ವಿದೇಶ ಪ್ರವಾಸಕ್ಕೆ ಹೋಗೊಲ್ಲ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ
ಬೆಂಗಳೂರು, ಜನವರಿ 9: ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ಜ. 20ರಿಂದ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೆರಳುವುದು ಅನುಮಾನವಾಗಿದೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮಾತನಾಡಿದ ಬಿಎಸ್ ಯಡಿಯೂರಪ್ಪ, ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ. ನಿಮ್ಮ ಜತೆಯೇ ಇರೋಣ ಎಂದುಕೊಂಡಿದ್ದೇನೆ ಎಂದರು.
ವಿದೇಶ ಪ್ರವಾಸಕ್ಕೆ ಬಹುತೇಕ ಹೋಗುವುದಿಲ್ಲ. ಸಚಿವ ಸಂಪುಟ ವಿಸ್ತರಣೆ ಮತ್ತು ಪ್ರವಾಹ ಪರಿಹಾರ ಕಾರ್ಯ ಹಾಗೂ ರಾಜ್ಯದ ಇತರೆ ವಿಷಯಗಳ ಕುರಿತು ಚರ್ಚೆ ನಡೆಸಬೇಕಿದೆ. ಅದಕ್ಕಾಗಿ ಜ.11 ಮತ್ತು 12ರಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಬಂಧಿಸಿದ ಕೇಂದ್ರ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.
ಆದರೆ ಈ ಭೇಟಿಗೆ ಅಂತಿಮವಾಗಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವರು ಅವಕಾಶ ನೀಡಬೇಕು. ಅವರು ಅವಕಾಶ ಕೊಟ್ಟ ಬಳಿಕ ನಾನು ದೆಹಲಿಗೆ ಹೋಗುತ್ತೇನೆ ಎಂದರು.
ಸಿಎಎ ಪರ ಪ್ರಚಾರ ಮಾಡುವ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಹುಬ್ಬಳ್ಳಿಗೆ ಶಿಫ್ಟ್ ಆಗಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ, 'ನೀವೇ ಊಹೆ ಮಾಡಿದ್ರೇ ಹೇಗೆ? ಅಮಿತ್ ಶಾ ಅವರ ಕಾರ್ಯಕ್ರಮ ಫಿಕ್ಸ್ ಆಗಿರೋದೆ ಹುಬ್ಬಳ್ಳಿಯಲ್ಲಿ' ಎಂದು ಹೇಳಿದರು.

ಮೀಸಲಾತಿಗೆ ಕಾನೂನು ಪ್ರಕಾರ ಕ್ರಮ
ವೀರಶೈವ ಲಿಂಗಾಯತ ಧರ್ಮಕ್ಕೆ ಮೀಸಲಾತಿ ನೀಡುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಹೌದು, ವೀರಶೈವ-ಲಿಂಗಾಯತ ಧರ್ಮಕ್ಕೆ ಮೀಸಲಾತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಲು ಸಾಧ್ಯವೋ ಆ ರೀತಿ ಕ್ರಮ ತೆಗೆದುಕೊಳ್ಳಲಾಗುವುದು. ಮನವಿ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ತನಿಖೆಗೆ ಆದೇಶ
ಜ್ಯೋತಿ ನಿವಾಸ ಕಾಲೇಜ್ನಲ್ಲಿ ನಡೆದ ಗಲಾಟೆ ವಿಚಾರದ ಬಗ್ಗೆ ತನಿಖೆ ಮಾಡಿಸೋಣ ಎಂದು ಯಡಿಯೂರಪ್ಪ ಹೇಳಿದರು.
ಬಳಿಕ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, ಸ್ಥಳೀಯ ಪೋಲೀಸರಿಗೆ ಸೂಚನೆ ನೀಡಿದ್ದೇನೆ. ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಕಾಂಗ್ರೆಸ್ ವಿರೋಧದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ನವರು ಎಲ್ಲದರಲ್ಲಿಯೂ ರಾಜಕೀಯ ಮಾಡ್ತಾರೆ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡೋದು ಅವ್ರ ಕೆಲಸ. ತನಿಖೆಗೆ ಸೂಚನೆ ಕೊಟ್ಟಿದ್ದೇನೆ. ತನಿಖೆ ನಂತರ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಫೆ. 26ರಿಂದ ಚಿತ್ರೋತ್ಸವ
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬಿಡುಗಡೆ ಮಾಡಿದರು.
ಫೆ. 26ರಿಂದ ಮಾರ್ಚ್ 4ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ಫೆ.26 ರಂದು ಓರಾಯಿನ್ ಮಾಲ್ ನಲ್ಲಿ ಚಾಲನೆ ಸಿಗಲಿದೆ. ವಿಶ್ವದ 50 ದೇಶಗಳಿಂದ 200 ಸಮಕಾಲೀನ ಚಿತ್ರಗಳು ಪ್ರದರ್ಶನಗೊಳ್ಳಿಲಿದೆ. ಓರಾಯನ್ ಮಾಲ್ ನಲ್ಲಿರುವ ಪಿವಿಆರ್ನ 11 ಸ್ಕ್ರೀನ್ಗಳಲ್ಲಿ ಸಿನಿಮಾ ಪ್ರದರ್ಶನ ನಡೆಯಲಿದೆ. ಸಿನಿಮೋತ್ಸವಕ್ಕೆ ರೂ.800 ಶುಲ್ಕ, ಸಿನಿಮಾ ವಿದ್ಯಾರ್ಥಿಗಳಿಗೆ 400 ರೂ ಶುಲ್ಕ ವಿಧಿಸಲಾಗಿದೆ.

ಸುನೀಲ್ ಪುರಾಣಿಕ್ ಹಾಜರು
ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅರಣ್ಯ ಸಚಿವ ಸಿ.ಸಿ.ಪಾಟೀಲ್, ಶಾಸಕ ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಮಹದೇವ್ ಪ್ರಕಾಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಪಿ.ಮಣಿವಣ್ಣನ್ ಉಪಸ್ಥಿತರಿದ್ದರು.












Click it and Unblock the Notifications