ಪೌರತ್ವ ಕಾಯ್ದೆ ಕಿಚ್ಚು: ಸಿಎಂ ನಿವಾಸಕ್ಕೆ ಅಧಿಕಾರಿಗಳ ಸಾಲುಸಾಲು ಭೇಟಿ
ಬೆಂಗಳೂರು, ಡಿಸೆಂಬರ್.19: ರಾಜ್ಯದಲ್ಲೂ ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿ ಗಂಟೆ ಗಂಟೆಗೂ ಆತಂಕ ಹೆಚ್ಚುತ್ತಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.
ಮಂಗಳೂರು, ಬೆಂಗಳೂರಿನಲ್ಲಿ ಹೋರಾಟ ತೀವ್ರತೆ ಪಡೆದುಕೊಳ್ಳುತ್ತಿದ್ದು, ಪರಿಸ್ಥಿತಿ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೇ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ನಿವಾಸಕ್ಕೆ ಧಾವಿಸಿ ಬರುತ್ತಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಗುಪ್ತಚರ ಇಲಾಖೆ ಎಡಿಜಿಪಿ ಕಮಲ್ ಪಂಥ್ ಬೆಳಗ್ಗೆಯಿಂದ ಮೂರು ಬಾರಿ ಭೇಟಿ ನೀಡಿದರು. ರಾಜ್ಯದಲ್ಲಿ ಆಗುತ್ತಿರುವ ಪ್ರತಿಯೊಂದು ಬೆಳವಣಿಗೆ, ಸ್ಥಿತಿಗತಿಯ ಬಗ್ಗೆ ಮುಖ್ಯಮಂತ್ರಿಯವರಿಗೆ ಸಂಪೂರ್ಣ ವಿವರಣೆ ನೀಡಿದ್ದಾರೆ ಎನ್ನಲಾಗಿದೆ.

ಕ್ಷಣಕ್ಷಣದ ಮಾಹಿತಿ ಸಂಗ್ರಹಿಸುತ್ತಿರುವ ಸಿಎಂ:
ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆಯ ಬಿಸಿ ಹೇಗಿದೆ ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಯಾವ ರೀತಿ ಕ್ರಮ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ವರದಿ ತಯಾರಿಸಿ ಸಿಎಂಗೆ ನೀಡಲಾಗುತ್ತಿದೆ.
ಇನ್ನು, ಕಮಲ್ ಪಂತ್ ಬೆನ್ನೆಲ್ಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತೆರಳಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂನ್ನು ಭೇಟಿ ಮಾಡಿದ ಹಿರಿಯ ಅಧಿಕಾರಿ ಬೆಂಗಳೂರು ಪ್ರತಿಭಟನೆ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಇದರ ಮಧ್ಯೆ ರಾಜ್ಯದ ಮುಸ್ಲಿಂ ಧರ್ಮಗುರುಗಳ ನಿಯೋಗವೂ ಕೂಡಾ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿದರು. ಕರ್ನಾಟಕ ಮುಸ್ಲಿಂ ಜಮಾತ್ ನ ಸದಸ್ಯರಿಂದ ಬಿಎಸ್ ವೈರನ್ನು ಭೇಟಿ ಮಾಡಿ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಚರ್ಚಿಸಿದರು. ರಾಜ್ಯದಲ್ಲಿ ಕಾಯ್ದೆ ಜಾರಿಗೊಳಿಸುವ ಮುನ್ನ ಕಾಯ್ದೆಯಲ್ಲಿರುವ ಸಂಶಯಗಳನ್ನು ನಿವಾರಿಸುವಂತೆ ಮನವಿ ಮಾಡಿಕೊಂಡರು.












Click it and Unblock the Notifications