BREAKING: ಗುರುವಾರ ರಾಜ್ಯಾದ್ಯಂತ ಮಾಸ್ಕ್ ಡೇ ಆಚರಣೆ: ಬಿಎಸ್ವೈ
ಬೆಂಗಳೂರು, ಜೂ. 15: ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯುರಪ್ಪ ಅವರು ತುರ್ತು ಸಭೆ ನಡೆಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆದಿದ್ದು, ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್ 19 ನಿಯಂತ್ರಣ ಮಾಡುವ ನಿಟ್ಟಿನಲ್ಲಿ ವಿಶೇಷ ಕಾರ್ಯಪಡೆ ರಚಿಸಲು ಸೂಚಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸೂಚಿನೆಯಂತೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.
Recommended Video
ಲಾಕ್ಡೌನ್ ತೆರವಾದ ಬಳಿಕ ಕೋವಿಡ್ ಪ್ರಕರಣಗಳು ಬೆಂಗಳೂರಿನಲ್ಲಿ ಹೆಚ್ಚುತ್ತಿರುವುದರಿಂದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಸೇರಿದಂತೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆಯಲ್ಲಿ ಚರ್ಚೆ ನಡೆಸಿದ್ದಾರೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಿಎಸ್ವೈ ಅವರು, ಬೆಂಗಳೂರಿನಲ್ಲಿ ಒಟ್ಟು 697 ಪ್ರಕರಣಗಳು ವರದಿಯಾಗಿವೆ. 330 ಸಕ್ರಿಯ ಪ್ರಕರಣಗಳಿದ್ದು, 6 ಜನ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್ನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಜನರಲ್ಲಿ ಅರಿವು ಮೂಡಿಸಲು ಮಾಸ್ಕ್ ಡೇ ಆಚರಣೆಗೆ ತೀರ್ಮಾನ ಮಾಡಿದ್ದೇವೆ. ಇದೇ ಗುರುವಾರ (ಜೂ.18) ರಂದು ಇಡೀ ರಾಜ್ಯಾದ್ಯಂತ ಮಾಸ್ಕ್ ಡೇ ಆಚರಿಸಲಾಗುವುದು. ವಿಧಾನಸೌಧದಿಂದ ಬೆಳಿಗ್ಗೆ 8.30 ಗಂಟೆಗೆ ಮಾಸ್ಕ್ ಧರಿಸಿ 1 ಕಿ.ಮೀ. ವಾಕ್ ಮಾಡುತ್ತೇನೆ. ರಾಜ್ಯಾದ್ಯಂತ, ಪಂಚಾಯತ್ ಮಟ್ಟದಲ್ಲಿಯೂ ಇದನ್ನು ಆಚರಿಸಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಮತ್ತೆ ಕ್ವಾರಂಟೈನ್: ಮಹಾರಾಷ್ಟ್ರ ರಾಜ್ಯದಿಂದ ಬರುವವರಿಗೆ ಏಳು ದಿನ ಕ್ವಾರಂಟೈನ್, ಚೆನ್ನೈ, ದೆಹಲಿಯಿಂದ ಬರುವವರಿಗೆ ಮೂರು ದಿನ ಕ್ವಾರಂಟೈನ್ ಮಾಡಲಾಗುವುದು. ಮಾಸ್ಕ್ ಧರಿಸದ ವ್ಯಕ್ತಿಗಳು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ವ್ಯಕ್ತಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಹಾಗೂ 200 ರೂ. ದಂಡ ವಿಧಿಸಲಾಗುವುದು.
8000 ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಪತ್ತೆ ಹಚ್ಚುವುದು, ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು, ಹೋಂ ಕ್ವಾರಂಟೈನ್ ಪಾಲನೆಯನ್ನು ಖಾತರಿ ಪಡಿಸುವ ಬಗ್ಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳು ಇದ್ದು, 93 ಶೇಕಡಾ ಜನರಿಗೆ ರೋಗ ಲಕ್ಷಣ ಇಲ್ಲ. 200 ಜನರಿಗೆ ಮಾತ್ರ ರೋಗ ಲಕ್ಷಣ ಇದೆ.

ಪರೀಕ್ಷಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ರಾಜ್ಯದಲ್ಲಿ 10 ಲಕ್ಷ ಜನಸಂಖ್ಯೆಗೆ 7100 ಪರೀಕ್ಷೆ ನಡೆಸಲಾಗಿದೆ. ಐಸಿಎಂಆರ್ ಮಾರ್ಗಸೂಚಿಗಳಿಗಿಂತ ಹೆಚ್ಚು ಪರೀಕ್ಷೆ ನಡೆಸಲಾಗಿದೆ. ಚಿಕಿತ್ಸೆಯ ವಿಧಿ ವಿಧಾನ ಹಾಗೂ ಚಿಕಿತ್ಸೆ ದರ ನಿಗದಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಕುರಿತು ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು.
ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತೆ ಆತಂಕ ಪಡಬೇಕಾಗಿಲ್ಲ. ಆದರೆ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಮತ್ತು ವೈಯಕ್ತಿಕ ಸ್ವಚ್ಛತೆಯಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದೆ ತೆಗೆದುಕೊಳ್ಳಬೇಕು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.












Click it and Unblock the Notifications