ಬೆಂಗಳೂರಿನ ವಾಹನಗಳ ಮಾಲೀಕರೆ ಇಲ್ಲಿ ಗಮನಿಸಿ!
ಬೆಂಗಳೂರು, ಡಿ.01: ಬೆಂಗಳೂರು ನಗರದಲ್ಲಿ ವಾಹನ ನಿಲುಗಡೆ ಕುರಿತಂತೆ ಪಾರ್ಕಿಂಗ್ ನೀತಿಯನ್ನು ಪರಿಷ್ಕರಿಸಿ, ಪಾರ್ಕಿಂಗ್ ನೀತಿ 2.0 ಯನ್ನು ರೂಪಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಸರ್ಕಾರದ ಅನುಮೋದನೆ ಸಲ್ಲಿಸಿರುವ ಪಾರ್ಕಿಂಗ್ ನೀತಿ 2.0ನ್ನು ಪರಾಮರ್ಶಿಸಿ, ಪರಿಷ್ಕರಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರಿಗೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕಳೆದ 7 ವರ್ಷಗಳಲ್ಲಿ ವಾಹನಗಳ ಸಂಖ್ಯೆ ದ್ವಿಗುಣಗೊಂಡಿದೆ. ಅನಿಯಂತ್ರಿತ ರಸ್ತೆ ಪಾರ್ಕಿಂಗ್ ನಿಂದಾಗಿ ಸಂಚಾರ ದಟ್ಟಣೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ನಿಯಂತ್ರಿತ, ತಂತ್ರಜ್ಞಾನ ಆಧಾರಿತ ಪಾರ್ಕಿಂಗ್ ವ್ಯವಸ್ಥೆ ರೂಪಿಸುವುದರೊಂದಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪಾರ್ಕಿಂಗ್ ನೀತಿ 2.0 ನ್ನು ರೂಪಿಸಲಾಗುತ್ತಿದೆ.
ಪ್ರಸ್ತುತ ಪಾರ್ಕಿಂಗ್ ನೀತಿ ಕುರಿತಂತೆ ಸ್ವಯಂ ಸೇವಾ ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ವ್ಯಕ್ತಿಗಳ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಈ ಅಭಿಪ್ರಾಯಗಳನ್ನು ಆಧರಿಸಿ, ನವೀಕರಿಸಿದ ನೀತಿಯನ್ನು ಸರ್ಕಾರದ ಅನುಮೋದನೆಗಾಗಿ ಸಲ್ಲಿಸಲಾಗಿದೆ.
ಈ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಯವರು, ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳು ಸಭೆ ಸೇರಿ ಪಾರ್ಕಿಂಗ್ ನೀತಿಯನ್ನು ಪರಾಮರ್ಶಿಸಿ, ಪರಿಷ್ಕರಿಸಿ, ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಸೂಚಿಸಿದರು.
Recommended Video
ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ, ಬಿಡಿಎ ಅಧ್ಯಕ್ಷ ಎಸ್. ಆರ್. ವಿಶ್ವನಾಥ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಯವರ ಸಲಹೆಗಾರರಾದ ಎಂ. ಲಕ್ಷ್ಮೀನಾರಾಯಣ, ನಗರ ಭೂಸಾರಿಗೆ ನಿರ್ದೇಶನಾಲಯದ ಆಯಕ್ತರಾದ ವಿ. ಮಂಜುಳ, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.