್ದಾರೆ.
ಕೆ 100 ವಾಟರ್ ವೇ ಯೋಜನೆಯಡಿ 11 ಕಿ. ಮೀ. ರಾಜಕಾಲುವೆ ಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ನಿರ್ದೇಶನ ನೀಡಿದರು.
ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು 128 ಕೋಟಿ ರೂ. ವೆಚ್ಚದಲ್ಲಿ 25 ಕೆರೆಗಳ ಅಭಿವೃದ್ಧಿ ಕೈಗೆತ್ತಿಕೊಳ್ಳಲಾಗಿದೆ. ಜನವರಿ ಅಂತ್ಯದ ವೇಳೆಗೆ ಪೂರ್ಣ ಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವು ಗೊಳಿಸಿ ಹಸಿರು ಬೇಲಿ (Green fencing) ಹಾಕುವಂತೆ ಸೂಚಿಸಿದರು. ಈ ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಬೆಂಗಳೂರು ಮಿಷನ್ 2022 ಪ್ರಗತಿ ಪರಿಶೀಲನಾ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ರೈಲ್ವೇ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.