ಕೇಂದ್ರದ ಮೇಲೆ ಒತ್ತಡ ತನ್ನಿ: ರಾಜ್ಯದ ಸಂಸದರಿಗೆ ಎಚ್ಡಿಕೆ ಆಗ್ರಹ
ಬೆಂಗಳೂರು, ಡಿಸೆಂಬರ್ 04: ರಾಜ್ಯದ ರೈತರು ನೆಲ, ಜಲ ಹಾಗೂ ಗಡಿ ವಿಚಾರವಾಗಿ ಕೇಂದ್ರ ಸರ್ಕಾರದ ಮುಂದೆ ಬಾಕಿ ಉಳಿದಿರುವ 16ಕ್ಕೂ ಹೆಚ್ಚು ಪ್ರಮುಖ ವಿಷಯಗಳ ಕುರಿತು ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕು ಎಂದು ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಜ್ಯದ ಸಂಸದರ ಸಭೆಯಲ್ಲಿ ಮಾತನಾಡಿದ ಅವರು, ಸಂಸದರು, ಪಕ್ಷ ಬೇಧ ಮರೆತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದರೆ ಮಾತ್ರ ರಾಜ್ಯದ ಹಿತ ಕಾಪಾಡಲು ಸಾಧ್ಯ, ಆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಸದರ ಸಹಾಯವನ್ನು ನಿರೀಕ್ಷಿಸುತ್ತದೆ ಎಂದು ಹೇಳಿದರು.
ರಾಜ್ಯದ ನೆಲ, ಜಲ, ಅಭಿವೃದ್ಧಿ, ಕೈಗಾರಿಕೆ, ಕೃಷಿ, ವೈಮಾನಿಕ, ರಕ್ಷಣಾ ಇಲಾಖೆ ಸೇರಿದಂತೆ ಒಟ್ಟು 15 ಇಲಾಖೆಗಳಿಗೆ ಸಂಬಂಧಿಸಿದ ಪ್ರಸ್ತಾವನೆಗಳು ಕೇಂದ್ರ ಸರ್ಕಾರದ ಮುಂದೆ ಪರಿಶೀಲನಾ ಹಂತದಲ್ಲಿದೆ. ಕಳೆದ 6 ತಿಂಗಳಲ್ಲಿ ನಾನೂ ಸೇರಿದಂತೆ ಸಂಬಂಧಪಟ್ಟ ಸಚಿವರು ಅನೇಕ ಸಭೆ ನಡೆಸಿ ಪ್ರಸ್ತಾವನೆಗಳ ಬಗ್ಗೆ ಕ್ರಮವಹಿಸಲು ಸಹಕರಿಸಬೇಕು ಎಂದು ಕೋರಿದರು.

ಕೇಂದ್ರ ಹೆದ್ದಾರಿ ಮತ್ತು ಜಲಸಂಪನ್ಮೂಲ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ರಕ್ಷಣಾ ಸಚಿವರು ರಾಜ್ಯದ ಯೋಜನೆಗಳ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ , ಸ್ಪಷ್ಟ ನಿರ್ದೇಶನಗಳನ್ನು ನೀಡಿದ್ದಾರೆ. ಅವರನ್ನು ಈ ಸಭೆಯ ಮೂಲಕ ಅಭಿನಂದಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಸ್ಥಳೀಯ ರಕ್ಷಣಾ ಇಲಾಖೆ ಅಧಿಕಾರಿಗಳು ಕ್ರಮವಹಿಸದೇ ಇರುವುದರಿಂದ ಕೆಲಸಗಳು ವಿಳಂವಾಗಿದೆ. ಈ ಎಲ್ಲಾ ಯೋಜನೆಗಳ ಬಗ್ಗೆ ಕೇಂದ್ರದ ಗಮನ ಸೆಳೆದು ಸಂಸದರು ಸಹಕರಿಸಬೇಕೆಂದರು.
ಸಭೆಯಲ್ಲಿ ಸಂಸದರಾದ ಸಂಗಣ್ಣ, ಪ್ರಕಾಶ್ ಹುಕ್ಕೇರಿ, ಪಿ.ಸಿ.ಮೋಹನ್, ಗದ್ದಿ ಗೌಡ ರ್, ಆಸ್ಕರ್ ಫರ್ನಾಂಡಿಸ್, ಕೆ.ಸಿ.ರಾಮಮೂರ್ತಿ, ಜಿ. ಇ. ಚಂದ್ರಶೇಖರ್, ಡಾ: ಎಲ್. ಹನುಮಂತಯ್ಯ, ಭಗವಂತ ಕೌಲ್, ಕುಪೇಂದ್ರ ರೆಡ್ಡಿ, ಡಿ.ಕೆ.ಸುರೇಶ್, ಡಿ.ಎನ್. ಚಂದ್ರಪ್ಪ, ಎಸ್.ಪಿ, ಮುದ್ದ ಹನುಮೇ ಗೌಡ, ಪ್ರಹ್ಲಾದ್ ಜೋಶಿ, ಎಲ್.ಆರ್.ಶಿವರಾಮೇಗೌಡ, ಡಿ.ಎಸ್.ಉಗ್ರಪ್ಪ, ಬಿ.ವಿ.ನಾಯಕ್, ಜಿ.ಎಂ. ಸಿದ್ದೇಶ್ವರ್ ಭಾಗವಹಿಸಿದ್ದರು.
