ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಠಿಯಾಗೆ ಬೀಳ್ಕೊಡುಗೆ
ಬೆಂಗಳೂರು, ನವೆಂಬರ್ 28 : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿ ಇದೇ ತಿಂಗಳ 30 ರಂದು ಸೇವೆಯಿಂದ ನಿವೃತ್ತರಾಗಲಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಠಿಯಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು.
ಮುಖ್ಯಮಂತ್ರಿ ಅವರ ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಮುಖ್ಯ ಕಾರ್ಯದರ್ಶಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಸಿದ್ದರಾಮಯ್ಯ ಮಾತನಾಡಿ, ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಸುಬಾಷ್ಚಂದ್ರ ಕುಂಠಿಯಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಕೈ ಹಾಗೂ ಬಾಯಿಯನ್ನು ಶುದ್ಧವಾಗಿಟ್ಟುಕೊಂಡು ಕೆಲಸ ಮಾಡಿದ್ದರು ಪ್ರಾಮಾಣಿಕ ಅಧಿಕಾರಿಯಾಗಿದ್ದರು ಎಂದರು.

ರಾಜ್ಯ ಸರ್ಕಾರ ಸುಭಾಷ್ಚಂದ್ರ ಕುಂಠಿಯಾ ಅವರ ಸೇವೆಯನ್ನು ಸದಾ ಸ್ಮರಿಸುತ್ತದೆ. ಮುಂದೆಯು ಸಹ ಅವರು ಸಲಹೆ, ಸಹಕಾರವನ್ನು ನೀಡಲಿ ಎಂದು ಸರ್ಕಾರ ಬಯಸುತ್ತದೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸಾಮಾನ್ಯವಾಗಿ ಸಚಿವ ಸಂಪುಟದ ಸಭೆಯಲ್ಲಿ ಬೀಳ್ಕೊಡುಗೆ ನೀಡುವುದು ಸಂಪ್ರದಾಯ, ಆದರೆ ಈ ವಾರ ಸಚಿವ ಸಂಪುಟ ಸಭೆ ಇರದ ಕಾರಣ ಇಂದು ಬೀಳ್ಕೊಡುಗೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.
ಸುಭಾಷ್ಚಂದ್ರ ಕುಂಠಿಯಾ ಅವರು ನಾನು ರಾಜ್ಯದಲ್ಲಿ ಕಳೆದ 35 ವರ್ಷಗಳಿಂದ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ. ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಒಳ್ಳೆಯ ವಾತಾವರಣದಲ್ಲಿ ಕೆಲಸಮಾಡಿದ್ದೇನೆ.
ರಾಜ್ಯದ ಮುಖ್ಯಮಂತ್ರಿ ಅವರು ಸಚಿವ ಸಂಪುಟದ ಸಚಿವರು ಹಾಗೂ ನನ್ನ ಸಹೋದ್ಯೋಗಿಗಳು ನಾನು ಉತ್ತಮವಾಗಿ ಕೆಲಸ ನಿರ್ವಹಿಸಲು ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ನನಗೆ ಸಹಕಾರ ನೀಡಿದಂತೆ ಮುಂದಿನ ಮುಖ್ಯ ಕಾರ್ಯದರ್ಶಿಗಳಿಗೂ ಉತ್ತಮ ಸಹಕಾರ ನೀಡುವಂತೆ ಸಹೊದ್ಯೋಗಿಗಳಲ್ಲಿ ಮುಖ್ಯಕಾರ್ಯದರ್ಶಿ ಅವರು ಮನವಿ ಮಾಡಿದರು.
ಇಂಧನ ಸಚಿವ ಡಿ.ಕೆ. ಶಿವಕುಮಾರ್, ಸಹಕಾರ ಸಚಿವ ರಮೇಶ್ ಜಾರಕಿಹೋಳಿ, ಪ್ರವಾಸೋದ್ಯಮ ಸಚಿವ ಪ್ರಿಯಾಂಕ ಖರ್ಗೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭ, ಸರ್ಕಾರದ ಅಪರ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಿಜಯಭಾಸ್ಕರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.












Click it and Unblock the Notifications