ಜಾತಿ ಗಣತಿ ಬಹಿರಂಗಪಡಿಸುವ ಪ್ರಸ್ತಾವವೇ ಇಲ್ಲ: ಕುಮಾರಸ್ವಾಮಿ
ಬೆಂಗಳೂರು, ಅಕ್ಟೋಬರ್ 23: ಕಳೆದ 5 ವರ್ಷಗಳಿಂದ ಶಿಥಿಲಾಗೃಹದಲ್ಲಿ ಕೊಳೆಯುತ್ತಿರುವ ಕರ್ನಾಟಕ ಸಾಮಾಜಿಕ, ಆರ್ಥಿಕ ಸಮೀಕ್ಷೆ ಜಾತಿ ಗಣತಿಯನ್ನು ಬಿಡುಗಡೆ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ಕುರಿತು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಸ್ವತ ಹೇಳಿಕೆ ನೀಡಿದ್ದು, ಜಾತಿ ಗಣತಿಯನ್ನು ಬಹಿರಂಗಪಡಿಸುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರೆಸ್ಕ್ಲಬ್ನಲ್ಲಿ ಮಂಗಳವಾರ ನಡೆದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಅವರು, ಜಾತಿ ಗಣತಿಯಲ್ಲಿ ಕೆಲವು ಸೂಕ್ಷ್ಮ ವಿಚಾರಗಳಿವೆ ಅವುಗಳನ್ನು ಬಹಿರಂಗಪಡಿಸಿದರೆ ಹಲವಾರು ಸಮಸ್ಯೆಗಳು ಉದ್ಭವಿಸುತ್ತವೆ. ಹೀಗಾಗಿ ಜಾತಿ ಗಣತಿಯನ್ನು ಬಹಿರಂಗಪಡಿಸುವ ಯಾವುದೇ ಅಗತ್ಯತೆ ಕಾಣುತ್ತಿಲ್ಲ ಎಂದು ಜಾರಿಕೊಂಡರು.

ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2014ರಲ್ಲಿ 180ಕೋಟಿ ರೂ ವೆಚ್ಚದಲ್ಲಿ ರಾಜ್ಯಾದ್ಯಂತ ಜಾತಿ ಗಣತಿ ನಡೆಸಲಾಗಿತ್ತು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿದ ಜಾತಿ ಗಣತಿಯಲ್ಲಿ ದಲಿತ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಕರ್ನಾಟಕದಲ್ಲಿರುವ ನೂರಕ್ಕೂ ಹೆಚ್ಚು ಹಿಂದುಳಿದ ವರ್ಗಗಳ ಜನಸಂಖ್ಯೆಯ ನಿಖರ ಮಾಹಿತಿ ಹೊರಬರುತ್ತದೆ ಎಂದು ನಿರೀಕ್ಷಿಸಲಾಗಿತ್ತು.
ಇದರಿಂದ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಗೆ ಹೆಚ್ಚು ಒತ್ತು ಬರುತ್ತದೆ ಎನ್ನುವ ಕಾರಣಕ್ಕೆ ಈ ಹಿಂದಿನ ಸಿದ್ದಾಮಯ್ಯ ಸರ್ಕಾರ ಜಾತಿಗಣತಿಯನ್ನು ಬಹಿರಂಗಪಡಿಸಿರಲಿಲ್ಲ. ಅಲ್ಲದೆ ಜಾತಿ ಗಣತಿ ನಡೆಸುವ ವೇಳೆ ಅಲ್ಲಿನ ಸಿದ್ದರಾಮಯ್ಯ ಕ್ರಮಕ್ಕೆ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಹಾಗೂ ಅಂದಿನ ವಿರೋಧ ಪಕ್ಷದ ನಾಯಕರಾಗಿದ್ದ ಎಚ್ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು.
ಈಗ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿರುವುದರಿಂದ ಜಾತಿಗಣತಿಯನ್ನು ಸರ್ಕಾರ ನಿರ್ಲಕ್ಷಿಸುತ್ತದೆ ಎಂದು ಹೇಳಲಾಗುತ್ತಿತ್ತು.ಇದೀಗ ಸ್ವತಃ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಜಾತಿಗಣತಿಯನ್ನು ಬಹಿರಂಗಪಡಿಸುವುದಿಲ್ಲ ಎನ್ನುವ ಮೂಲಕ 180 ಕೋಟಿ ರೂಗಳ ಜಾತಿಗಣತಿ ಯೋಜನೆಗೆ ಎಳ್ಳು-ನೀರು ಬಿಟ್ಟಿದ್ದಾರೆ.












Click it and Unblock the Notifications