ಸಚಿವರುಗಳಾದ ಆರ್.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್, ಕೃಷ್ಣ ಬೈರೇಗೌಡ, ಕೆ.ಜೆ.ಜಾರ್ಜ್, ಶಿವಶಂಕರರೆಡ್ಡಿ, ರಮೇಶ್ ಜಾರಕಿಹೊಳಿ, ನಾಡಗೌಡ, ವೆಂಕಟರಮಣಪ್ಪ, ಡಿ.ಸಿ.ತಮ್ಮಣ್ಣ, ಸಿ.ಎಸ್. ಪುಟ್ಟರಾಜು ಭಾಗವಹಿಸಿದ್ದರು.
ಕೇಂದ್ರ ನೈಸರ್ಗಿಕ ವಿಕೋಪ ಪರಿಹಾರ ನಿಯಮಾವಳಿಗಳು ಪ್ರಸ್ತುತ ಸನ್ನಿವೇಶಕ್ಕೆ ಪೂರಕವಾಗಿರುವುದಿಲ್ಲ. ಅತ್ಯಲ್ಪ ಪರಿಹಾರ ಮೊತ್ತ ವನ್ನು ನಿಗದಿಪಡಿಸಿದೆ. ಈ ನಿಯಮಾವಳಿಗಳನ್ನು ಬದಲಿಸಿ ಹೆಚ್ಚು ಪರಿಹಾರಕ್ಕೆ ಅವಕಾಶ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ತರಬೇಕು. ಹಾಗೂ ನರೇಗಾ ಯೋಜನೆಯಲ್ಲಿ ರಾಜ್ಯ ಸರ್ಕಾರ ವೆಚ್ಚ ಮಾಡಿರುವ 964 ಕೋಟಿ ರೂ. ಗಳನ್ನು ಮರುಪಾವತಿಸಲು ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.
ಮುಖ್ಯ ಮಂತ್ರಿಗಳ ಮನವಿಗೆ ಪ್ರತಿಕ್ರಿಯಿಸಿದ ಹಲವು ಸಂಸದರು, ಬಾಕಿ ಉಳಿದಿರುವ ಪ್ರಸ್ತಾವನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಸಚಿವರುಗಳು, ಅಗತ್ಯ ಮಾಹಿತಿಯೊಂದಿಗೆ ಸಂಸತ್ ಅಧಿವೇಶನ ನಡೆಯುವ ಸಂದರ್ಭದಲ್ಲಿ ಆಗಮಿಸುವುದು ಸೂಕ್ತ. ಕೇಂದ್ರದ ಸಚಿವರನ್ನು ಸಂಸದರ ನಿಯೋಗದೊಂದಿಗೆ ಭೇಟಿ ಮಾಡಿದಲ್ಲಿ ಪ್ರಸ್ತಾವನೆಗಳಿಗೆ ಶೀಘ್ರ ಪರಿಹಾರ ಸಿಗುತ್ತದೆ. ರಾಜ್ಯಕ್ಕೆ ಸಂಬಂಧಿಸಿದ ಹಲವು ವಿಷಯಗಳ ಬಗ್ಗೆ ಪ್ರಶ್ನೆ ಕೇಳಲು ಅಗತ್ಯ ಮಾಹಿತಿಯನ್ನು ನೀಡಬೇಕೆಂದು ಮನವಿ ಮಾಡಿದರು.
ರಾಜ್ಯಕ್ಕೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಕೇಳಬಹುದಾದ ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಅಗತ್ಯ ಮಾಹಿತಿಗಳನ್ನು ಎಲ್ಲಾ ಸಂಸದರಿಗೆ ಕಳುಹಿಸಿಕೊಡಲು ಮುಖ್ಯ ಮಂತ್ರಿಗಳು ದೆಹಲಿಯ ಸ್ಥಾನಿಕ ಆಯುಕ್ತರಿಗೆ ಸೂಚನೆ ನೀಡಿದರು.
ಬೆಂಬಲ ಬೆಲೆ: ರಾಜ್ಯದಲ್ಲಿ ವ್ಯಾಪಕವಾಗಿ ಬೆಳೆಯುವ ತೊಗರಿ, ಹೆಸರುಕಾಳು, ಕಬ್ಬು, ಭತ್ತ, ಈರುಳ್ಳಿ, ಟೋಮ್ಯಾಟೋ, ತೆಂಗು ಮುಂತಾದ, ಬೆಳೆ ಗಳಿಗೆ ರೈತರಿಗೆ ಸಕಾಲದಲ್ಲಿ ಬೆಂಬಲ ಬೆಲೆ ದೊರಕುತ್ತಿಲ್ಲ. ಈ ಸಂಬಂಧ ಕೇಂದ್ರದ ಸಚಿವರನ್ನು ಭೇಟಿ ಮಾಡಲಾಗಿದೆ. ಸಕಾಲಕ್ಕೆ ಬೆಂಬಲ ಬೆಲೆ ಪ್ರಕಟಿಸುವಂತೆ ಕೇಂದ್ರದ ಗಮನ ಸೆಳೆಯುವಂತೆ ಕೃಷಿ ಸಚಿವರು ಸಂಸದರಿಗೆ ಮನವಿ ಮಾಡಿದರು.












Click it and Unblock the Notifications