ಬೆಂಗಳೂರು ಮಳೆ: ಹಾನಿಗೊಳಗಾದ ಕುಟುಂಬಕ್ಕೆ 25,000 ಪರಿಹಾರ
ಬೆಂಗಳೂರು, ಅಕ್ಟೋಬರ್ 24: ನಗರದಲ್ಲಿ ಉಂಟಾದ ಭಾರಿ ಮಳೆಯಿಂದ ಮನೆ ಹಾನಿ ಹಾಗೂ ಇನ್ನಿತರೆ ಸಂಕಷ್ಟಗಳನ್ನು ಅನುಭವಿಸಿದ ಕುಟುಂಬಕ್ಕೆ ತಲಾ 25,000 ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ,
ಸಚಿವರು, ಅಧಿಕಾರಿಗಳ ಜತೆ ಸಭೆ ಬಳಿಕ ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಹಾನಿಗೊಳಗಾದ ಕುಟುಂಬದವರಿಗೆ ಚೆಕ್ ಮೂಲಕ ತಲಾ 25,000 ರೂ. ಪರಿಹಾರವನ್ನು ತಕ್ಷಣಕ್ಕೆ ಒದಗಿಸುವುದಾಗಿ ಅವರು ಶನಿವಾರ ಪ್ರಕಟಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯ ಹಿನ್ನಲೆಯಲ್ಲಿ ನೀರು ನುಗ್ಗಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮತ್ತು ಭಾನುವಾರ ಕೂಡ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಹೀಗಾಗಿ ಕಟ್ಟೆಚ್ಚರ ವಹಿಸಿ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರಿಗೆ ಸೂಚನೆ ನೀಡಿದ್ದಾರೆ.
ಕೆಲವು ದಿನಗಳಷ್ಟೇ ಪ್ರವಾಹದಿಂದ ಹಾನಿಗೊಳಗಾದ ಉತ್ತರ ಕರ್ನಾಟಕದ ಭಾಗಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದ ಮುಖ್ಯಮಂತ್ರಿ, ಬೆಂಗಳೂರಿನ ದಕ್ಷಿಣ ಭಾಗಗಳಲ್ಲಿ ಶುಕ್ರವಾರ ಸುರಿದ ಭಾರಿ ಮಳೆಗೆ ಉಂಟಾದ ಸಮಸ್ಯೆಗಳ ಅವಲೋಕನ ಮಾಡಲು ಶನಿವಾರ ನಗರ ಸಂಚಾರ ನಡೆಸಲಿದ್ದಾರೆ. ಮುಖ್ಯವಾಗಿ ಹೆಚ್ಚು ಸಂಕಷ್ಟ ಉಂಟಾದ ಹೊಸಕೆರೆಹಳ್ಳಿಗೆ ಅವರು ಭೇಟಿ ನೀಡಿ ಪರಿಶೀಲಿಸಲಿದ್ದು, ಸ್ಥಳದಲ್ಲಿಯೇ ಪರಿಹಾರದ ಚೆಕ್ ವಿತರಿಸಲಿದ್ದಾರೆ.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ 25,000 ರೂ ಪರಿಹಾರ
— oneindiakannada (@OneindiaKannada) October 24, 2020
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ
#BengaluruRains @BSYBJP pic.twitter.com/tqp20dbVcF
ಕಾವೇರಿಯಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕಂದಾಯ ಸಚಿವ ಆರ್. ಅಶೋಕ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ.ರಮಣರೆಡ್ಡಿ, ಬಿ.ಬಿ.ಎಂ. ಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಹಾಗೂ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಉಪಸ್ಥಿತರಿದ್ದರು.












Click it and Unblock the Notifications