ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ: ಮಣಿಪಾಲ್ ಆಸ್ಪತ್ರೆಯಿಂದ ಮಾಹಿತಿ
ಬೆಂಗಳೂರು, ಆಗಸ್ಟ್ 03: ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆ ತಿಳಿಸಿದೆ.
ಕೊರೊನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ ನಿನ್ನೆಯಷ್ಟೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವೈದ್ಯರ ಸಲಹೆಗಳ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು.
ಯಡಿಯೂರಪ್ಪ ಪುತ್ರಿಗೂ ಕೂಡ ಸೋಂಕು ತಗುಲಿದೆ, ಪುತ್ರ ವಿಜಯೇಂದ್ರ ಅವರಿಗೆ ನೆಗೆಟಿವ್ ಬಂದಿದೆ.ಇದರೊಂದಿಗೆ ಯಡಿಯೂರಪ್ಪ ಅವರು ಕೊವಿಡ್ ಸೋಂಕಿಗೆ ಒಳಗಾದ ದೇಶದ 2ನೇ ಮುಖ್ಯಮಂತ್ರಿಯಾಗಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪಾಟಿಸಿವ್ ಬಂದು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಯಡಿಯೂರಪ್ಪ ಆರೋಗ್ಯ ಕುರಿತಂತೆ ಇದೀಗ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದು, ಯಡಿಯೂರಪ್ಪ ಅವರು ಚಿಕಿತ್ಸೆಗೆ ಸ್ಪಂದನೆ ನೀಡುತ್ತಿದ್ದು, ಆರೋಗ್ಯ ಸ್ಥಿರವಾಗಿದೆ. ನಮ್ಮ ತಂಡ ಬಹಳ ಹತ್ತಿರದಿಂದ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ತಿಳಿಸಿದ್ದಾರೆ.
ಯಡಿಯೂರಪ್ಪ ಅವರು ದಿನವೂ ಅನೇಕ ಸಚಿವರು, ಅಧಿಕಾರಿಗಳು, ವೈದ್ಯರು, ಖಾಸಗಿ ಆಶ್ಪತ್ರೆಗಳು ಸೇರಿದಂತೆ ಇತರೆ ಪ್ರಮುಖರೊಂದಿಗೆ ಸಭೆಗಳಲ್ಲಿ ಭಾಗವಹಿಸುತ್ತಿದ್ದ ಕಾರಣ ಪ್ರತಿ ವಾರವೂ ಅವರಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿತ್ತು.












Click it and Unblock the Notifications